ಚಾಮರಾಜನಗರ: ಜಿಲ್ಲಾಡಳಿತದ ವತಿಯಿಂದ ಎಲ್ಲರ ಸಹಕಾರದೊಂದಿಗೆ ಗಣರಾಜ್ಯೋತ್ಸವವನ್ನು ಜನವರಿ ೨೬ರಂದು ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ ಕೈಗೊಳ್ಳಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಜಿಲ್ಲಾಧಿಕಾರಿ ಡಿ.ಎಸ್ ರಮೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ನಡೆದ ಪೂರ್ವಭಾವಿ ಸಭೆಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಕೈಗೊಳ್ಳುವ ಸಂಬಂಧ ತೀರ್ಮಾನ ತೆಗೆದುಕೊಳ್ಳಲಾಯಿತು.
ಗಣರಾಜ್ಯೋತ್ಸವ ಕಾರ್ಯಕ್ರಮ ಆಯೋಜನೆ ಸಂಬಂಧ ಸಭೆಯ ಆರಂಭದಲ್ಲೇ ಮಾತನಾಡಿದ ಮುಖಂಡರು ಎಲ್ಲಾ ಗ್ರಾಮ ಪಂಚಾಯಿತಿ, ಬ್ಯಾಂಕುಗಳಲ್ಲಿ, ಕೇಂದ್ರ ಕಚೇರಿಗಳಲ್ಲಿಯೂ ಕಡ್ಡಾಯವಾಗಿ ಗಣರಾಜ್ಯೋತ್ಸವ ಆಚರಿಸುವ ಸಂಬಂಧ ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಇಡಬೇಕು. ಸಂವಿಧಾನದ ಮಹತ್ವ ತಿಳಿಸಿಕೊಡುವ ಜಾಗೃತಿ ಕಾರ್ಯಕ್ರಮಗಳು ಉಪನ್ಯಾಸ ಏರ್ಪಡಿಸಬೇಕು ಎಂದು ತಿಳಿಸಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜನೆಯಾಗುವ ಗಣರಾಜ್ಯೋತ್ಸವ ವೇಳೆ ದೇಶಭಕ್ತಿ ಬಿಂಬಿಸುವ ಕಾರ್ಯಕ್ರಮಗಳಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೂ ಆದ್ಯತೆ ಇರಬೇಕು. ಪಥ ಸಂಚಲನ, ಇತರೆ ಕಾರ್ಯಕ್ರಮಗಳಿಗೆ ಶಾಲಾ ಮಕ್ಕಳನ್ನು ಕರೆತಂದ ನಂತರ ಪುನಹ ಜವಾಬ್ದಾರಿಯುತವಾಗಿ ವಾಪಸ್ಸು ಕರೆದೊಯ್ಯಬೇಕು ಎಂಬುದು ಸೇರಿದಂತೆ ಕಾರ್ಯಕ್ರಮ ಏರ್ಪಾಡು ಸಂಬಂಧ ಹಲವು ಸಲಹೆಗಳನ್ನು ಮುಖಂಡರು ನೀಡಿದರು.
ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಮಾತನಾಡಿ ಗಣರಾಜ್ಯೋತ್ಸವ ಆಚರಣೆ ಸಂಬಂಧ ನೇಮಕವಾಗಿರುವ ಅಧಿಕಾರಿಗಳ ಸಮಿತಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿ ಎಲ್ಲ ಸಿದ್ದತೆಗಳನ್ನು ಸಮರ್ಪಕವಾಗಿ ಕೈಗೊಳ್ಳಲಾಗುತ್ತದೆ. ದೇಶಭಕ್ತಿ ಬಿಂಬಿಸುವ ಅರ್ಥಪೂರ್ಣ ಕಾರ್ಯಕ್ರಮಗಳು ಮೂಡಿಬರಬೇಕು. ಈ ನಿಟ್ಟಿನಲ್ಲಿ ಮಕ್ಕಳನ್ನು ಸಿದ್ದಗೊಳಿಸಬೇಕು ಎಂದರು.
ಬ್ಯಾಂಕುಗಳು, ಗ್ರಾಮ ಪಂಚಾಯಿತಿಗಳಲ್ಲೂ ಗಣರಾಜ್ಯೋತ್ಸವ ಆಚರಣೆಗೆ ನಿರ್ದೇಶನ ನೀಡಲಾಗುವುದು. ರಾಷ್ಟ್ರೀಯ ಹಬ್ಬಗಳ ಆಚರಣೆ ಸಂದರ್ಭದಲ್ಲಿ ಅನುಸರಿಸಬೇಕಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಸೂಚಿಸಲಾಗುವುದು. ಗಣರಾಜ್ಯೋತ್ಸವ ಆಚರಣೆ ಕಾರ್ಯಕ್ರಮ ಯಶಸ್ವಿಗೆ ಎಲ್ಲ ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಸಂರಕ್ಷಣಾಧಿಕಾರಿ ದೀಪ ಕಂಟ್ರಾಕ್ಟರ್, ಡಿವೈಎಸ್ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ತಹಶೀಲ್ದಾರ್ ಬಸವರಾಜು, ಸಂಘಟನೆಗಳ ಮುಖಂಡರಾದ ಶಾ. ಮುರಳಿ, ಚಾ.ರಂ ಶ್ರೀನಿವಾಸಗೌಡ, ನಿಜಧ್ವನಿ ಗೋವಿಂದರಾಜು, ಚಾ.ಗು. ನಾಗರಾಜು, ಜಿ. ಬಂಗಾರು, ರಾಮಸಮುದ್ರ ಸುರೇಶ್, ಸಿ.ಎಂ. ನರಸಿಂಹಮೂರ್ತಿ, ಸುರೇಶ್ ವಾಜಪೇಯಿ, ಗು. ಪುರುಷೋತ್ತಮ್, ನಾರಾಯಣ, ಪಣ್ಯದಹುಂಡಿ ರಾಜು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
