ಚಾಮರಾಜನಗರ:ಜಿಲ್ಲೆಯಲ್ಲಿ ಕೈಗೆತ್ತಿಕೊಂಡಿರುವ ಕುಡಿಯುವ ನೀರಿನ ಯೋಜನೆಯ ವಿವಿಧ ಕಾಮಗಾರಿಗಳನ್ನು ವಿಳಂಬ ಮಾಡದೇ ತ್ವರಿತವಾಗಿ ಪೂರ್ಣಗೊಳಿಸುವಂತೆ ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೆಶಕರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಆಡಳಿತ ಅಧಿಕಾರಿ ಬಿ.ಬಿ. ಕಾವೇರಿ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿಂದು ವಿವಿಧ ಇಲಾಖೆಗಳ ಅಭಿವೃದ್ದಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಲಜೀವನ್ ಮಿಷನ್ ಯೋಜನೆಯಡಿ ಬಾಕಿ ಇರುವ ಎರಡನೇ ಬ್ಯಾಚ್‌ನ ಕುಡಿಯುವ ನೀರಿನ ಕಾಮಗಾರಿ ವೇಗವಾಗಿ ಪೂರ್ಣ ಮಾಡಬೇಕು. ಉಳಿದ ಮುಂದಿನ ಹಂತದ ಬ್ಯಾಚ್ ಕಾಮಗಾರಿಗೂ ಬಾಕಿ ಇರುವ ಟೆಂಡರ್ ಪ್ರಕ್ರಿಯೆಯನ್ನು ಕೈಗೊಂಡು ನಿಗದಿತ ವೇಳೆಗೆ ಕುಡಿಯುವ ನೀರಿನ ಕೆಲಸಗಳು ಆಗುವಂತೆ ನೋಡಿಕೊಳ್ಳಬೇಕು. ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನ ಸಹ ಶೀಘ್ರವಾಗಿ ಮುಗಿಯಬೇಕು ಎಂದು ಕಾವೇರಿ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ವತಿಯಿಂದ ನಿರ್ಮಾಣವಾಗುತ್ತಿರುವ ರಸ್ತೆ, ಶಾಲೆ, ಅಂಗನವಾಡಿ ಇನ್ನಿತರ ಕಟ್ಟಡ ಕಾಮಗಾರಿಗಳು ಸಹ ವೇಗವಾಗಿ ಪೂರ್ಣಗೊಳಿಸಬೇಕು. ಯಾವುದೇ ಟೆಂಡರ್ ಪ್ರಕ್ರಿಯೆಯನ್ನು ಬಾಕಿ ಉಳಿಸಿಕೊಳ್ಳಬಾರದು. ಆಯಾ ಇಲಾಖೆಗಳು ಮುತುವರ್ಜಿ ವಹಿಸಿ ಕಾಮಗಾರಿಯನ್ನು ಕಾಲಮಿತಿಯೊಳಗೆ ನಿರ್ವಹಿಸಲು ಮುಂದಾಗಬೇಕು. ಗುಣಮಟ್ಟದ ಕಾಮಗಾರಿ ನಡೆಯುವಂತೆ ಉಸ್ತುವಾರಿ ವಹಿಸಬೇಕು ಎಂದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಕಾರ್ಯಕ್ರಮಗಳ ಪ್ರಗತಿ ಹೆಚ್ಚಿನ ಮಟ್ಟದಲ್ಲಿ ಆಗಬೇಕು. ಪರಿಶಿಷ್ಟರ ಕಾರ್ಯಕ್ರಮಗಳ ಅನುದಾನ ಆಯಾ ಸಮುದಾಯಗಳ ಅಭಿವೃದ್ದಿಗಾಗಿ ಸಂಪೂರ್ಣ ವಿನಿಯೋಗವಾಗಬೇಕು. ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು, ವಿವಿಧ ಇಲಾಖೆಗಳು ನಿರ್ವಹಿಸಿರುವ ಸಾಧನೆಗಳ ಕುರಿತ ಪ್ರಗತಿ ಪರಿಶೀಲಿಸಬೇಕು ಎಂದು ಆಡಳಿತಾಧಿಕಾರಿಗಳು ನಿರ್ದೇಶನ ನೀಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ವೇಳೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಕಲಿಕೆ ಬಗ್ಗೆ ವಿವರ ಪಡೆದ ಆಡಳಿತಾಧಿಕಾರಿಗಳು ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಫಲಿತಾಂಶಕ್ಕಾಗಿ ಅಧ್ಯಯನ ಕಡೆ ಹೆಚ್ಚು ಗಮನ ನೀಡುವಂತಾಗಬೇಕು. ವಿದ್ಯಾರ್ಥಿಗಳಿಗೆ ಉತ್ತೇಜನ ನೀಡಬೇಕಿದೆ. ಶಿಕ್ಷಣ ಇಲಾಖೆ ವಿಶೇಷ ಆಸಕ್ತಿ ವಹಿಸಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ಮಾತನಾಡಿ ಕ್ರಿಯಾ ಯೋಜನೆ ಅನುಸಾರ ಎಲ್ಲಾ ಕಾರ್ಯಕ್ರಮಗಳು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಬೇಕಿದೆ. ಎಲ್ಲಿಯೂ ವಿಳಂಬ ಧೋರಣೆ ಅನುಸರಿಸದೇ ನಿಯಮ ಪ್ರಕಾರ ಅಭಿವೃದ್ದಿ ಕಾಮಗಾರಿ ನಿರ್ವಹಿಸಬೇಕಿದೆ. ಇಲಾಖೆ ಅಧಿಕಾರಿಗಳು ಸಂಪೂರ್ಣವಾಗಿ ಯೋಜನೆ ಸೌಲಭ್ಯಗಳನ್ನು ಜನರಿಗೆ ತಲುಪಿಸಬೇಕು ಎಂದು ತಿಳಿಸಿದರು.
ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಶೇಷಚೇತನರ ಕಲ್ಯಾಣ, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರ ಕಲ್ಯಾಣ, ವಸತಿ ಯೋಜನೆ, ಸಾಮಾಜಿಕ ಅರಣ್ಯ, ರೇಷ್ಮೆ, ಮೀನುಗಾರಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಸೇರಿದಂತೆ ಇತರೆ ಇಲಾಖೆಗಳ ಪ್ರಗತಿ ಪರಿಶೀಲಿಸಲಾಯಿತು.
ಜಿಲ್ಲಾ ಪಂಚಾಯತ್ ಕಾರ್ಯದರ್ಶಿ ಧರಣೇಶ್, ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.