ಚಾಮರಾಜನಗರ: ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಸಾಮರ್ಥ್ಯ ಹಾಗೂ ಮನಸ್ಸಿನ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಜಿ. ನಿಜಗುಣರಾಜು ಅವರು ತಿಳಿಸಿದರು. ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಿದ್ದ ಗ್ರಾಮೀಣ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಬಲಗೊಳ್ಳಲು ಸಹಕಾರಿಯಾಗಲಿದೆ. ಹೀಗಾಗಿ ಕ್ರೀಡೆಗಳ ಬಗ್ಗೆ ಹೆಚ್ಚು ಆಸಕ್ತಿ ವಹಿಸಬೇಕು. ಪ್ರತಿಯೊಬ್ಬರು ಉತ್ಸಾಹದಿಂದ ಆಟೋಟಗಳಲ್ಲಿ ಪಾಲ್ಗೊಳ್ಳಬೇಕೆಂದು ಸಲಹೆ ಮಾಡಿದರು. ಇತ್ತೀಚಿನ ದಿನಗಳಲ್ಲಿ ಅನೇಕ ಗ್ರಾಮೀಣ ಕ್ರೀಡೆಗಳು ಕಣ್ಮರೆಯಾಗುತ್ತಿವೆ. ಗ್ರಾಮೀಣ ಆಟಗಳನ್ನು ಉತ್ತೇಜಿಸಿ ಪೋಷಿಸಬೇಕಿದೆ. ಇಂತಹ ನಿಟ್ಟಿನಲ್ಲಿ ಸರ್ಕಾರ ಗ್ರಾಮೀಣ ಕ್ರೀಡಾಕೂಟಗಳನ್ನು ಆಯೋಜಿಸಿ ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ ಮಾಡಿಕೊಡುತ್ತಿದೆ. ಗ್ರಾಮ, ತಾಲೂಕು, ಜಿಲ್ಲಾ ಮಟ್ಟದಲ್ಲಿ ಗ್ರಾಮೀಣ ಕ್ರೀಡಾಕೂಟ ನಡೆಸಲಾಗುತ್ತಿದೆ ಎಂದು ನಿಜಗುಣರಾಜು ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ ಅವರು ಮಾತನಾಡಿ ಯುವಜನರು ಇತ್ತೀಚಿನ ದಿನಗಳಲ್ಲಿ ಮೊಬೈಲ್, ಟಿವಿ ಗೀಳಿಗೆ ಸಿಲುಕಿದ್ದಾರೆ. ಇದರಿಂದ ಹೊರಬಂದು ಕ್ರೀಡೆಗಳತ್ತ ಒಲವು ತೋರಬೇಕು. ಶಾಲಾ ಮಟ್ಟದಿಂದಲೇ ದೇಸಿ ಕ್ರೀಡೆಗಳನ್ನು ಆಯೋಜಿಸಿ ಪ್ರೋತ್ಸಾಹ ನೀಡಬೇಕೆಂದು ತಿಳಿಸಿದರು. ನಗರಸಭೆ ಅಧ್ಯಕ್ಷರಾದ ಆಶಾ ನಟರಾಜು, ಸದಸ್ಯರಾದ ಚಂದ್ರಶೇಖರ್, ಕ್ರೀಡಾಂಗಣ ಸಮಿತಿ ಸದಸ್ಯರಾದ ಶ್ರೀನಿವಾಸಪ್ರಸಾದ್, ಯುವ ಸಬಲೀಕರಣ ಮತ್ತು ಕ್ರಿಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಆರ್. ಅನಿತಾ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.