ಚಾಮರಾಜನಗರ: ಜೀವದ ಹಂಗು ತೊರೆದು ಸ್ವಯಂಪ್ರೇರಿತರಾಗಿ ಪೊಲೀಸರೊಂದಿಗೆ ಕಾರ್ಯನಿರ್ವಹಿಸುವ ಗೃಹರಕ್ಷಕರ ಸೇವಾ ಮನೋಭಾವ ಶ್ಲಾಘನೀಯವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್ ಅವರು ತಿಳಿಸಿದರು
ನಗರದ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿಂದು ಜಿಲ್ಲಾ ಗೃಹರಕ್ಷಕದಳದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಖಿಲ ಭಾರತ ಗೃಹರಕ್ಷಕದಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗೃಹರಕ್ಷಕರು ಪೊಲೀಸರಂತೆ ವೃತ್ತಿ ಸಮಯದಲ್ಲಿ ಸಾಕಷ್ಟು ಕಠಿಣ ಸಂದರ್ಭಗಳನ್ನು ಎದುರಿಸಬೇಕಾಗುತ್ತದೆ. ಯಾವುದೇ ಜೀವನ ಭದ್ರತೆಯಲ್ಲದೇ ಸಂಪೂರ್ಣವಾಗಿ ವೃತ್ತಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಗೃಹರಕ್ಷಕರ ಸೇವಾ ಮನೋಭಾವ ಇತರರಿಗೂ ಮಾದರಿಯಾಗಿದೆ. ಪೊಲೀಸ್ ಇಲಾಖೆಗೆ ನೀಡಿರುವ ಎಲ್ಲಾ ಸೌಲಭ್ಯಗಳನ್ನು ಗೃಹರಕ್ಷಕರು ಪಡೆಯಲು ಸಹಕಾರ ನೀಡಲಾಗುವುದು ಎಂದರು.
ಜಿಲ್ಲೆಯಲ್ಲಿ ನಡೆಯುವ ಧಾರ್ಮಿಕ ಜಾತ್ರಾ ಕಾರ್ಯಕ್ರಮಗಳು, ಗಣ್ಯರು ಆಗಮಿಸುವ ವೇಳೆ ಹೆಚ್ಚಿನ ಭದ್ರತೆಗಾಗಿ ಪೊಲೀಸರೊಂದಿಗೆ ಗೃಹರಕ್ಷಕರನ್ನು ನಿಯೋಜನೆಗೊಳಿಸಲಾಗುತ್ತದೆ. ಯಾವುದೇ ಗೃಹರಕ್ಷಕರು ಕೌಟುಂಬಿಕ ಸಮಸ್ಯೆಗಳನ್ನು ಲೆಕ್ಕಿಸದೇ ಸೇವಾ ಕಾರ್ಯದಲ್ಲಿ ಪೊಲೀಸರೊಂದಿಗೆ ಕೈಜೋಡಿಸಲಿದ್ದಾರೆ. ಅವರ ಸೇವಾ ಕಾರ್ಯ ಮೆಚ್ಚುವಂತದ್ದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್ ಅವರು ತಿಳಿಸಿದರು.
ಇದೇ ವೇಳೆ ಜಿಲ್ಲಾ ಅಗ್ನಿ ಶಾಮಕ ಅಧಿಕಾರಿ ಕೆ.ಪಿ. ನವೀನ್ ಕುಮಾರ್, ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಬೆಂಗಳೂರಿನ ಐಟಿಐ ಲಿಮಿಟೆಡ್ ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ ಡಾ. ಎಂ. ಪ್ರಸನ್ನ ಮತ್ತು ಸೇವೆಯಲ್ಲಿ ಉತ್ತಮ ಸಾಧನೆಗೈದ ಗೃಹರಕ್ಷಕರನ್ನು ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೃಹರಕ್ಷಕದಳದ ಜಿಲ್ಲಾ ಕಮಾಂಡಂಟ್ ಬಿ.ಎಸ್. ಬಸವರಾಜು ವಹಿಸಿದ್ದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್ರಾಜ್, ಸಾರಿಗೆ ಇಲಾಖೆ ಮೋಟಾರು ವಾಹನ ನಿರೀಕ್ಷಕರಾದ ಯೋಗೀಶ್, ಕೆ.ವಿ. ನಾಗರಾಜು, ಇತರರು ಕಾರ್ಯಕ್ರಮದಲ್ಲಿ ಇದ್ದರು.
