ಚಾಮರಾಜನಗರ: ಜನರ ಸಮಸ್ಯೆ ಕುಂದು ಕೊರತೆಗಳ ಸಂಬಂಧ ಸ್ವೀಕರಿಸಲಾಗಿರುವ ಅರ್ಜಿಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಿ ಶೀಘ್ರ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮುಂದಾಗಬೇಕೆಂದು ಶಾಸಕರಾದ ಸಿ.ಎಸ್. ನಿರಂಜನ್ ಕುಮಾರ್ ಅವರು ತಿಳಿಸಿದರು.
ಗುಂಡ್ಲುಪೇಟೆ ತಾಲೂಕಿನ ನಿಟ್ರೆ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿಂದು ಆಯೋಜಿಸಲಾಗಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 
ಜನರ ಬಳಿಗೆ ತೆರಳಿ ಅವರ ಸಮಸ್ಯೆ ಕುಂದು ಕೊರತೆ ಆಲಿಸಿ ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹರಿಸುವ ಉದ್ದೇಶದೊಂದಿಗೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಸರ್ಕಾರ ಚಾಲನೆ ನೀಡಿದೆ. ಸಭೆಯಲ್ಲಿ ಹಲವಾರು ಸಮಸ್ಯೆಗಳನ್ನು ಜನರು ಪ್ರಸ್ತಾಪಿಸಿದ್ದಾರೆ. ಅರ್ಜಿಗಳನ್ನು ಸಲ್ಲಿಸಿದ್ದಾರೆ. ಈ ಅರ್ಜಿಗಳಿಗೆ ಸೂಕ್ತ ಪರಿಹಾರ ನೀಡಲು ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕೆಂದು ನಿರಂಜನ್ ಕುಮಾರ್ ಅವರು ತಿಳಿಸಿದರು. 
ಜಿಲ್ಲಾ ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಗ್ರಾಮಗಳಲ್ಲೇ ಜನರ ಸಮಸ್ಯೆಗಳನ್ನು ಆಲಿಸಿ ಅರ್ಜಿಗಳನ್ನು ಸ್ವೀಕರಿಸಿ ಪರಿಹರಿಸುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಅನುಕೂಲವಾಗಿದೆ. ಜನರು ಕಚೇರಿಗಳಿಗೆ ಅಲೆದಾಡುವುದು ತಪ್ಪಲಿದೆ. ಕಂದಾಯ ದಾಖಲೆಗಳು, ಪಿಂಚಣಿ ಆದೇಶ ಸೇರಿದಂತೆ ಇತರೆ ಸೌಲಭ್ಯಗಳನ್ನು ಮನೆ ಬಾಗಿಲಿಗೆ ತಲುಪಿಸುವ ಕಾರ್ಯ ಮಾಡಲಾಗುತ್ತಿದೆ. ದೂರವಾಣಿ ಮೂಲಕವು ಕರೆ ಮಾಡಿ ದಾಖಲೆಗಳನ್ನು ಒದಗಿಸಿ ೭೨ ಗಂಟೆಯೊಳಗೆ ಪಿಂಚಣಿ ಮಂಜೂರಾತಿ ಆದೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಶಾಸಕರು ತಿಳಿಸಿದರು. 
ಬಗರ್ ಹುಕುಂ ಸಾಗುವಳಿ ಚೀಟಿ ಕೋರಿ ೪ ಸಾವಿರ ಅರ್ಜಿಗಳು ಸಲ್ಲಿಕೆಯಾಗಿದ್ದವು. ಇವುಗಳನ್ನು ಪರಿಶೀಲಿಸಿ ೨ ಸಾವಿರ ಅರ್ಹ ಅರ್ಜಿಗಳಿಗೆ ಸಂಬಂಧಿಸಿದಂತೆ ಸಾಗುವಳಿ ಚೀಟಿ ವಿತರಿಸುವ ಸಂಬಂಧ ಕ್ರಮ ವಹಿಸಲಾಗಿದೆ. ನಿನ್ನೆ ೧೫೦ ಮಂದಿಗೆ ಸಾಗುವಳಿ ಚೀಟಿ ವಿತರಿಸಲಾಗಿದೆ. ೯೪ ಸಿ ರಡಿಯಲ್ಲಿ ಇಂದು ಸಹ ಹಕ್ಕುಪತ್ರ ವಿತರಿಸಲಾಗುತ್ತಿದೆ ಎಂದರು.
ಇಂದು ನಡೆದ ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಲಾಗಿರುವ ಸಮಸ್ಯೆಗಳನ್ನು ಆಲಿಸಲಾಗಿದೆ. ಹಾಲಹಳ್ಳಿ ನಿಟ್ರೆ  ೪ ಕಿ.ಮೀ ರಸ್ತೆ ಹಾಗೂ ರಂಗನಾಥಪುರ ರಸ್ತೆ ಅಭಿವೃದ್ದಿಗೂ ಅನುದಾನ ಸೇರಿಸಲಾಗಿದೆ. ನಿಟ್ರೆ ಗ್ರಾಮದ ರಸ್ತೆ ಮತ್ತು ಚರಂಡಿ ಕಾರ್ಯಗಳಿಗೆ ೫೦ ಲಕ್ಷ ರೂ. ನೀಡಲಾಗಿದೆ. ಹಂತ ಹಂತವಾಗಿ ಎಲ್ಲಾ ಕಾರ್ಯಗಳನ್ನು ನಿರ್ವಹಿಸಲಾಗುತ್ತಿದೆ ಎಂದು ತಿಳಿಸಿದರು.
ನಿಟ್ರೆಯಲ್ಲಿ ಗ್ರಾಮ ಒನ್ ಕೇಂದ್ರ ತೆರಯಲಾಗಿದೆ. ಇಲ್ಲಿ ನಾಡಕಚೇರಿಯಲ್ಲಿ ಇದ್ದ ಹಲವಾರು ಸೌಲಭ್ಯಗಳಿಗೆ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ. ಪ್ರಮಾಣ ಪತ್ರಗಳನ್ನು ಪಡೆಯಬಹುದಾಗಿದೆ. ಜನತೆ ಸ್ಥಳೀಯವಾಗಿ ಕಲ್ಪಿಸಲಾಗಿರುವ ವ್ಯವಸ್ಥೆಯನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ಶಾಸಕರಾದ ಸಿ.ಎಸ್. ನಿರಂಜನ್ ಕುಮಾರ್ ಅವರು ತಿಳಿಸಿದರು. 
ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಮಾತನಾಡಿ ಜನರಿಂದ ಸಾಕಷ್ಟು ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಹಲವು ಸಮಸ್ಯೆಗಳನ್ನು ಪ್ರಸ್ತಾಪಿಸಿದ್ದಾರೆ. ಆಯಾ ಇಲಾಖೆಗಳಿಗೆ ಅರ್ಜಿಗಳನ್ನು ಕಳುಹಿಸಿ ಅಧಿಕಾರಿಗಳು ಶೀಘ್ರವೇ ನಿಯಮಾನುಸಾರ ಪರಿಹರಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು. ಅರ್ಜಿಗಳ ಸ್ವೀಕಾರಕ್ಕಾಗಿ ಸಂಜೆಯವರೆಗೂ ಪ್ರತ್ಯೇಕ ಕೌಂಟರ್ ಅನ್ನು ತೆರೆಯಲಾಗಿದೆ. ಯಾವುದೇ ಸಮಸ್ಯೆಗಳಿದ್ದಲ್ಲಿ ಜನರು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು. 
ಕಾರ್ಯಕ್ರಮದ ಆರಂಭದಲ್ಲಿಯೇ ಶಾಸಕರಾದ ಸಿ.ಎಸ್. ನಿರಂಜನ್ ಕುಮಾರ್ ಹಾಗೂ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರ ಸಮ್ಮುಖದಲ್ಲಿ ಜನರು ತಮ್ಮ ಸಮಸ್ಯೆ ಅಹವಾಲುಗಳನ್ನು ಹೇಳಿಕೊಂಡರು. ರಸ್ತೆ, ಆಸ್ಪತ್ರೆ, ಬಸ್ ಸೌಕರ್ಯ, ಬೆಳೆ ವಿಮೆ ಪರಿಹಾರ, ವಿದ್ಯುತ್ ಕಂಬಗಳ ಅಳವಡಿಕೆ, ಅಕ್ರಮ ಗಣಿಗಾರಿಕೆ, ಸಮುದಾಯ ಭವನಗಳ ದುರಸ್ತಿ, ಹಾಸ್ಟೆಲ್ ಸೌಲಭ್ಯ, ಶಾಲಾ ಕೊಠಡಿಗಳು, ವಸತಿ ಸೌಲಭ್ಯ, ಕೃಷಿ ಇಲಾಖೆಯ ಸವಲತ್ತುಗಳು, ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ಪಾವತಿ, ಜಲ ಜೀವನ್ ಮಿಷನ್ ಸಮರ್ಪಕ ಅನುಷ್ಠಾನ, ಖಾತೆ ಮಾಡಿಕೊಡುವುದು ಸೇರಿದಂತೆ ಹಲವು ಸಮಸ್ಯೆಗಳನ್ನು ಜನರು ಮುಂದಿಟ್ಟರು. 
ಹಲವು ಸಮಸ್ಯೆಗಳಿಗೆ ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ಸ್ಥಳದಲ್ಲಿಯೇ ಅಧಿಕಾರಿಗಳಿಗೆ ಸೂಚನೆ ನೀಡಿ ಪರಿಹರಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುವಂತೆ ತಿಳಿಸಿದರು.
ತಹಶೀಲ್ದಾರ್ ಸಿ.ಜಿ. ರವಿಶಂಕರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಇದೇ ಸಂದರ್ಭದಲ್ಲಿ ಹಕ್ಕು ಪತ್ರ ವಿತರಣೆ ಮಾಡಲಾಯಿತು. ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಿಸಲಾಯಿತು. ರಕ್ತದಾನ ಶಿಬಿರದಲ್ಲಿ ರಕ್ತದಾನ ಮಾಡಿದವರಿಗೆ ಪ್ರಶಂಸನಾ ಪತ್ರ ನೀಡಲಾಯಿತು. ಕಾರ್ಯಕ್ರಮಕ್ಕೂ ಮೊದಲು ವಿವಿಧ ಇಲಾಖೆಗಳು ಏರ್ಪಡಿಸಿದ್ದ ಮಾಹಿತಿ ಮಳಿಗೆಗಳನ್ನು ಉದ್ಘಾಟಿಸಲಾಯಿತು. ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ, ಜಾನುವಾರು ಆರೋಗ್ಯ ಶಿಬಿರ ಏರ್ಪಾಡು ಮಾಡಲಾಗಿತ್ತು. 
ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮರಿಸ್ವಾಮಿ ಸಿದ್ದೇಗೌಡ, ಉಪಾಧ್ಯಕ್ಷರಾದ ಲಕ್ಷ್ಮಮ್ಮ ದುಂಡನಾಯಕ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ನಾಗರಾಜು, ಬಗರ್ ಹುಕುಂ ಸಮಿತಿ ಸದಸ್ಯರಾದ ನಾಗರಾಜಪ್ಪ, ಜಿಲ್ಲಾ ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.