ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನ ಜಾಗೇರಿ ಸರ್ವೆ ನಂ ೧೭೪ರಲ್ಲಿ ಹಕ್ಕುಪತ್ರ ಸಂಬಂಧ ಕಂದಾಯ, ಅರಣ್ಯ ಇಲಾಖೆ ಹಾಗೂ ಭೂ ಮಾಪನ ಇಲಾಖೆಯವರು ಜಂಟಿ ಸರ್ವೆ ಕಾರ್ಯವನ್ನು ೨೦ ದಿನಗಳೊಳಗೆ ನಿರ್ವಹಿಸಿ ಫೆಬ್ರವರಿ ೧೦ರೊಳಗೆ ಸೂಕ್ತ ಪ್ರಸ್ತಾವನೆ ಸಲ್ಲಿಸುವಂತೆ ವಸತಿ, ಮೂಲ ಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಸೂಚನೆ ನೀಡಿದ್ದಾರೆ.
ಬೆಂಗಳೂರಿನ ವಿಧಾನಸೌಧದ ಸಮಿತಿ ಕೊಠಡಿ ಸಭಾಂಗಣದಲ್ಲಿ ಬುಧವಾರ (ಜ.೧೧) ನಡೆದ ಜಾಗೇರಿ ರಿ.ಸರ್ವೆ ನಂ ೧೭೪ರಲ್ಲಿನ ಜಮೀನಿನ ಹಕ್ಕುಪತ್ರ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಾಗೇರಿ ಸರ್ವೆ ನಂ ೧೭೪ರಲ್ಲಿ ಹಲವಾರು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ಗ್ರಾಮಸ್ಥರಿಗೆ ಈವರೆಗೆ ಯಾವುದೇ ಹಕ್ಕುಪತ್ರ ನೀಡಿಲ್ಲ. ಮುಖ್ಯಮಂತ್ರಿಯವರು ಇತ್ತೀಚೆಗೆ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ರೈತ ಮುಖಂಡರು ಸ್ಥಳೀಯ ಗ್ರಾಮಸ್ಥರು ಈ ಸಂಬಂಧ ಅಹವಾಲು ಸಲ್ಲಿಸಿದ್ದಾರೆ. ಅರಣ್ಯ, ಕಂದಾಯ ಹಾಗೂ ಭೂ ಮಾಪನ ಇಲಾಖೆ ಅತೀ ಜರೂರಾಗಿ ಕ್ರಮ ತೆಗೆದುಕೊಳ್ಳಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕಂದಾಯ, ಅರಣ್ಯ ಹಾಗೂ ಸರ್ವೆ ಇಲಾಖೆಯವರು ಜಂಟಿ ಸರ್ವೆ ಕಾರ್ಯ ನಿರ್ವಹಿಸಬೇಕು. ಕೊಳ್ಳೇಗಾಲ ತಾಲೂಕಿನಲ್ಲಿ ಭೂ ಮಾಪನ ಕಂದಾಯ ಇಲಾಖೆಯ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಲಭ್ಯವಿಲ್ಲದಿದ್ದರೆ ಇತರೆ ತಾಲೂಕಿನ ಸಿಬ್ಬಂದಿಯನ್ನು ನಿಯೋಜಿಸಿಕೊಂಡು ಶೀಘ್ರವಾಗಿ ಜಂಟಿ ಸರ್ವೆ ಕಾರ್ಯ ಕೈಗೊಳ್ಳಬೇಕು. ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಅಳತೆ ಮತ್ತು ಮ್ಯಾಪಿಂಗ್ ಕಾರ್ಯವನ್ನು ನಿರ್ವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು.
ಸ್ಥಳೀಯ ಗ್ರಾಮಸ್ಥರು, ರೈತ ಮುಖಂಡರ ಮನವಿಗೆ ತುರ್ತಾಗಿ ಸ್ಪಂದಿಸಬೇಕಿದೆ. ಈ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲ ಕ್ರಮಗಳನ್ನು ವಹಿಸುವಂತೆ ವಸತಿ, ಮೂಲ ಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು.
ಶಾಸಕರಾದ ಆರ್. ನರೇಂದ್ರ, ಎನ್. ಮಹೇಶ್, ಸರ್ಕಾರದ ಉನ್ನತ ಅಧಿಕಾರಿಗಳು, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್‌ಕುಮಾರ್, ಉಪವಿಭಾಗಾಧಿಕಾರಿ ಗೀತಾ ಹುಡೇದ, ಕೊಳ್ಳೇಗಾಲ ತಹಶೀಲ್ದಾರ್ ಮಂಜುಳಾ ಸೇರಿದಂತೆ ಇತರೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.