ಚಾಮರಾಜನಗರ: ಚೈನ್ ಮಾದರಿ ಭತ್ತದ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ೨೪೦೦ ರೂ, ಟೈರ್ (ಸಾಮಾನ್ಯ) ಮಾದರಿ ಭತ್ತದ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ೧೫೦೦ ರೂ ನಿಗದಿಪಡಿಸಲಾಗಿದೆ.
ಜಿಲ್ಲೆಯಲ್ಲಿ ೨೦೨೨-೨೩ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ೧೨,೪೯೦ ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಬೆಳೆ ಬೆಳೆಯಲಾಗಿದ್ದು ಈಗಾಗಲೇ ಕಟಾವು ಪ್ರಾರಂಭವಾಗಿದೆ. ಕಳೆದ ಸಾಲಿನಲ್ಲಿ ಜಿಲ್ಲೆಯಲ್ಲಿ ಭತ್ತ ಕಟಾವು ಯಂತ್ರದಿಂದ ಕಟಾವು ಮಾಡಲು ಪ್ರತಿ ಗಂಟೆಗೆ ಚೈನ್ ಮಾದರಿಗೆ ೨,೨೦೦ ರೂ. ದರ ನಿಗದಿಪಡಿಸಲಾಗಿತ್ತು. ಆದರೆ ಕಟಾವು ಯಂತ್ರದ ಸರಬರಾಜುದಾರರು ರೈತರಿಂದ ಹೆಚ್ಚಿನ ಹಣವನ್ನು ಪಡೆಯುತ್ತಿರುವುದಾಗಿ ದೂರು ಬಂದಿತ್ತು. ಇದರಿಂದ ರೈತರಿಗೆ ಸಂಕಷ್ಟದ ಸಮಯದಲ್ಲಿ ಹೆಚ್ಚಿನ ಆರ್ಥಿಕ ಹೊರೆಯಾಗಿದೆ. ಈ ಹಿನ್ನೆಲೆಯಲ್ಲಿ ಕಳೆದ ಗುರುವಾರ (ಡಿ.೮) ದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಯವರಾದ ಡಿ.ಎಸ್. ರಮೇಶ್ ಅವರ ಅಧ್ಯಕ್ಷತೆಯಲ್ಲಿ ರೈತ ಮುಖಂಡರು ಕೃಷಿ ಇಲಾಖೆ ಅಧಿಕಾರಿಗಳ ಸಭೆ ನಡೆದಿದ್ದು ಈ ಭತ್ತ ಕಟಾವು ಯಂತ್ರದ ದರ ಸಂಬಂಧ ಚರ್ಚಿಸಲಾಗಿದೆ.
ಸಭೆಯಲ್ಲಿ ಭತ್ತ ಕಟಾವು ಯಂತ್ರದ ಸಂಬಂಧ ರೈತ ಮುಖಂಡರಿಂದ ಅಭಿಪ್ರಾಯ ಪಡೆಯಲಾಯಿತು. ಭತ್ತ ಕಟಾವು ಯಂತ್ರದ ಏಜೆಂಟರಿಂದಲೂ ಅಭಿಪ್ರಾಯ ಪಡೆಯಲಾಯಿತು. ಅತಿವೃಷ್ಠಿ ಸಂಕಷ್ಟದ ಸಂದರ್ಭದಲ್ಲಿ ಕಟಾವು ಯಂತ್ರದ ಮಾಲಿಕರು ಸಹಕರಿಸಬೇಕು ಎಂದು ತಿಳಿಸಲಾಗಿದೆ.
ಸಭೆಯಲ್ಲಿ ರೈತ ಮುಖಂಡರಾದ ಹೊನ್ನೂರು ಪ್ರಕಾಶ್, ಡಾ. ಗುರುಪ್ರಸಾದ್, ಅಣಗಳ್ಳಿ ಬಸವರಾಜು, ದಶರಥ್, ಇನ್ನಿತರ ರೈತ ಮುಖಂಡರು, ರೈತ ಸಂಘಟನೆಗಳ ಪ್ರತಿನಿಧಿಗಳು, ಜಂಟಿ ಕೃಷಿ ನಿರ್ದೇಶಕರಾದ ಮಧುಸೂದನ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಸುಧಾಮಣಿ ಸೇರಿದಂತೆ ಕೃಷಿ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
