ಚಾಮರಾಜನಗರ: ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಪೂರ್ವ ಸಿದ್ದತೆ ಹಾಗೂ ಮಾದರಿ ನೀತಿ ಸಂಹಿತೆ ಪಾಲನೆ ಕಾರ್ಯಗಳನ್ನು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಇಂದು ಪರಿಶೀಲಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಪೂರ್ವ ಸಿದ್ದತೆ ಹಾಗೂ ಮಾದರಿ ನೀತಿಸಂಹಿತೆ ಪಾಲನೆ ಕುರಿತ ನೋಡಲ್ ಅಧಿಕಾರಿಗಳ ಸಭೆ ನಡೆಸಿ ನಿರ್ವಹಿಸಲಾಗುತ್ತಿರುವ ಕಾರ್ಯಗಳ ಪರಿಶೀಲನೆ ಮಾಡಿದರು.
ಮತದಾನ ಕೇಂದ್ರಗಳಲ್ಲಿ ಸೂಚನಾ ಫಲಕಗಳ ಅಳವಡಿಕೆ, ದೃಢೀಕರಣ, ಚುನಾವಣಾ ಕಾರ್ಯಗಳಿಗೆ ನಿಯೋಜಿತರಾಗಿರುವ ಸೆಕ್ಟರ್ ಅಧಿಕಾರಿ, ಫ್ಲೈಯಿಂಗ್ ಸ್ಕ್ವಾಡ್, ಇತರೆ ತಂಡಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳಿಗೆ ನಿಯೋಜಿಸಿರುವ ವಾಹನಗಳ ಬಗ್ಗೆ ವಿವರ ಪಡೆದುಕೊಂಡರು.
ಜಿಲ್ಲೆಯಲ್ಲಿ ಚೆಕ್ಪೋಸ್ಟ್ ಗಳ ಕಾರ್ಯನಿರ್ವಹಣೆ ಸಕ್ರಿಯವಾಗಿ ಇರಬೇಕು. ಚೆಕ್ಪೋಸ್ಟ್ ಗಳಲ್ಲಿ ಮೂಲ ಸೌಕರ್ಯಗಳು ಇರಬೇಕು. ಚುನಾವಣಾ ಅಕ್ರಮಗಳಿಗೆ ಅವಕಾಶವಾಗದಂತೆ ನಿಗಾ ವಹಿಸುವ ನಿಟ್ಟಿನಲ್ಲಿ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಸೂಚನೆ ನೀಡಿದರು.
ನಾಮಪತ್ರ ಸ್ವೀಕಾರ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಗತ್ಯವಾದ ಸಿಬ್ಬಂದಿ, ತಾಂತ್ರಿಕ ಸಿಬ್ಬಂದಿ ಮತ್ತು ಕಂಪ್ಯೂಟರ್ ಅಳವಡಿಕೆಗಳ ಬಗ್ಗೆ ಕೈಗೊಳ್ಳಲಾಗಿರುವ ಸಿದ್ದತೆಗಳ ಬಗ್ಗೆ ವಿವರವಾಗಿ ಜಿಲ್ಲಾಧಿಕಾರಿಯವರು ಪರಿಶೀಲಿಸಿದರು.
ಚುನಾವಣಾ ಮಾದರಿ ನೀತಿ ಸಂಹಿತೆ ಪಾಲನೆಗೆ ನೇಮಕ ಮಾಡಿರುವ ತಂಡಗಳು ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡುಬಂದಲ್ಲಿ ತುರ್ತು ಅಗತ್ಯ ಕ್ರಮ ವಹಿಸುವ ಕುರಿತು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎಸ್. ಪೂವಿತಾ ಅವರು ಮತದಾನ ಮಹತ್ವದ ಜಾಗೃತಿ ಮೂಡಿಸುವ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿರುವ ಕುರಿತು ವಿವರವಾಗಿ ಚರ್ಚಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಜೆ ಉದೇಶ ಉಪವಿಭಾಗಾಧಿಕಾರಿ ಗೀತಾ ಹುಡೇದ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸರಸ್ವತಿ, ಅಬಕಾರಿ ಉಪ ಆಯುಕ್ತರಾದ ನಾಗಶಯನ, ವಿಧಾನಸಭಾವಾರು ಚುನಾವಣಾ ಅಧಿಕಾರಿಗಳಾಗಿರುವ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಮಲ್ಲಿಕಾರ್ಜುನ, ಆಹಾರ ಇಲಾಖೆ ಉಪನಿರ್ದೇಶಕರಾದ ಯೋಗಾನಂದ್, ಜಂಟಿ ಕೃಷಿ ನಿರ್ದೇಶಕರಾದ ಮಧುಸೂಧನ್, ತಹಶೀಲ್ದಾರರಾದ ಬಸವರಾಜು, ಮಂಜುಳಾ, ಶ್ರೀ ಶೈಲ್ ತಳವಾರ್, ನೋಡಲ್ ಅಧಿಕಾರಿಗಳಾಗಿರುವ ಪ್ರಾದೇಶಿಕ ಸಾರಿಗೆ ಅಧಿಕಾರಿ ಸುಧಾಮಣಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಶಿವಪ್ರಸಾದ್, ಕೈಗಾರಿಕೆ ಇಲಾಖೆ ಅಧಿಕಾರಿ ರಾಜೇಂದ್ರ ಪ್ರಸಾದ್, ಭೂ ದಾಖಲೆಗಳ ಉಪನಿರ್ದೇಶಕರಾದ ವಿದ್ಯಾಯಿನಿ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾಧಿಕಾರಿ ಎಂ.ವಿ. ಸುಧಾ, ಇತರರು ಸಭೆಯಲ್ಲಿ ಭಾಗವಹಿಸಿದ್ದರು.
ಸಭೆಗೂ ಮೊದಲು ಜಿಲ್ಲಾಧಿಕಾರಿ ಡಿಎಸ್. ರಮೇಶ್ ಅವರು ನಗರದ ಜಿಲ್ಲಾಡಳಿತ ಭವನದಲ್ಲಿರುವ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಸ್ಥಾಪಿಸಲಾಗಿರುವ ಮಾಧ್ಯಮ ನಿರ್ವಹಣೆ ಕೇಂದ್ರಕ್ಕೆ ಭೇಟಿ ನೀಡಿ ವೀಕ್ಷಿಸಿದರು.
