ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಎಲ್ಲಾ ಕೆರೆಗಳಿಗೆ ಹಂತ ಹಂತವಾಗಿ ನೀರು ತುಂಬಿಸಲು ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಮುಖ್ಯಮಂತ್ರಿಯವರಾದ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿಂದು ಚಾಮರಾಜನಗರ ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ವಿವಿಧ ಇಲಾಖೆಗಳ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಇಡೀ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸಲಾಗುತ್ತದೆ. ಕೆರೆಗಳ ತುಂಬಿಸುವ ಸಮಗ್ರ ಅಭಿವೃದ್ದಿ ಯೋಜನೆಗೆ ಎರಡು ಪ್ರಸ್ತಾವನೆಗಳು ಮುಂದಿದೆ. ೭೫೪ ಕೋಟಿ ರೂ. ವೆಚ್ಚದ ಯೋಜನೆಗೆ ಈಗಾಗಲೇ ಅನುಮೋದನೆಗೆ ಕಳುಹಿಸಲಾಗಿದೆ. ಸಾವಿರ ಕೋಟಿ ರೂ. ವೆಚ್ಚದ ಯೋಜನೆಗೆ ವಿಸೃತ ಯೋಜನಾ ವರದಿ ತಯಾರಾಗಬೇಕಿದೆ. ಒಟ್ಟಾರೆ ಇಡೀ ಚಾಮರಾಜನಗರ ಜಿಲ್ಲೆಯ ಎಲ್ಲಾ ಭಾಗದ ಕೆರೆಗಳನ್ನು ಹಂತ ಹಂತವಾಗಿ ತುಂಬಿಸಲು ಅಗತ್ಯವಿರುವ ಯೋಜನೆಯನ್ನು ಮಂಜೂರು ಮಾಡಲಾಗುವುದು ಎಂದು ಮುಖ್ಯಮಂತ್ರಿಯವರು ತಿಳಿಸಿದರು.
ಕೆರೆಗಳಿಗೆ ನೀರು ತುಂಬಿಸುವುದರಿಂದ ಅಂತರ್ಜಲ ಹೆಚ್ಚಳವಾಗಲಿದೆ. ಕೃಷಿ ಚಟುವಟಿಕೆಗಳಿಗೆ, ಕುಡಿಯುವ ನೀರಿನ ಪೂರೈಕೆಗೂ ಅನುಕೂಲವಾಗಲಿದೆ. ಆರೋಗ್ಯಕರ ಜನವಸತಿಗಳಿಗೆ ಉಪಯೋಗವಾಗಲಿದೆ. ಹೀಗಾಗಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಂದಾಗಲಿದ್ದೇವೆ ಎಂದರು.
ಚಾಮರಾಜನಗರ ಜಿಲ್ಲೆಯನ್ನು ಕೈಗಾರಿಕೆ ಜಿಲ್ಲೆಯಾಗಿ ಪರಿವರ್ತಿಸಲು ಸಾಧ್ಯವಿದೆ. ಬೀದರ್ ಜಿಲ್ಲೆಯಂತೆ ಇಲ್ಲಿಯೂ ಕೈಗಾರಿಕಾ ಹೊಸಹತು ಟೌನ್‌ಶಿಪ್ ನಿರ್ಮಾಣ ಮಾಡಬಹುದು. ಒಂದು ಸಾವಿರ ಎಕರೆ ಪ್ರದೇಶದಲ್ಲಿ ಸಣ್ಣ, ಮಧ್ಯಮ ಕೈಗಾರಿಕೆಗಳನ್ನು ತೆರೆಯಬಹುದು. ಇದರಿಂದ ಯುವ ಜನರಿಗೆ ಉದ್ಯೋಗ ಅವಕಾಶಗಳು ಲಭಿಸಲಿವೆ ಎಂದು ಮುಖ್ಯಮಂತ್ರಿಯವರು ತಿಳಿಸಿದರು.
ಜಿಲ್ಲೆಗೆ ಕುಡಿಯುವ ನೀರಿನ ಯೋಜನೆಗೆ ೧೦೨ ಕೋಟಿ ರೂ. ಮಂಜೂರು ಮಾಡಲಾಗಿದೆ. ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಪೌಷ್ಠಿಕತೆಯಂತಹ ಕಾರ್ಯಕ್ರಮಗಳಿಗೆ ಒತ್ತು ನೀಡಿದ್ದೇವೆ. ಜಿಲ್ಲೆಯ ಆರ್ಥಿಕ ಔದ್ಯೋಗಿಕ ಸಾಮಾಜಿಕ, ಶಿಕ್ಷಣ ಅಭಿವೃದ್ದಿಗೆ ಸರ್ಕಾರ ಬದ್ದವಾಗಿದೆ. ಅಭಿವೃದ್ದಿಯ ವಿಷಯದಲ್ಲಿ ಪಕ್ಷ ಬೇಧ ಇಲ್ಲ ಎಂದರು.
ಚಾಮರಾಜನಗರ ಜಿಲ್ಲೆಗೆ ವಿಶ್ವ ವಿದ್ಯಾಲಯ ಮಂಜೂರು ಮಾಡಲಾಗಿದೆ. ಮಾದರಿ ವಿಶ್ವವಿದ್ಯಾಲಯವನ್ನಾಗಿಸಲು ಕ್ರಮ ವಹಿಸಲಾಗುವುದು. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಜಿಲ್ಲೆಯ ಇತರ ಭಾಗಗಳಲ್ಲಿಯೂ ಅನುಷ್ಠಾನ ಗೊಳಿಸಲಾಗುವುದು ಎಂದು ಮುಖ್ಯಮಂತ್ರಿಯವರಾದ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ವಸತಿ, ಮೂಲಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಮಾತನಾಡಿ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸಲು ೧೩೯೦ ಕೋಟಿ ರೂ. ವೆಚ್ಚದ ಯೋಜನೆ ಸಿದ್ದವಾಗಿದೆ. ಜಿಲ್ಲೆಗೆ ೨೫ ವರ್ಷಗಳು ತುಂಬಿದ್ದು ಶಕ್ತಿ ತುಂಬುವ ಕೆಲಸ ಆಗಬೇಕಿದೆ. ಇಂದು ಒಂದು ಸಾವಿರಕ್ಕೂ ಹೆಚ್ಚು ಕೋಟಿ ರೂ. ವೆಚ್ಚದ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಾಗುತ್ತಿದೆ ಎಂದರು.
ಮುಖ್ಯಮಂತ್ರಿಗಳು ಜನಪರ, ಬಡವರ ಮಕ್ಕಳ ಶಿಕ್ಷಣಕ್ಕೆ ವಿಶೇಷ ಒತ್ತು ನೀಡಿದ್ದಾರೆ. ಸರ್ವಾಂಗೀಣ ಅಭಿವೃದ್ದಿಗೆ ಶ್ರಮಿಸುತ್ತಿದ್ದಾರೆ. ಜಿಲ್ಲೆಯ ಅಭಿವೃದ್ದಿ ಬಗ್ಗೆ ಕಾಳಜಿ ಹೊಂದಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ತಿಳಿಸಿದರು.
ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರು ಮಾತನಾಡಿ ಜಿಲ್ಲೆಯಲ್ಲಿ ಶಿಕ್ಷಣಕ್ಕೆ ಇನ್ನೂ ಹೆಚ್ಚಿನ ಒತ್ತು ನೀಡಬೇಕಿದೆ. ಈಗಾಗಲೇ ವಿಶ್ವ ವಿದ್ಯಾಲಯ ಮಂಜೂರಾಗಿದ್ದು ಇದಕ್ಕಾಗಿ ಮುಖ್ಯಮಂತ್ರಿಯವರನ್ನು ಅಭಿನಂದಿಸುತ್ತೇನೆ. ಜಿಲ್ಲೆಗೆ ಕಾನೂನು ಕಾಲೇಜು ಸಹ ಬರಬೇಕಿದೆ. ಈ ಸಂಬಂಧ ಉಪಕುಲಪತಿ ಅವರ ಜೊತೆ ಮಾತನಾಡಿದ್ದೇನೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮ, ಕೈಗಾರಿಕೆ ಅಭಿವೃದ್ದಿಯಾಗಬೇಕಿದೆ ಎಂದು ತಿಳಿಸಿದರು.
ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಮಾತನಾಡಿ ಜಿಲ್ಲೆಯ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಚಾಮರಾಜನಗರದಲ್ಲೂ ಸುಸಜ್ಜಿತ ಬಸ್ ನಿಲ್ದಾಣ ಆಗಬೇಕು. ಅತಿವೃಷ್ಠಿಯಿಂದ ಹಾನಿಗೀಡಾಗಿರುವ ರಸ್ತೆ ಮೂಲ ಸೌಕರ್ಯಗಳಿಗೆ ವಿಶೇಷ ಅನುದಾನ ನೀಡಬೇಕು. ಪರಿಶಿಷ್ಟರ ಕಾಲೋನಿಗಳಿಗೆ ಹೆಚ್ಚಿನ ಮೂಲ ಸೌಲಭ್ಯ ಒದಗಿಸಬೇಕೆಂದು ಮನವಿ ಮಾಡಿದರು.
ಶಾಸಕರಾದ ಸಿ.ಎಸ್. ನಿರಂಜನ್‌ಕುಮಾರ್ ಅವರು ಮಾತನಾಡಿ ಜಾನಪದ ಕಲೆಗಳ ತವರೂರಾದ ಚಾಮರಾಜನಗರ ಜಿಲ್ಲೆಗೆ ಮುಖ್ಯಮಂತ್ರಿಯವರು ಅನೇಕ ಅಭಿವೃದ್ದಿ ಕಾರ್ಯಗಳಿಗೆ ಮುಂದಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರೂ ಸಹ ಜಿಲ್ಲೆಯ ಪ್ರಗತಿಗೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಸರ್ಕಾರ ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೊಮ್ಮನಹಳ್ಳಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ನಿರ್ಮಾಣಕ್ಕಾಗಿ ೧೮ ಕೋಟಿ ರೂ. ಅನುದಾನ ನೀಡಿದ್ದಾರೆ. ೩೨ ಗ್ರಾಮಗಳ ನೀರಿನ ಯೋಜನೆಗೆ ೨೨ ಕೋಟಿ ರೂ. ಅನುದಾನ ಒದಗಿಸಿದ್ದಾರೆ ಎಂದರು.
ಇದೇ ವೇಳೆ ಮುಖ್ಯಮಂತ್ರಿಯವರು ವಿಶೇಷಚೇತನರಿಗೆ ತ್ರಿಚಕ್ರ ವಾಹನ ಹಾಗೂ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿದರು.
ಜಿಲ್ಲೆಯ ಅಭಿವೃದ್ದಿ ಕಾರ್ಯಕ್ರಮಗಳ ಸಾಧನೆ ಕುರಿತ ಕಿರುಹೊತ್ತಿಗೆಯನ್ನು ಮುಖ್ಯಮಂತ್ರಿಯವರು ಬಿಡುಗಡೆ ಮಾಡಿದರು.
ಕಂದಾಯ ಸಚಿವರಾದ ಆರ್. ಅಶೋಕ, ಸದಸ್ಯರಾದ ಮರಿತಿಬ್ಬೇಗೌಡ, ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಜಿ. ನಿಜಗುಣರಾಜು, ನಗರಸಭಾ ಅಧ್ಯಕ್ಷರಾದ ಆಶಾ ನಟರಾಜು, ಸದಸ್ಯರಾದ ಚಂದ್ರಶೇಖರ್, ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಡಾ. ಜಿ.ಸಿ. ಪ್ರಕಾಶ್, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್, ಇತರರು ಉಪಸ್ಥಿತರಿದ್ದರು.