ಚಾಮರಾಜನಗರ: ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಶೇ. ೧೦೦ರಷ್ಟು ದೋಷರಹಿತ ಮತದಾರರ ಪಟ್ಟಿಗೆ ಅತ್ಯಂತ ಜಾಗ್ರತೆ ವಹಿಸಬೇಕೆಂದು ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೆಶಕರು ಹಾಗೂ ಮತದಾರರ ಪಟ್ಟಿಯ ಜಿಲ್ಲಾ ವೀಕ್ಷಕರಾದ ಬಿ.ಬಿ. ಕಾವೇರಿ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯಾವುದೇ ಅರ್ಹ ಮತದಾರರು ಮತದಾನದಿಂದ ವಂಚಿತರಾಗದಂತೆ ಕ್ರಮವಹಿಸಬೇಕಿದೆ. ಮತದಾರರ ನೋಂದಣಾಧಿಕಾರಿಗಳು ಸಹಾಯಕ ಮತದಾರರ ನೊಂದಣಾಧಿಕಾರಿಗಳು ಈ ಬಗ್ಗೆ ಅತ್ಯಂತ ಜಾಗರೂಕತೆ ವಹಿಸಿ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಬೇಕೆಂದು ವೀಕ್ಷಕರು ತಿಳಿಸಿದರು.
ಮತದಾರರ ಪಟ್ಟಿಯಲ್ಲಿ ಬಾಕಿ ಇರುವ ಎಲ್ಲ ಅರ್ಹ ೧೮ ರಿಂದ ೧೯ರ ವಯೋಮಾನದ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಕ್ರಮವಹಿಸಬೇಕು. ಕಾಡಂಚಿನ ಗ್ರಾಮಗಳು, ಬುಡಕಟ್ಟು ಕಾಲೋನಿಗಳಲ್ಲಿಯೂ ಸಹ ಅರ್ಹ ನಾಗರಿಕರು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ ನಿಟ್ಟಿನಲ್ಲಿ ನಿಯಮಾನುಸಾರ ಕಾರ್ಯನಿರ್ವಹಿಸುವಂತೆ ಸೂಚಿಸಿದರು.
ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾರರ ಪಟ್ಟಿಯಲ್ಲಿರುವ ಎಲ್ಲರೂ ಸಹ ಮತದಾನದಲ್ಲಿ ಭಾಗವಹಿಸಲು ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವಂತಹ ಕಾರ್ಯಕ್ರಮಗಳನ್ನು ಕೈಗೊಳ್ಳಲು ಮತದಾರರ ಪಟ್ಟಿಯ ಜಿಲ್ಲಾ ವೀಕ್ಷಕರಾದ ಬಿ.ಬಿ. ಕಾವೇರಿ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಮಾತನಾಡಿ ಇದೇ ಜನವರಿ ೫ ರಂದು ಅಂತಿಮ ಮತದಾರರ ಪಟ್ಟಿಯನ್ನು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತಗಟ್ಟೆಗಳು, ತಹಶೀಲ್ದಾರ್ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರಚುರಪಡಿಸಲಾಗಿದೆ. ಅಂತಿಮ ಮತದಾರರ ಪಟ್ಟಿಯಲ್ಲಿ ಜಿಲ್ಲೆಯಲ್ಲಿ ೮,೪೨,೫೬೨ ಮತದಾರರಿದ್ದು, ಇವರಲ್ಲಿ ೪,೧೭,೫೧೭ ಪುರುಷರು, ೪,೨೪,೯೭೯ ಮಹಿಳೆಯರು ಹಾಗೂ ೬೭ ಇತರೆ ಮತದಾರರು ಇದ್ದಾರೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಉಪವಿಭಾಗಾಧಿಕಾರಿ ಗೀತಾ ಹುಡೇದ, ತಹಶೀಲ್ದಾರರಾದ ಬಸವರಾಜು, ಮಂಜುಳಾ, ಆನಂದಯ್ಯ, ಜಯಪ್ರಕಾಶ್, ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.