ಮೈಸೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ 7 ವರ್ಷಗಳಿಂದ ಪೆಟ್ರೋಲ್ ಡೀಸೆಲ್ ಬೆಲೆಗಳನ್ನು ಏರಿಸುವ ಮುಖಾಂತರ ಜನಸಾಮಾನ್ಯರ ಬದುಕನ್ನು ಸಂಕಷ್ಟಕ್ಕೆ ತಳ್ಳಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆರೋಪಿಸಿದರು.
ಚಾಮುಂಡೇಶ್ವರಿ ಕ್ಷೇತ್ರದ ಬೀರಿಹುಂಡಿ ಮತ್ತು ಹೂಟಗಳ್ಳಿಯ ಪೆಟ್ರೋಲ್ ಬಂಕ್ಗಳ ಬಳಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ದ ಪ್ರತಿಭಟನೆ ನಡೆಸಿ ಮಾತನಾಡಿದ ಅವರು ಕೇಂದ್ರದಲ್ಲಿ 2014ರಲ್ಲಿ ಮನಮೋಹನ್ಸಿಂಗ್ ಪ್ರಧಾನ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಪೆಟ್ರೋಲ್ ಬೆಲೆ ಹೆಚ್ಚಾಗಿದೆ ಎಂದು ಬೊಬ್ಬೆ ಹೊಡೆಯುತ್ತಿದ್ದ ನರೇಂದ್ರ ಮೋದಿಯವರು ತಾವು ಅಧಿಕಾರಕ್ಕೆ ಬಂದರೆ ಪೆಟ್ರೋಲ್ ಡೀಸೆಲ್ ಗ್ಯಾಸ್ ಬೆಲೆಗಳನ್ನು ಇಳಿಸುತ್ತೇವೆ ಎಂದು ಭಾಷಣ ಬಿಗಿದು, ಅಧಿಕಾರಕ್ಕೆ ಬಂದ 7 ವರ್ಷಗಳಲ್ಲಿ ಸುಮಾರು 40 ಬಾರಿ ಬೆಲೆ ಏರಿಕೆ ಮಾಡಿ ಕೊರೋನಾ ಸಂಕಷ್ಟದಲ್ಲಿರುವ ಜನರ ಜೀವನದ ಜೊತೆ ಚಲ್ಲಾಟವಾಡುತ್ತಿದ್ದಾರೆ. ಅವರು ಇಡೀ ದೇಶವನ್ನೇ ದಿವಾಳಿ ಮಾಡಲು ಹೊರಟಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಜನರು ಕಿತ್ತೊಗೆಯಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಘೋಷಣೆಗಳನ್ನು ಕೂಗಲಾಯಿತು. ಜಿ.ಪಂ ಮಾಜಿ ಅಧ್ಯಕ್ಷ ಮಹಾದೇವ, ಜಿ.ಪಂ ಮಾಜಿ ಸದಸ್ಯ ಅರುಣ್ಕುಮಾರ್, ಕೆ.ಪಿ.ಸಿ.ಸಿ ಕಾರ್ಯದರ್ಶಿ ಗುರುಪಾದ ಸ್ವಾಮಿ, ಎಫ್ ಎಂ. ಮಹೇಶ್, ಗ್ರಾಪಂ ಮಾಜಿ ಅಧ್ಯಕ್ಷರಾದ ನಾಗರತ್ನ, ಪಲಾವ್ ಮಹಾದೇವ, ಗುಡ್ಡಪ್ಪ, ಮಾಲೇಗೌಡ, ಕರೀಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಮಾಶಂಕರ್, ವೈ.ಸಿ.ಸ್ವಾಮಿ, ಸಿದ್ದರಾಜು, ಪಾಷ ಇದ್ದರು.