ಚಾಮರಾಜನಗರ. ಜನವರಿ ೦೬ (ಕರ್ನಾಟಕ ವಾರ್ತೆ):- ಇತಿಹಾಸ ಪ್ರಸಿದ್ದ ಬಿಳಿಗಿರಿರಂಗನಬೆಟ್ಟದಲ್ಲಿ ಜನವರಿ ೧೬ರಂದು ನಡೆಯಲಿರುವ ಬಿಳಿಗಿರಿರಂಗನಾಥಸ್ವಾಮಿ ರಥೋತ್ಸವ (ಚಿಕ್ಕ ಜಾತ್ರೆ) ಗೆ ಸಕಲ ಸಿದ್ದತೆಯನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಶಾಸಕರಾದ ಎನ್. ಮಹೇಶ್ ಅವರು ಸೂಚಿಸಿದರು.
ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದ ಪ್ರವಾಸಿಮಂದಿರದಲ್ಲಿ ಇಂದು ಸಂಕ್ರಾಂತಿ ಚಿಕ್ಕಜಾತ್ರೆ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಾತ್ರೆಗೆ ಬರುವ ಹಿನ್ನೆಲೆಯಲ್ಲಿ ರಸ್ತೆಯ ಗುಂಡಿಗಳನ್ನು ಮುಚ್ಚಿ ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು. ವಾಹನಗಳ ದಟ್ಟಣೆಯಾಗದಂತೆ ಸಂಚಾರ ವ್ಯವಸ್ಥೆ ಮಾಡಬೇಕು. ಬೆಟ್ಟದಲ್ಲಿ ಎಲ್ಲೆಲ್ಲಿ ಸ್ಥಳ ಲಭ್ಯವಿದೆಯೋ ಅಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಬೇಕೆಂದು ತಿಳಿಸಿದರು.
ಜಿಲ್ಲೆಯ ನಾನಾ ಭಾಗಗಳಿಂದ ಭಕ್ತಾದಿಗಳು ಆಗಮಿಸಲು ಅನುಕೂಲವಾಗುವಂತೆ ಕೆ.ಎಸ್.ಆರ್.ಟಿಸಿ ಬಸ್ಸುಗಳನ್ನು ಹೆಚ್ಚು ಸಂಖ್ಯೆಯಲ್ಲಿ ನಿಯೋಜಿಸಬೇಕು. ಕ್ಷೇತ್ರದಲ್ಲಿ ಶುದ್ದ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಪೈಪ್‌ಲೈನ್‌ಗಳನ್ನು ದುರಸ್ತಿಪಡಿಸಿಕೊಳ್ಳಬೇಕು. ವಾಟರ್ ಟ್ಯಾಂಕ್‌ಗಳನ್ನು ಸಹ ಇರಿಸಿಕೊಳ್ಳಬೇಕು. ಸ್ವಚ್ಚತಾ ಕಾರ್ಯಗಳಿಗೆ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಿಕೊಳ್ಳಬೇಕೆಂದು ಶಾಸಕರು ತಿಳಿಸಿದರು.
ಭಕ್ತಾಧಿಗಳ ಆರೋಗ್ಯ ದೃಷ್ಟಿಯಿಂದ ತಾತ್ಕಾಲಿಕ ಆರೋಗ್ಯ ಕೇಂದ್ರಗಳನ್ನು ತೆರೆದು ವೈದ್ಯರು ಸಿಬ್ಬಂದಿ ಮತ್ತು ತುರ್ತು ವಾಹನದ ವ್ಯವಸ್ಥೆ ಮಾಡಬೇಕು. ಜಾತ್ರಾ ಸಂದರ್ಭದಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ನಿರಂತರವಾಗಿ ವಿದ್ಯುತ್ ಪೂರೈಕೆ ಇರಬೇಕು ಎಂದರು.
ದೇವಾಲಂiiದ ಪ್ರಕಾರದಲ್ಲಿ ಕೈಗೊಂಡಿರುವ ನೆಲಹಾಸು ಕಾಮಗಾರಿಯನ್ನು ತುರ್ತಾಗಿ ಪೂರ್ಣಗೊಳಿಸಬೇಕು. ರಥೋತ್ಸವಕ್ಕೆ ಅವಶ್ಯವಿರುವ ಎಲ್ಲಾ ಸಿದ್ದತಾ ಕೆಲಸಗಳಿಗೆ ಕಾರ್ಯೋನ್ಮುಖರಾಗಬೇಕೆಂದು ಶಾಸಕರಾದ ಎನ್. ಮಹೇಶ್ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಮಾತನಾಡಿ ವಾಹನಗಳ ನಿಲುಗಡೆಗೆ ಯಾವುದೇ ಕೊರತೆಯಾಗದಂತೆ ಸ್ಥಳ ಗುರುತಿಸಿ ಅವಕಾಶ ಮಾಡಬೇಕು. ರಥದ ಸುಸ್ಥಿತಿಯ ಬಗ್ಗೆ ಪರಿಶೀಲಿಸಿ ಸುಗಮ ರಥದ ಚಲನೆಯ ವ್ಯವಸ್ಥೆಗೆ ಅನುವು ಮಾಡಿಕೊಡಬೇಕು. ಭಕ್ತಾಧಿಗಳಿಗೆ ಅನುಕೂಲವಾಗುವಂತೆ ಜಾತ್ರಾ ಸಂದರ್ಭಗಳಲ್ಲಿ ಬೆಟ್ಟ ಪ್ರವೇಶ ಸಂಚಾರಕ್ಕೆ ಬೆಳಿಗ್ಗೆ ೬ ರಿಂದ ರಾತ್ರಿ ೯ ಗಂಟೆಯವರೆಗೆ ಸಮಯ ಸಡಿಲಿಕೆ ಮಾಡಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್, ಉಪವಿಭಾಗಾಧಿಕಾರಿ ಗೀತಾ ಹುಡೇದ, ತಹಶೀಲ್ದಾರ್ ಆನಂದಪ್ಪ ನಾಯಕ, ಪ್ರಾದೇಶಿಕ ಸಾರಿಗೆ ಅಧಿಕಾರಿ ಸುಧಾ, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್, ಅರಣ್ಯ ಅಧಿಕಾರಿ ಮಹದೇವಯ್ಯ, ಅರ್ಚಕರಾದ ರವಿಕುಮಾರ್, ಬಿಳಿಗಿರಿರಂಗನಾಥಸ್ವಾಮಿ ದೇವಾಲಂiiದ ಕಾರ್ಯನಿರ್ವಾಹಕ ಅಧಿಕಾರಿ ಮೋಹನ್,ಇತರೆ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿರಿದ್ದರು,
ಬಿಳಿಗಿರಿರಂಗನಬೆಟ್ಟ ಚಿಕ್ಕಜಾತ್ರೆಗೆ ದ್ವಿಚಕ್ರ ವಾಹನಗಳ ನಿಷೇಧ : ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದಲ್ಲಿ ನಡೆಯಲಿರುವ ಸಂಕ್ರಾಂತಿ ಚಿಕ್ಕಜಾತ್ರೆ ವೇಳೆ ಬಿಳಿಗಿರಿರಂಗನಬೆಟ್ಟಕ್ಕೆ ಸುರಕ್ಷತೆ ದೃಷ್ಠಿಯಿಂದ ದ್ವಿಚಕ್ರ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ತಿಳಿಸಿದರು.
ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದ ಪ್ರವಾಸಿಮಂದಿರದಲ್ಲಿ ಸಂಕ್ರಾಂತಿ ಚಿಕ್ಕಜಾತ್ರೆ ಸಂಬಂಧ ನಡೆದ ಪೂರ್ವಭಾವಿ ಸಭೆಯ ವೇಳೆ ಜಿಲ್ಲಾಧಿಕಾರಿಯವರು ಈ ವಿಷಯ ತಿಳಿಸಿದರು.
ಜಾತ್ರಾ ಸಂದರ್ಭದಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿ ಇರುತ್ತದೆ. ಅಧಿಕ ಸಂಖ್ಯೆಯ ವಾಹನಗಳ ಓಡಾಟದಿಂದ ಕಿರಿದಾದ ರಸ್ತೆಯಲ್ಲಿ ಅಪಘಾತಗಳು ಸಂಭವಿಸುವುದನ್ನು ತಪ್ಪಿಸುವ ಸಲುವಾಗಿ ಸುರಕ್ಷತೆಯ ಹಿತ ದೃಷ್ಠಿಯಿಂದ ಸಂಕ್ರಾಂತಿ ರಥೋತ್ಸವ ಚಿಕ್ಕಜಾತ್ರೆ ಸಂದರ್ಭದಲ್ಲಿ ದ್ವಿಚಕ್ರ ವಾಹನಗಳ ಮೂಲಕ ಬಿಳಿಗಿರಿರಂಗನಬೆಟ್ಟಕ್ಕೆ ತೆರಳುವುದನ್ನು ನಿಷೇಧಿಸಲಾಗಿದೆ. ಭಕ್ತಾಧಿಗಳು ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ತಿಳಿಸಿದರು.