ಬೆಂಗಳೂರು: ಈಗಾಗಲೇ 18 ವರ್ಷ ನಂತರದ ವಯೋ ಮಾನದವರಿಗೆ ನೀಡುವ ಕೋವಿಡ್ ಲಸಿಕಾ ಕಾರ್ಯಕ್ರಮದಲ್ಲಿ ಬೇರೆಲ್ಲ ರಾಜ್ಯಗಳಲ್ಲಿ ಉತ್ತಮ ಸಾಧನೆಯಾಗಿದ್ದು ಲಕ್ಷಾಂತರ ಮಂದಿ ಕೋವಿಡ್ ಲಸಿಕೆ ಪಡೆದಿದ್ದರೆ ಕರ್ನಾಟಕದಲ್ಲಿ ಅದು ಸಾವಿರದ ಲೆಕ್ಕಾಚಾರದಲ್ಲಿರುವುದು ವಿಷಾದದ ಸಂಗತಿಯಾಗಿದೆ.

ಮೇ.1 ರಿಂದಲೇ ಮುಖ್ಯಮಂತ್ರಿಗಳು ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರೂ ಲಸಿಕೆಯ ಕೊರತೆಯಿಂದಾಗಿ ಅದು ವೇಗ ಪಡೆದುಕೊಂಡಿಲ್ಲ. ಈ ನಡುವೆ  ಮೇ 10 ರಿಂದ 18-44 ವರ್ಷ ವಯೋಮಾನದವರಿಗೆ ಕೋವಿಡ್-19 ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರಿನ ಕೆ.ಸಿ.ಜನರಲ್, ಜಯನಗರ ಜನರಲ್, ಸರ್ ಸಿ.ವಿ.ರಾಮನ್ ಜನರಲ್, ಇಎಸ್ ಐ ಮತ್ತು ನಿಮ್ಹಾನ್ಸ್ ಆಸ್ಪತ್ರೆಗಳಲ್ಲಿ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷದವರಿಗೆ ಕೋವಿಡ್ ಲಸಿಕೆ ವಿತರಿಸಲಾಗುವುದಾಗಿ ಹೇಳಿರುವ ಅವರು ರಾಜ್ಯದ ಇತರೆ ಜಿಲ್ಲೆಗಳಲ್ಲಿ ಆರಂಭಿಕವಾಗಿ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ ಹಾಗೂ ಸರ್ಕಾರಿ ಮೆಡಿಕಲ್ ಕಾಲೇಜುಗಳಲ್ಲಿ ಲಸಿಕೆ ನೀಡಲಾಗುವುದು. ಲಸಿಕೆ ಪೂರೈಕೆ ಹೆಚ್ಚಾಗುತ್ತಿದ್ದಂತೆ, ಮುಂದಿನ ದಿನಗಳಲ್ಲಿ ಇನ್ನಷ್ಟು ಲಸಿಕೆ ಕೇಂದ್ರಗಳಲ್ಲಿ ವಿತರಣೆ ಆರಂಭಿಸಲಾಗುವುದು.

18-44 ವಯೋಮಾನದವರಿಗೆ ಲಸಿಕೆ ವಿತರಿಸುವ ಎಲ್ಲಾ ಕೇಂದ್ರಗಳಲ್ಲಿ ಈ ಗುಂಪಿನವರಿಗೆ ಪ್ರತ್ಯೇಕ ಸ್ಥಳ ಗುರುತಿಸಲಾಗುವುದು. ಕೋವಿಡ್ ಅಥವಾ ಆರೋಗ್ಯ ಸೇತು ಆ ಪ್ ಮೂಲಕ ನೋಂದಣಿ ಮಾಡಿಸಿ, ಸಮಯ ನಿಗದಿ ಮಾಡಿಕೊಂಡಿರುವವರಿಗೆ ಮಾತ್ರ ಲಸಿಕೆ ನೀಡಲಾಗುವುದು. ನೋಂದಣಿ ಇಲ್ಲದೆ ನೇರವಾಗಿ ಲಸಿಕೆ ಕೇಂದ್ರಕ್ಕೆ ಬರುವವರಿಗೆ ಅವಕಾಶವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಪ್ರತಿ ವ್ಯಕ್ತಿಗೂ ಆದಷ್ಟು ಶೀಘ್ರದಲ್ಲಿ ಲಸಿಕೆ ಒದಗಿಸಲು ಸರ್ಕಾರ ಬದ್ಧವಾಗಿದೆ. ಅಗತ್ಯ ಲಸಿಕೆ ಪೂರೈಕೆ ಮಾಡಿಕೊಳ್ಳಲು ನಿರಂತರ ಪ್ರಯತ್ನ ಸಾಗಿದೆ. ಆದ್ದರಿಂದ ಎಲ್ಲಾ ನಾಗರಿಕರು, ಅದರಲ್ಲೂ ವಿಶೇಷವಾಗಿ ನನ್ನ ಯುವಮಿತ್ರರು ತಮ್ಮ ಸರದಿಗಾಗಿ ತಾಳ್ಮೆಯಿಂದ ಕಾಯಬೇಕು. ಖಂಡಿತವಾಗಿ ಲಸಿಕೆ ಸಿಗುತ್ತದೆ ಎಂದು ಸಚಿವರು ಮನವಿ ಮಾಡಿದ್ದಾರೆ.

ಸದ್ಯ ಲಾಕ್ ಡೌನ್ ಇರುವುದರಿಂದ ಜನ ಕೂಡ ಲಸಿಕೆ ಪಡೆಯಲು ಬರುತ್ತಾರಾ? ಅಥವಾ ಇದನ್ನೇ ನೆಪ ಮಾಡಿಕೊಂಡು ಮನೆಯಿಂದ ಹೊರ ಬರುತ್ತಾರಾ ಎಂಬುದನ್ನು ಮುಂದಿನ ದಿನಗಳಲ್ಲಿ ನೋಡಬೇಕಾಗಿದೆ.

By admin