ಚಾಮರಾಜನಗರ: ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ೨೦೯ರಲ್ಲಿ ಬಾಕಿ ಉಳಿದಿರುವ ಕಾಮಗಾರಿಯನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಂಡು ತ್ವರಿತವಾಗಿ ಪೂರ್ಣಗೊಳಿಸುವಂತೆ ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಅಭಿವೃದ್ದಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಷ್ಟ್ರೀಯ ಹೆದ್ದಾರಿ ೨೦೯ರಲ್ಲಿ ಕಾಮಗಾರಿ ಸ್ಥಗಿತಗೊಂಡಿದ್ದರಿಂದ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದಿದ್ದವು. ಇದೀಗ ಎಲ್ಲ ತೊಡಕುಗಳು ನಿವಾರಣೆಯಾಗಿರುವ ಹಿನ್ನೆಲೆಯಲ್ಲಿ ಬಾಕಿ ಉಳಿದಿರುವ ಹೆದ್ದಾರಿ ಕೆಲಸವನ್ನು ಶೀಘ್ರವೇ ಕೈಗೆತ್ತಿಕೊಂಡು ವೇಗವಾಗಿ ಪೂರ್ಣಗೊಳಿಸಬೇಕು. ಮುಂದಿನ ಸಭೆಯ ವೇಳೆಗೆ ಪ್ರಗತಿಯ ವರದಿ ನೀಡಬೇಕೆಂದು ಲೋಕಸಭಾ ಸದಸ್ಯರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಾದ ಶ್ರೀಧರ್ ಮಾತನಾಡಿ ಕಾಮಗಾರಿ ನಿರ್ವಹಿಸಲು ಹೊಸ ಏಜೆನ್ಸಿ ನಿಗದಿಯಾಗಿದ್ದು ಈಗಾಗಲೇ ಪ್ಯಾಚ್ ವರ್ಕ್, ಶುಚಿತ್ವ ಕೆಲಸ ನಡೆಯುತ್ತಿದೆ. ಇನ್ನೂ ೧೫ ದಿನಗಳೊಳಗೆ ಪೂರ್ಣ ಪ್ರಮಾಣದಲ್ಲಿ ಕಾಮಗಾರಿ ಆರಂಭವಾಗಲಿದೆ. ಚಾಮರಾಜನಗರ ವ್ಯಾಪ್ತಿಯಲ್ಲಿ ಬೈಪಾಸ್ ನಿರ್ಮಾಣ ಕಾರ್ಯ ಮಾರ್ಚ್ ಒಳಗೆ ಪೂರ್ಣಗೊಳಿಸಲಾಗುವುದೆಂದು ಮಾಹಿತಿ ನೀಡಿದರು.
ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಮಾತನಾಡಿ ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬವಾಗಿದೆ. ಯಾವ ಸಮಯಕ್ಕೆ ಕಾಮಗಾರಿ ಪೂರ್ಣವಾಗಲಿದೆ ಎಂಬುದನ್ನು ನಿಖರವಾಗಿ ಹೇಳಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಶಾಸಕರಾದ ಎನ್. ಮಹೇಶ್ ಅವರು ಮಾತನಾಡಿ ಹೆದ್ದಾರಿಯಲ್ಲಿ ಹಳ್ಳ ಬಿದ್ದಿರುವ ಕಡೆ ಕೂಡಲೇ ಸರಿಪಡಿಸಿ. ರಸ್ತೆ ಬದಿಯ ಅನವಶ್ಯಕ ಗಿಡ ಗಂಟಿಗಳನ್ನು ತೆರವುಗೊಳಿಸಲಾಗುತ್ತಿಲ್ಲ. ನನ್ನ ಕ್ಷೇತ್ರದಲ್ಲಿ ಮೂರು ಬೈಪಾಸ್ ಬರಲಿದೆ. ಕಂದಹಳ್ಳಿ ಬಳಿ ಇರುವ ರಸ್ತೆ ಸರಿಪಡಿಸುವ ಕಾರ್ಯ ಫೆಬ್ರವರಿ ಒಳಗೆ ಪೂರ್ಣ ಮಾಡಬೇಕೆಂದು ಸೂಚಿಸಿದರು.
ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರು ಮಾತನಾಡಿ ಕೇಂದ್ರ ಪುರತಸ್ಕೃತ ಯೋಜನೆಗಳಡಿ ಫಲಾನುಭವಿಗಳಿಗೆ ಸಾಲ ಸೌಲಭ್ಯವನ್ನು ಬ್ಯಾಂಕುಗಳು ತ್ವರಿತವಾಗಿ ನೀಡಬೇಕು. ಬಡವರಿಗೆ, ನಿರುದ್ಯೋಗಿಗಳಿಗೆ ಆರ್ಥಿಕವಾಗಿ ಮುಂದೆ ಬರಲು ಅನುಕೂಲವಾಗುವಂತೆ ನೆರವಾಗಬೇಕು ಎಂದರು.
ಕೃಷಿ ಇಲಾಖೆಯಿಂದ ಕಿಸಾನ್ ಸಮ್ಮಾನ್ ಯೋಜನೆಯಡಿ ನೀಡಲಾಗುವ ಆರ್ಥಿಕ ನೆರವು ಎಲ್ಲ ಅರ್ಹ ರೈತರಿಗೆ ತಲುಪಿಸಬೇಕು. ಯಾರೂ ಸಹ ಈ ಯೋಜನೆಯಿಂದ ವಂಚಿತರಾಗಬಾರದು. ಫಸಲ್ ಬಿಮಾ ಯೋಜನೆಯ ಪ್ರಯೋಜನ ಹೆಚ್ಚು ರೈತರಿಗೆ ತಲುಪಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಬೇಕೆಂದು ತಿಳಿಸಿದರು.
ಶಾಸಕರಾದ ಎನ್. ಮಹೇಶ್ ಅವರು ಮಾತನಾಡಿ ಪೌತಿ ಖಾತೆ ಆಗಿಲ್ಲದಿರುವ ಫಲಾನುಭವಿಗಳು ಕಿಸಾನ್ ಸಮ್ಮಾನ್ ಯೋಜನೆಯ ಸೌಲಭ್ಯ ಪಡೆಯಲು ಸಾಧ್ಯವಾಗುತ್ತಿಲ್ಲ. ಇತ್ಯರ್ಥ ಪಡಿಸಬಹುದಾದ ಪೌತಿಖಾತೆ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು. ಜನವರಿ ಒಳಗೆ ಪೌತಿಖಾತೆ ಮಾಡಿಕೊಟ್ಟು ಸೌಲಭ್ಯ ಪಡೆಯಲು ಅನುಕೂಲ ಕಲ್ಪಿಸಬೇಕೆಂದು ನಿರ್ದೇಶನ ನೀಡಿದರು.
ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರು ಮಾತನಾಡಿ ಆಯುಷ್ಮಾನ್ ಆರೋಗ್ಯ ಕರ್ನಾಟಕ ಕಾರ್ಡ್ಗಳ ವಿತರಣೆ ಅರ್ಹರೆಲ್ಲರಿಗೂ ಶೀಘ್ರ ತಲುಪಿಸಿ. ಕೋವಿಡ್ ಪರಿಹಾರಕ್ಕಾಗಿ ಬಾಕಿ ಉಳಿದಿರುವ ಸಂತ್ರಸ್ತ ಕುಟುಂಬಗಳಿಗೆ ಬೇಗನೆ ಪರಿಹಾರ ವಿತರಿಸಿ. ಪರಿಹಾರ ನೀಡಲು ಅಗತ್ಯವಿರುವ ದಾಖಲಾತಿಗಳನ್ನು ಒದಗಿಸಲು ನೆರವಾಗಿ, ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ವ್ಯವಸ್ಥಿತವಾಗಿ ಕೈಗೊಳ್ಳಿ ಎಂದರು.
ಗಣಿಗಾರಿಕೆ ಪ್ರದೇಶದಲ್ಲಿ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಇತ್ತೀಚಿನ ಬಿಸಲವಾಡಿ ಕ್ವಾರಿ ದುರಂತದಲ್ಲಿ ಮೃತಪಟ್ಟವರಿಗೆ ಕಾರ್ಮಿಕ ಇಲಾಖೆಯಿಂದ ಪರಿಹಾರ ನೀಡಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಮಾತನಾಡಿ ಗಣಿಗಾರಿಕೆ ಪ್ರದೇಶಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು. ಈ ಬಗ್ಗೆ ಪರಿಶೀಲಿಸಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಆನೆಗಳು ಇತ್ತೀಚೆಗೆ ಚಾಮರಾಜನಗರ ತಾಲೂಕಿನ ವಡ್ಗಲ್ಪುರ, ಹೊನ್ನಹಳ್ಳಿ ಇತರೆ ಭಾಗಗಳಲ್ಲಿ ಬೆಳೆ ನಾಶ ಮಾಡಿರುವ ಬಗ್ಗೆ ಪ್ರಸ್ತಾಪಿಸಿದ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅರಣ್ಯ ಇಲಾಖೆ ಈ ನಿಟ್ಟಿನಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜನೆ ಮಾಡಬೇಕು. ಕಾಡುಪ್ರಾಣಿಗಳ ಹಾವಳಿ ತಡೆಗೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.
ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರು ಮಾತನಾಡಿ ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೆಚ್ಚು ಕೆಲಸಗಳನ್ನು ನಿರ್ವಹಿಸಬೇಕು. ವಸತಿ ಯೋಜನೆಯಡಿ ಇರುವ ಸಣ್ಣ ಪ್ರಮಾಣದ ತಾಂತ್ರಿಕ ತೊಂದರೆಗಳನ್ನು ಬಗೆಹರಿಸಲು ಅಧಿಕಾರಿಗಳೇ ಖುದ್ದು ಗಮನಹರಿಸಬೇಕು. ಕ್ರೀಡಾಂಗಣಗಳ ಅಭಿವೃದ್ದಿಯಾಗಬೇಕು. ಜಲಜೀವನ್ ಮಿಷನ್ ಯೋಜನೆಯಡಿ ಕಾಮಗಾರಿಗಳನ್ನು ನಿಗದಿತ ಅವದಿಯೊಳಗೆ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಸಂಸದರ ಆದರ್ಶ ಗ್ರಾಮ, ಸಾರ್ವಜನಿಕ ಶಿಕ್ಷಣ ಇಲಾಖೆ, ಸಾಮಾಜಿಕ ಭದ್ರತಾ ಯೋಜನೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಂಗವಿಕಲರ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಲಾಯಿತು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್, ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕರಾದ ದೀಪ ಕಂಟ್ರಾಕ್ಟರ್, ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ ಕುಮಾರ್, ಡಿವೈಎಸ್ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಅಭಿವೃದ್ದಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ನಾಮನಿರ್ದೇಶಿತ ಸದಸ್ಯರಾದ ಲೋಕೇಶ್, ನಾಗೇಶ್, ಸರಸ್ವತಿ, ಮಲ್ಲೇಶಪ್ಪ, ಇತರೆ ಜನ ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
