ಚಾಮರಾಜನಗರ: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನಕ್ಕೆ ಬಳಸುವ ವಿದ್ಯುನ್ಮಾನ ಮತಯಂತ್ರ (ಇವಿಎಂ) ಮತ್ತು ವಿವಿ ಪ್ಯಾಟ್‌ಗಳ ಬಗ್ಗೆ ವ್ಯಾಪಕವಾಗಿ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಇವಿಎಂ, ವಿವಿ ಪ್ಯಾಟ್‌ಗಳ ಬಳಕೆ ಬಗ್ಗೆ ಮಾಧ್ಯಮ ಪ್ರತಿನಿಧಿಗಳು, ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಏರ್ಪಡಿಸಲಾಗಿದ್ದ ಪ್ರಾತ್ಯಕ್ಷಿಕೆ ಕಾರ್ಯಗಾರದಲ್ಲಿ ಅವರು ಮಾತನಾಡಿದರು.
ಚುನಾವಣೆಯಲ್ಲಿ ಬಳಸಲಾಗುತ್ತಿರುವ ವಿದ್ಯುನ್ಮಾನ ಮತಯಂತ್ರಗಳು, ಕಂಟ್ರೋಲ್ ಯೂನಿಟ್, ಬ್ಯಾಲೆಟ್ ಯೂನಿಟ್, ವಿವಿ ಪ್ಯಾಟ್ ಗಳ ಕಾರ್ಯ ಹಾಗೂ ಬಳಕೆ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಮತಗಟ್ಟೆ ಮಟ್ಟದಲ್ಲಿಯೂ ಈಗಾಗಲೇ ಜಾಗೃತಿ ಮೂಡಿಸುವ ಕಾರ್ಯ ಆರಂಭವಾಗಿದೆ ಎಂದರು.
ಮತಗಟ್ಟೆಗಳ ಸಂಖ್ಯೆಗಿಂತಲೂ ಹೆಚ್ಚು ಅಂದರೆ ಶೇ.೧೨೫ರಷ್ಟು ವಿದ್ಯುನ್ಮಾನ ಮತಯಂತ್ರಗಳನ್ನು ಇಟ್ಟುಕೊಳ್ಳಲಾಗಿದೆ. ವಿದ್ಯುನ್ಮಾನ ಮತಯಂತ್ರಗಳನ್ನು ವಿವಿಧ ಹಂತದ ರ್‍ಯಾಂಡಮೈಜೇಷನ್ ಮೂಲಕ ಹಂಚಿಕೆ ಮಾಡಲಾಗುತ್ತದೆ. ಚುನಾವಣೆಗೆ ಮತಗಟ್ಟೆ ಅಧಿಕಾರಿಗಳನ್ನು ನೇಮಕ ಮಾಡುವಾಗಲೂ ಸಹ ರ್‍ಯಾಂಡಮೈಜೇಷನ್ ಪ್ರಕ್ರಿಯೆ ನಡೆಸಲಾಗುತ್ತದೆ. ಪಾರದರ್ಶಕತೆ ಕಾಯ್ದುಕೊಂಡೆ ಎಲ್ಲಾ ಹಂತದ ಪ್ರಕ್ರಿಯೆಗಳು ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಚುನಾವಣೆ ಪೂರ್ವಭಾವಿಯಾಗಿ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಜಿಲ್ಲೆಯು ಕೇರಳ, ತಮಿಳುನಾಡು ರಾಜ್ಯದೊಂದಿಗೆ ಗಡಿ ಸಂಪರ್ಕ ಹೊಂದಿದೆ. ಹೀಗಾಗಿ ಮುಂಬರುವ ಚುನಾವಣೆ ವೇಳೆ ನೀತಿ ಸಂಹಿತೆ ಕಟ್ಟುನಿಟ್ಟಿನ ಪಾಲನೆಗೆ ಈಗಾಗಲೇ ಗಡಿ ರಾಜ್ಯಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ ಎಂದರು.
ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕತೆಯಿಂದ ಚುನಾವಣೆ ನಡೆಸುವ ನಿಟ್ಟಿನಲ್ಲಿ ಎಲ್ಲ ಕ್ರಮ ತೆಗೆದುಕೊಳ್ಳಲಾಗುತ್ತದೆ. ಚುನಾವಣಾ ಆಯೋಗದ ನಿರ್ದೇಶನ ಆದೇಶಗಳನ್ನು ಪಾಲನೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಮಾಸ್ಟರ್ ಟ್ರೈನರ್‌ಗಳಾಗಿ ನಿಯೋಜನೆಗೊಂಡಿರುವ ಹೇಮಂತ್ ಕುಮಾರ್, ತುಳಸಿರಾಮ್, ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಮಾಧ್ಯಮ ಪ್ರತಿನಿಧಿಗಳು ಇತರರು ಉಪಸ್ಥಿರಿದ್ದರು.