ಚಾಮರಾಜನಗರ: ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ವೈಯಕ್ತಿಕ ಹಾಗೂ ಸಮುದಾಯ ಶೌಚಾಲಯ, ಬೂದುನೀರು, ಕಪ್ಪುನೀರು ಮತ್ತು ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ಘಟಕಾಂಶಗಳ ಭೌತಿಕ ಮತ್ತು ಆರ್ಥಿಕ ಗುರಿಗೆ ಅನುಗುಣವಾಗಿ ಪ್ರಗತಿ ಸಾಧಿಸುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ದೇಶಕರಾದ ಗಂಗಾಧರಸ್ವಾಮಿ ಅವರು ಸೂಚಿಸಿದರು.
ನಗರದ ಜಿಲ್ಲಾ ಪಂಚಾಯಿತಿಯ ನೂತನ ಕೆ.ಡಿ.ಪಿ ಸಭಾಂಗಣದಲ್ಲಿಂದು ನಡೆದ ಸ್ವಚ್ಛ ಭಾರತ್ ಮಿಷನ್ (ಗ್ರಾ) ಮತ್ತು ಜಲಜೀವನ್ ಮಿಷನ್ ಯೋಜನೆಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸ್ವಚ್ಛ ಸಂಕೀರ್ಣ ಘಟಕ, ಮಲತ್ಯಾಜ್ಯ ನೀರು ನಿರ್ವಹಣೆ ಘಟಕ, ಮಿನಿ ಎಂ.ಆರ್.ಎಫ್ ಘಟಕಗಳನ್ನು ಹೋಬಳಿಗೆ ಒಂದರಂತೆ ನಿರ್ಮಿಸಬೇಕು. ಏಕಬಳಕೆಯ ಪ್ಲಾಸ್ಟಿಕ್‌ಗಳನ್ನು ಪ್ರತಿ ಗ್ರಾಮ ಪಂಚಾಯಿತಿಗಳಿಂದ ಸಂಗ್ರಹಿಸಿ, ಗ್ರಾಮೀಣ ರಸ್ತೆಗಳನ್ನು ನಿರ್ಮಾಣ ಮಾಡುವ ಅನುಷ್ಠಾನ ಇಲಾಖೆಗಳಾದ ಪಂಚಾಯತ್ ರಾಜ್ ಇಂಜಿನೀಯರಿಂಗ್ ವಿಭಾಗ ಮತ್ತು ಕೆ.ಆರ್.ಐ.ಡಿ.ಎಲ್ ವತಿಯಿಂದ ಖರೀದಿಸಿ ಡಾಂಬರ್ ರಸ್ತೆಯ ನಿರ್ಮಾಣದಲ್ಲಿ ಬಳಸಿಕೊಳ್ಳಬೇಕೆಂದು ತಿಳಿಸಿದರು.
ಜಲಜೀವನ್ ಮಿಷನ್ ಯೋಜನೆಗೆ ಸಂಬಂಧಿಸಿದಂತೆ ಬ್ಯಾಚ್ ೧, ೨, ೩ & ೪ ರ ಅಡಿಯಲ್ಲಿ ನಿಗಧಿತ ಗುರಿ ಅನುಸಾರ ಸಾಧಿಸಿದ ಪ್ರಗತಿ ಬಗ್ಗೆ ಅವಲೋಕಿಸಿದ ನಿರ್ದೇಶಕರು ವಾರ್ಷಿಕ ಮತ್ತು ಮಾಸಿಕ ಗುರಿಗಳಿಗೆ ಅನುಗುಣವಾಗಿ ಕಾರ್ಯಾತ್ಮಕ ಗೃಹ ನಳ ನೀರು ಸಂಪರ್ಕ ಕಾಮಗಾರಿಗಳ ಪ್ರಗತಿ, ನೀರು ಪರೀಕ್ಷಾ ಲ್ಯಾಬ್‌ಗಳ ಪ್ರಗತಿ, ಬಹುಗ್ರಾಮ ಕುಡಿಯುವ ನೀರು ಯೋಜನೆ ಪ್ರಗತಿ ಹಾಗೂ ಸಮುದಾಯ ವಂತಿಕೆಯ ಸಂಗ್ರಹಣೆ ಕುರಿತು ತಾಲ್ಲೂಕುವಾರು ಪ್ರಗತಿ ಪರಿಶೀಲಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ಮಾತನಾಡಿ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆ ಹಾಗೂ ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಗುಣಮಟ್ಟ ಕಾಯ್ದುಕೊಂಡು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮೈಸೂರು ವಿಭಾಗೀಯ ಅಧೀಕ್ಷಕರಾದ ಎಂ.ಎಸ್ ಕೃಷ್ಣಮೂರ್ತಿ ರವರು ಜಲಜೀವನ್ ಮಿಷನ್ ಯೋಜನೆಯ ತಾಂತ್ರಿಕ ಅಂಶಗಳನ್ನು ಸಭೆಯಲ್ಲಿ ವಿವರಿಸಿದರು.
ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕರು ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾ) ಜಿಲ್ಲಾ ನೋಡಲ್ ಅಧಿಕಾರಿ ಕೆ.ಬಿ. ಪ್ರಭುಸ್ವಾಮಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರಾದ ಗಂಗಾಧರಯ್ಯ, ಎಲ್ಲಾ ತಾಲ್ಲೂಕು ಪಂಚಾಯಿತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯ ಎಲ್ಲಾ ಜಿಲ್ಲಾ ಸಮಾಲೋಚಕರು, ಜಲ ಜೀವನ್ ಮಿಷನ್ ಯೋಜನೆಯ ಜಿಲ್ಲಾ ಯೋಜನಾ ವ್ಯವಸ್ಥಾಪಕರು, ಐ.ಎಸ್.ಐ ಸಿಬ್ಬಂದಿ ಐ.ಎಸ್.ಆರ್.ಎ ಸಿಬ್ಬಂದಿ, ಮನರೇಗಾ ಯೋಜನೆಯ ಜಿಲ್ಲಾ ಸಂಯೋಜಕರು, ಇತರರು ಸಭೆಯಲ್ಲಿ ಹಾಜರಿದ್ದರು.