
ಚಾಮರಾಜನಗರ:ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಹಯೋಗದೊಂದಿಗೆ ಭಾನುವಾರದಂದು ನಗರದ ಬಾಲಕಿಯರ ಬಾಲ ಮಂದಿರದಲ್ಲಿ ಬಾಲ್ಯ ವಿವಾಹ ಮುಕ್ತ ಭಾರತ, ಸುರಕ್ಷಿತ ಬಾಲ್ಯ, ಸುರಕ್ಷಿತ ಭಾರತ ವಿಷಯ ಕುರಿತು ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರಾದ ಎಂ. ಶ್ರೀಧರ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಇದೇ ವೇಳೆ ಮಾತನಾಡಿದ ಸದಸ್ಯ ಕಾರ್ಯದರ್ಶಿಯವರು ಮಕ್ಕಳ ಮೇಲೆ ಆಗುತ್ತಿರುವ ದೌರ್ಜನ್ಯ, ಬಾಲ್ಯ ವಿವಾಹದ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ಹಲವಾರು ಇಲಾಖೆಗಳು ಶ್ರಮವಹಿಸುತ್ತಿವೆ. ಹೆಣ್ಣು ಮಕ್ಕಳ ಕಡ್ಡಾಯ ಶಿಕ್ಷಣ, ಪೋಷಣೆ ಹಾಗೂ ಕಾನೂನು ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು. ಇತ್ತೀಚೆಗೆ ಅಪ್ರಾಪ್ತ ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ ಹಾಗೂ ಬಾಲ್ಯ ವಿವಾಹ ತಡೆಯಲು ಹಲವಾರು ಇಲಾಖೆಗಳು ಕಾರ್ಯನಿರ್ವಹಿಸುತ್ತಿರುವುದರಿಂದ ಯಾವುದೇ ಸಮಯದಲ್ಲೂ, ಎಲ್ಲಾದರೂ ಮಕ್ಕಳ ಮೇಲೆ ದೌರ್ಜನ್ಯ ಹಾಗೂ ಬಾಲ್ಯ ವಿವಾಹ ಕಂಡು ಬಂದಲ್ಲಿ ಮಕ್ಕಳ ಉಚಿತ ಸಹಾಯವಾಣಿ ೧೦೯೮ ಗೆ ದೂರವಾಣಿ ಕರೆ ಮಾಡಬಹುದಾಗಿದೆ ಎಂದು ತಿಳಿಸಿದರು.
ಮಕ್ಕಳು ಶಿಕ್ಷಣದ ಕಡೆ ಒತ್ತು ನೀಡಬೇಕು. ಮಕ್ಕಳಿಗೆ ಇರುವಂತಹ ಹಕ್ಕುಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು. ಪೋಷಕರು ಮಕ್ಕಳ ಪಾಲನೆ ಪೋಷಣೆಯಲ್ಲಿ ಹಾಗೂ ಶಿಕ್ಷಣ ಕೊಡಿಸುವಲ್ಲಿ ಗಮನಹರಿಸಬೇಕಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರಾದ ಎಂ. ಶ್ರೀಧರ ಸಲಹೆ ಮಾಡಿದರು.
