ಮೈಸೂರು, ನ.- ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಬಂಧನ ಖಂಡಿಸಿ ಬಿಜೆಪಿ ಮೈಸೂರು ನಗರ ಮತ್ತು ಗ್ರಾಮಾಂತರ ಯುವಮೋರ್ಚಾ ಘಟಕದ ವತಿಯಿಂದ ಗುರುವಾರ ಪ್ರತ್ಯೇಕ ಪ್ರತಿಭಟನೆ ನಡೆಸಲಾಯಿತು.
ನಗರದ ಗಾಂಧಿ ವೃತ್ತದ ಬಳಿ ಜಮಾವಣೆಗೊಂಡ ಬಿಜೆಪಿ ಮೈಸೂರು ನಗರ ಯುವಮೋರ್ಚಾ ಕಾರ್ಯಕರ್ತರು ಪಂಜು ಹಿಡಿದು ಮಹಾರಾಷ್ಟ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮಹಾರಾಷ್ಟ್ರ ಸರ್ಕಾರವು ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರು ಬಂಧಿಸುವ ಮೂಲಕ ಸಂವಿಧಾನದ ನಾಲ್ಕನೆ ಅಂಗವಾದ ಪತ್ರಿಕೋದ್ಯಮಕ್ಕೆ ದಕ್ಕೆಯನ್ನುಂಟುಮಾಡಿದೆ. ಕಾಂಗ್ರೆಸ್ ಮತ್ತು ಶಿವಸೇನೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಅರ್ನಬ್ ಗೋಸ್ವಾಮಿ ವಿರುದ್ಧ ಪಿತೂರಿ ನಡೆಸುತ್ತಿದ್ದು, ಕೂಡಲೇ ಅವರನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ನಗರ ಯುವಮೋರ್ಚಾ ಘಟಕದ ಅಧ್ಯಕ್ಷ ಎಂ.ಜೆ.ಕಿರಣ್ಗೌಡ, ಉಪಾಧ್ಯಕ್ಷ ಜಯಶಂಕರ್, ಎಸ್.ಭರತ್, ಸಂತೋಷ್, ನಿಸಾಂತ್, ಕಾರ್ತಿಕ್, ಸಚಿನ್, ಕಾವ್ಯ, ನಿತಿನ್, ಪ್ರಮೋದ್ ಮತ್ತಿತರರು ಉಪಸ್ಥಿತರಿದ್ದರು.
ಕೋರ್ಟ್ ಎದುರು: ಬಿಜೆಪಿ ಮೈಸೂರು ಗ್ರಾಮಾಂತರ ಯುವಮೋರ್ಚಾ ಘಟಕದ ವತಿಯಿಂದ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರ ಮೇಲೆ ದೌರ್ಜನ್ಯ ನಡೆಸಿ, ಬಂಧಿಸಿರುವ ಮಹಾರಾಷ್ಟ್ರ ಸರ್ಕಾರದ ಕ್ರಮವನ್ನು ಖಂಡಿಸಿ ಜಿಲ್ಲಾ ನ್ಯಾಯಾಲದ ಎದುರು ಪ್ರತಿಭಟನೆ ನಡೆಸಲಾಯಿತು.
ಗ್ರಾಮಾಂತರ ಯುವಮೋರ್ಚಾ ಘಟಕದ ಅಧ್ಯಕ್ಷ ಹೆಚ್.ಎಂ.ವಿಜಯಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಲ್ಲಿ ಮಹಾರಾಷ್ಟ್ರದ ಸರ್ಕಾರ ವಿರುದ್ಧ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಲ್ಲಿ ಬಿಜೆಪಿ ಯುವ ಮುಖಂಡರಾದ ಚೇತನ್, ಶಿವಕುಮಾರ್, ಮೋಹನ್, ಮಧುರಾಜ್, ನವೀನ್, ಬಾಬು ಮತ್ತಿತರು ಹಾಜರಾಗಿದ್ದರು.