
ಚಾಮರಾಜನಗರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸೌಲಭ್ಯ ಪ್ರತಿಯೊಬ್ಬರಿಗೂ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿಯೂ ಆಗಿರುವ ಬಿ ವಿ ಕಾವೇರಿ ಅವರು ತಿಳಿಸಿದರು.
ನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿಂದು ನಡೆದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯು ನಿರೀಕ್ಷಿತ ಪ್ರಗತಿ ಸಾಧಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಸಾರ್ವಜನಿಕರಿಗೂ ಸೌಲಭ್ಯಗಳನ್ನು ತಲುಪಿಸಲು ಪ್ರಾಮಾಣಿಕ ಸೇವೆ ಒದಗಿಸಬೇಕಾಗಿದೆ. ನಿಗದಿತ ಮಾನವದಿನಗಳನ್ನು ಸೃಜಿಸಿ ಪ್ರತಿ ಗ್ರಾಮಮಟ್ಟದಲ್ಲಿ ಎಲ್ಲರಿಗೂ ಯೋಜನೆಯನ್ನು ಪರಿಣಾಮಕಾರಿಯಾಗಿ ತಲುಪಿಸಲು ಸಕ್ರಿಯರಾಗಬೇಕು ಎಂದು ಸೂಚಿಸಿದರು.
ಪ್ರಸಕ್ತ ಸಾಲಿನಲ್ಲಿ ವಿವಿಧ ಇಲಾಖೆಗಳು ಭೌತಿಕ ಹಾಗೂ ಅರ್ಥಿಕ ಗುರಿಯನ್ನು ನಿಗದಿಪಡಿಸಿದ ಅವಧಿಯಲ್ಲಿ ಪೂರ್ಣಗೊಳಿಸುವುದು ಅವಶ್ಯವಾಗಿದೆ. ಜಿಲ್ಲೆಯಲ್ಲಿ ಈ ಬಾರಿ ಅತಿವೃಷ್ಠಿ ಉಂಟಾಗಿರುವ ಹಿನ್ನೆಲೆಯಲ್ಲಿ ಯೋಜನೆಯ ಅನುಷ್ಠಾನಗೊಳಿಸುವ ಅಧಿಕಾರಿಗಳು ಯಾವುದೇ ಸಬೂಬು ಹೇಳದೇ ನರೇಗಾ ಯೋಜನೆಯ ಪ್ರಗತಿಗಾಗಿ ತ್ವರಿತವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದರು.
ಶಿಥಿಲಗೊಂಡ ಅಂಗನವಾಡಿ ಕಟ್ಟಡಗಳು, ಶಾಲೆ ಕೊಠಡಿಗಳು, ಶಾಲಾ ಮೈದಾನ, ಶಾಲಾ ಕಾಂಪೌಂಡ್ ನಿರ್ಮಾಣ, ಇತರೆ ಕಾಮಗಾರಿಗಳನ್ನು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುದಾನ ಬಳಸಿಕೊಂಡು ಕಾಮಗಾರಿಗಳನ್ನು ಅದಷ್ಟು ಬೇಗನೇ ಪೂರ್ಣಗೊಳಿಸಬೇಕು. ಅಂಗನವಾಡಿಗಳಲ್ಲಿ ಕೈತೋಟ ನಿರ್ವಹಣೆಗೂ ಸಹ ನರೇಗಾ ಅನುದಾನ ಬಳಸಿಕೊಳ್ಳಬೇಕು. ಆರೋಗ್ಯ ಇಲಾಖೆಯಿಂದ ಅಂಗನವಾಡಿ ಮಕ್ಕಳಿಗೆ ನಿಗದಿತ ಅವಧಿಯಲ್ಲಿ ಆರೋಗ್ಯ ತಪಾಸಣೆ ಮಾಡಿಸಬೇಕು ಎಂದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ಆಯಕ್ತರಾದ ಶಿಲ್ಪಾನಾಗ್ ಅವರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕುರಿತು ಜಿಲ್ಲೆಯಲ್ಲಿ ಆಗಿರುವ ಪ್ರಗತಿಯನ್ನು ಸುದೀರ್ಘವಾಗಿ ಪರಿಶೀಲಿಸಿದರು.
ಪ್ರಸಕ್ತ ಸಾಲಿನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಫಲಾನುಭವಿಗಳನ್ನು ಗುರುತಿಸಿ ಜಾಬ್ ಕಾರ್ಡ್ಗಳನ್ನು ವಿತರಿಸಬೇಕು. ಜಿಲ್ಲೆಯ ಎಲ್ಲಾ ೧೩೦ ಗ್ರಾಮ ಪಂಚಾಯಿತಿಗಳು ಸಹ ಆರೋಗ್ಯ ಜಾಗೃತಿ ಕಾರ್ಯಕ್ರಮ(ಐ.ಇ.ಸಿ)ಗಳನ್ನು ಹಮ್ಮಿಕೊಳ್ಳಬೇಕು. ನರೇಗಾ ಯೋಜನೆಯ ಪ್ರಗತಿಗಾಗಿ ರಾಜ್ಯದಲ್ಲಿ ಕಳೆದ ೫ ವರ್ಷಗಳ ಮಾಹಿತಿ ಆಧಾರದಲ್ಲಿ ಆಗಿರುವ ಪ್ರಗತಿಯನ್ನು ವಿಶ್ಲೇಷಿಸಬೇಕು ಎಂದರು.
ಪ್ರತಿತಿಂಗಳು ಅಥವಾ ಪ್ರತಿವಾರ ಯೋಜನೆಯ ಅನುಷ್ಟಾನ ಅಧಿಕಾರಿಗಳು ಆಯಾ ಗ್ರಾಮ ಪಂಚಾಯಿತಿಗಳಲ್ಲಿ ಯೋಜನೆಯ ಅರಿವು ಶಿಬಿರಗಳನ್ನು ಏರ್ಪಡಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ಖಾತರಿಪಡಿಸಿ ಯೋಜನೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸಬೇಕು. ಎಲ್ಲಾ ತಾಲೂಕುಗಳಲ್ಲಿಯೂ ಗ್ರಾಮ ಕಾಯಕ ಮಿತ್ರರನ್ನು ನಿಯೋಜಿಸಿಕೊಂಡು ಯೋಜನೆಯ ಸರ್ವಾಂಗೀಣ ಅಭಿವೃದ್ಧಿಗೆ ಸಂಬಂಧಪಟ್ಟ ಅಧಿಕಾರಿಗಳು ಮುಂದಾಗಬೇಕು ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿಗಳಲ್ಲಿ ಶಿಕ್ಷಣ ಹಾಗೂ ಆರೋಗ್ಯ ಜಾಗೃತಿ ಕಾರ್ಯಕ್ರಮ ಆಯೋಜಿಸಲು ಈ ವರ್ಷ ೭೨ ಲಕ್ಷ ಅನುದಾನ ಲಭ್ಯವಿದೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಪ್ರಗತಿ ಮನೆಮನೆಗೂ ಭೇಟಿ ನೀಟಿ ವೈಯಕ್ತಿಕ ಫಲಾನುಭವಿಗಳನ್ನು ಗುರುತಿಸಿ ಲಭ್ಯವಿರುವ ಅನುದಾನವನ್ನು ಸಂಪೂರ್ಣವಾಗಿ ಬಳಕೆ ಮಾಡಿಕೊಳ್ಳಬೇಕು. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರಿಗೂ ಅವಕಾಶ ಮಾಡಿಕೊಡಬೇಕು ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿಗಳಲ್ಲಿ ಜನರಿಗೆ ಅನುಕೂಲವಾಗುವಂತೆ ಮಾನವ ದಿನಗಳ ಸೃಜನೆ, ಮಹಿಳೆಯರ ಸಹಭಾಗಿತ್ವ, ಸಾಮಗ್ರಿಗಳ ವೆಚ್ಚ, ಕಾಮಗಾರಿ ಪೂರ್ಣಗೊಳಿಸುವಿಕೆ, ಕಾಯಕಬಂಧು, ಸಮಯಕ್ಕೆ ಸರಿಯಾಗಿ ಕೂಲಿ ನೀಡುವುದು, ಸಾಮಾಜಿಕ ಲೆಕ್ಕ ಪರಿಶೋಧನೆ, ಇನ್ನಿತರೆ ವಿಭಾಗಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ನಿರೀಕ್ಷಿತ ವೇಗ ಕಂಡುಕೊಳ್ಳಬೇಕು. ಈ ಸಂಬಂಧ ಪಂಚಾಯಿತಿಗಳಿಗೆ ಯೋಜನಾ ಅನುಷ್ಠಾನಗೊಳಿಸುವ ಇಲಾಖೆಗಳು (ಲೈನ್ ಡಿಪಾರ್ಟ್ಮೆಂಟ್) ಅಗತ್ಯ ಸಹಕಾರ ನೀಡಬೇಕು ಎಂದರು.
ಸಭೆಯ ಆರಂಭದಲ್ಲಿ ದೂರದೃಷ್ಠಿ ಯೋಜನೆಯಡಿ ಚಾಮರಾಜನಗರ ತಾಲೂಕಿನ ಯರಗಂಬಳ್ಳಿ, ಗುಂಡ್ಲುಪೇಟೆ ತಾಲೂಕಿನ ಹುಂಡೀಪುರ, ಕೊಳ್ಳೇಗಾಲ ತಾಲೂಕಿನ ಸಿದ್ದಯ್ಯನಪುರ, ಯಳಂದೂರು ತಾಲೂಕಿನ ಮದ್ದೂರು ಹಾಗೂ ಹನೂರು ತಾಲೂಕಿನ ಲೊಕ್ಕನಹಳ್ಳಿ ಗ್ರಾಮ ಪಂಚಾಯಿತಿಗಳು ೨೦೨೩-೨೪ರಿಂದ ೨೦೨೭-೨೮ರವರೆಗೆ ೫ ವರ್ಷಗಳ ಅವಧಿಯ ಸಮಗ್ರ ಅಭಿವೃಧಿಗೆ ಅಳವಡಿಸಿಕೊಂಡಿರುವ ಕ್ರಿಯಾಯೋಜನೆಯನ್ನು ಸಭೆಯಲ್ಲಿ ವಿವರಿಸಲಾಯಿತು.
ದೂರದೃಷ್ಠಿ ಯೋಜನೆಯಲ್ಲಿ ಗ್ರಾಮ ಪಂಚಾಯಿತಿಮಟ್ಟದಲ್ಲಿ ನಮ್ಮ ಗ್ರಾಮ, ನಮ್ಮ ಯೋಜನೆಯಲ್ಲಿ ಜನರ ಪಾಲ್ಗೊಳ್ಳುವಿಕೆಯ ಮಹತ್ವ, ಆಡಳಿತ ಮಂಡಳಿಗಳ ರಚನೆ, ಸ್ಥಾಯಿ ಸಮಿತಿಗಳ ರಚನೆ, ಗ್ರಾಮ ಯೋಜನಾ ಸಮಿತಿ ಸಭೆ ಹಾಗೂ ಸಾಮಾನ್ಯ ಸಭೆಗಳ ಆಯೋಜನೆ, ಗ್ರಾಮ ಹಾಗೂ ವಾರ್ಡ್ ಸಭೆಗಳ ಆಯೋಜನೆ, ದ್ವಿತೀಯ ದತ್ತಾಂಶಗಳ ಸಂಗ್ರಹಣಾ ತರಬೇತಿ, ಗುಂಪು ಚರ್ಚೆ. ಸಹಭಾಗಿ ಗ್ರಾಮೀಣ ಸಮೀಕ್ಷೆ, ಇತರೆ ಅಂಶಗಳ ಬಗ್ಗೆ ಸಮಗ್ರ ವರದಿಯನ್ನು ಪವರ್ ಪಾಯಿಂಟ್ ಮೂಲಕ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಮತ್ತು ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಸಭೆಯಲ್ಲಿ ಪ್ರಸ್ತುತಪಡಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ ಗಾಯತ್ರಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಗ್ರಾಮಿಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀಶೈಲಾ ದಿದ್ದಿಮನಿ, ಇತರರು ಸಭೆಯಲ್ಲಿ ಹಾಜರಿದ್ದರು.
