ಹೆಣ್ಣು ಮಕ್ಕಳು ಎದುರಿಸುವ ಸಮಸ್ಯೆ ಬಗ್ಗೆ ಜಾಗೃತಿ ಅಗತ್ಯ
ಗುಂಡ್ಲುಪೇಟೆ: ವಿಶ್ವದಾದ್ಯಂತ ಹೆಣ್ಣು ಮಕ್ಕಳು ಎದುರಿಸುವಂತಹ ಗೃಹ ಹಿಂಸೆ, ಭೇದಭಾವ ಮತ್ತು ಬಾಲ್ಯವಿವಾಹದಂತಹ ಹಲವಾರು ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವುದು ಇದರ ಉದ್ದೇಶವಾಗಿದೆ ಎಂದು ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಅಂಕಪ್ಪ ತಿಳಿಸಿದರು.
ಗುಂಡ್ಲುಪೇಟೆಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆಣ್ಣು ಮಕ್ಕಳ ದಿನಾಚರಣೆಯನ್ನ ಆಚರಣೆ ಮಾಡಿ ಮಾತನಾಡಿದರು.
ಹೆಣ್ಣು ಮಕ್ಕಳ ಸಂಖ್ಯೆಯು ಇಂದಿನ ದಿನಗಳಲ್ಲಿ ಗಣನೀಯ ಪ್ರಮಾಣದಲ್ಲಿ ಕಡಿಮೆ ಆಗುತ್ತಿದೆ, ಇದಕ್ಕೆ ಕಾರಣಗಳು ಹಲವಾರು ಇರಬಹುದು. ಆದರೆ ಮುಂದೊಂದು ದಿನ ಇದು ದೊಡ್ಡ ಮಟ್ಟದಲ್ಲಿ ಲಿಂಗಾನುಪಾತದಲ್ಲಿ ಗಂಭೀರ ಸಮಸ್ಯೆ ಉಂಟು ಮಾಡಬಹುದು. ಭಾರತದಲ್ಲೂ ಈ ಸಮಸ್ಯೆಯು ಕಾಡಲಿದೆ ಎಂದು ತಿಳಿಸಿದರು.
ಹೆಣ್ಣು ಹಲವಾರು ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇದರಲ್ಲಿ ಪ್ರಮುಖವಾಗಿ ಹೆಣ್ಣುಭ್ರೂಣ ಹತ್ಯೆ, ಲಿಂಗಭೇದ, ಲೈಂಗಿಕ ಕಿರುಕುಳ ಇತ್ಯಾದಿಗಳು. ಇಂತಹ ಸಮಸ್ಯೆ ನಿವಾರಣೆ ಮಾಡಲು ಹೆಣ್ಣು ಮಕ್ಕಳ ಬಗ್ಗೆ ಜಾಗೃತಿ ಮೂಡಿಸುವುದು ಅತೀ ಅಗತ್ಯವಾಗಿದೆ. ಹೆಣ್ಣು ಮಕ್ಕಳ ಅಂತಾರಾಷ್ಟ್ರೀಯ ದಿನ, ಇದನ್ನು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನಾಗಿಯೂ ಆಚರಿಸಲಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ವೈದ್ಯಾಧಿಕಾರಿ ಮಂಜುನಾಥ್, ವೈದ್ಯರಾದ ಡಾ.ವಿಕ್ರಂ ಸೇರಿದಂತೆ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಹಾಜರಿದ್ದರು.
ವರದಿ: ಬಸವರಾಜು ಎಸ್ ಹಂಗಳ