ಚಾಮರಾಜನಗರ: ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಳೆ ಹಾಗೂ ಪ್ರಕೃತಿ ವಿಕೋಪದಿಂದ ಹಾನಿಗೀಡಾಗಿರುವ ಬೆಳೆ, ವಸತಿಯ ವಿವಿಧ ಪ್ರದೇಶಗಳಿಗೆ ಕರ್ನಾಟಕ ರಾಜ್ಯ ಮಿನರಲ್ಸ್ ಕಾರ್ಪೋರೇಷನ್ ನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರಾದ ಬಿ.ಬಿ. ಕಾವೇರಿ ಅವರು ಇಂದು ಭೇಟಿ ನೀಡಿ ಪರಿಶೀಲಿಸಿದರು.
ಕೊಳ್ಳೇಗಾಲ ತಾಲೂಕಿನ ಉತ್ತಂಬಳ್ಳಿ ಗ್ರಾಮದಲ್ಲಿ ಮಳೆಯಿಂದ ಕುಸಿದು ಹೋಗಿರುವ ಮನೆಯನ್ನು ವೀಕ್ಷಿಸಿದರು. ಅಧಿಕಾರಿಗಳಿಂದ ಪ್ರಕರಣ ಸಂಬಂಧ ಮಾಹಿತಿ ಪಡೆದುಕೊಂಡರು. ಕುಂತೂರಿನಲ್ಲಿ ಸತತ ಮಳೆಯಿಂದ ಹಾನಿಗೀಡಾಗಿರುವ ಉದ್ದು ಬೆಳೆಯನ್ನು ವೀಕ್ಷಿಸಿದರು. ಸಂಬಂಧಿಸಿದ ಜಮೀನಿನ ರೈತರೊಂದಿಗೆ ಸಮಾಲೋಚಿಸಿದ ಉಸ್ತುವಾರಿ ಕಾರ್ಯದರ್ಶಿಯವರು ಬೆಳೆಗೆ ಮಾಡಲಾದ ವೆಚ್ಚ ಮತ್ತಿತ್ತರ ವಿವರಗಳನ್ನು ಪಡೆದುಕೊಂಡರು.
ಟಗರುಪುರ ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿಯೂ ಸಹ ಮಳೆಯಿಂದ ಹಾನಿಗೆ ಒಳಗಾಗಿರುವ ಉದ್ದು ಬೆಳೆಯನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಅಲ್ಲಿನ ರೈತರು ಮಳೆಯಿಂದ ನಷ್ಟವಾಗಿರುವ ಬೆಳೆ ಸಂಬಂಧ ವಿವರವಾದ ಮಾಹಿತಿಯನ್ನು ನೀಡಿದರು. ತದನಂತರ ಯಳಂದೂರು ತಾಲುಕಿನ ಕೆಸ್ತೂರು ಗ್ರಾಮ ವ್ಯಾಪ್ತಿಯಲ್ಲಿ ಹಾನಿಗೀಡಾಗಿರುವ ಬೆಳೆಗಳನ್ನು ಪರಿಶೀಲಿಸಿದರು. ಹಾನಿಯಾಗಿರುವ ಬೆಳೆಯ ವಿಸ್ತೀರ್ಣ, ಅಂದಾಜು ನಷ್ಟ, ಇನ್ನಿತರ ವಿವರಗಳನ್ನು ಕೃಷಿ ಅಧಿಕಾರಿಗಳು ಒದಗಿಸಿದರು.
ಕೊಳ್ಳೇಗಾಲ ತಾಲೂಕಿನ ಜಕ್ಕಹಳ್ಳಿಯಲ್ಲಿ ಹಾನಿಗೀಡಾಗಿರುವ ಬಾಳೆ, ತೆಂಗು, ಮುಸುಕಿನಜೋಳ ಬೆಳೆಯನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರು ವೀಕ್ಷಿಸಿದರು. ಮಳೆಯಿಂದ ಭಾಗಶಃ ಹಾನಿಯಾಗಿರುವ ಈರುಳ್ಳಿ ಶೇಖರಣಾ ಘಟಕವನ್ನು ಪರಿಶೀಲಿಸಿದರು.
ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಕೆ.ಎಂ. ಗಾಯತ್ರಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ತಹಶೀಲ್ದಾರರಾದ ಮಂಜುಳಾ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮಹೇಶ್, ಉಮೇಶ್, ಕೃಷಿ ಇಲಾಖೆ ಉಪನಿರ್ದೇಶಕರಾದ ಸೋಮಶೇಖರ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಶಿವಪ್ರಸಾದ್, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಇಬ್ರಾಹಿಂ ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು.
ಮಳೆ ಪ್ರಕೃತಿ ವಿಕೋಪದಿಂದ ಉಂಟಾದ ಹಾನಿ ಪ್ರಕರಣಗಳಿಗೆ ೪೮ ಗಂಟೆಯೊಳಗೆ ಪರಿಹಾರ ವಿತರಿಸಿ: ಮಳೆ ಹಾಗೂ ಪ್ರಕೃತಿ ವಿಕೋಪದಿಂದಾಗಿ ಉಂಟಾದ ನಷ್ಟ ಪ್ರಕರಣಗಳಿಗೆ ೨೪ ರಿಂದ ೪೮ ಗಂಟೆಯೊಳಗೆ ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ (ಎನ್.ಡಿ.ಆರ್.ಎಫ್) ಮಾರ್ಗಸೂಚಿ ಅನ್ವಯ ಪರಿಹಾರ ವಿತರಿಸಬೇಕು ಎಂದು ಕರ್ನಾಟಕ ರಾಜ್ಯ ಮಿನರಲ್ಸ್ ಕಾರ್ಪೋರೇಷನ್ ನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರಾದ ಬಿ.ಬಿ. ಕಾವೇರಿ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕೊಳ್ಳೇಗಾಲದ ಪ್ರವಾಸಿಮಂದಿರದಲ್ಲಿಂದು ಪ್ರಕೃತಿ ವಿಕೋಪ ಮತ್ತು ಮಳೆ ಹಾನಿ ಪ್ರಕರಣಗಳ ಕುರಿತು ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಕೃತಿ ವಿಪತ್ತು ಹಾಗೂ ಮಳೆಯಿಂದ ಹಾನಿ ಸಂಭವಿಸಿದ ಸ್ಥಳಕ್ಕೆ ಅಧಿಕಾರಿಗಳು ಕೂಡಲೇ ಭೇಟಿ ನೀಡಿ ಪರಿಶೀಲಿಸಬೇಕು. ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆ ಅಧಿಕಾರಿಗಳು ತೆರಳಿ ಜಂಟಿ ಸಮೀಕ್ಷೆ ನಡೆಸಿ ತುರ್ತಾಗಿ ವರದಿ ಸಲ್ಲಿಸಬೇಕು. ನಷ್ಟಕ್ಕೆ ಒಳಗಾದವರಿಗೆ ಅತಿ ಶೀಘ್ರವಾಗಿ ಪರಿಹಾರ ತಲುಪಿಸಬೇಕು. ವಿಳಂಬ ಧೋರಣೆ ಅನುಸರಿಸಬಾರದು ಎಂದು ಕಾವೇರಿಯವರು ತಿಳಿಸಿದರು.
ಮಳೆಯಿಂದ ಹಾನಿಗೀಡಾಗಿರುವ ಶಾಲೆ, ಅಂಗನವಾಡಿಗಳನ್ನು ಗುರುತಿಸಿ ಹಾನಿಯ ಪ್ರಮಾಣವನ್ನು ವರದಿ ಮಾಡಬೇಕು. ಕೊಠಡಿಗಳು ಶಿಥಿಲವಾಗಿದ್ದರೆ ಸುರಕ್ಷಿತ ಕೊಠಡಿಗಳಿಗೆ ತರಗತಿಗಳನ್ನು ಸ್ಥಳಾಂತರ ಮಾಡಬೇಕು. ಶಾಲಾ, ಅಂಗನವಾಡಿ ಸಾಮಾಗ್ರಿಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರಿಸಬೇಕು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಈ ಬಗ್ಗೆ ಹೆಚ್ಚು ನಿಗಾ ವಹಿಸಬೇಕೆಂದು ನಿರ್ದೇಶನ ನೀಡಿದರು.
ಕಬಿನಿ, ಕೆ.ಆರ್.ಎಸ್ ಜಲಾಶಯಗಳು ಭರ್ತಿಯಾದ ಸಂದರ್ಭದಲ್ಲಿ ಹೊರಬಿಡಲಾಗುವ ನೀರಿನಿಂದ ಕೊಳ್ಳೇಗಾಲ ತಾಲೂಕಿನ ಕೆಲ ಗ್ರಾಮಗಳಲ್ಲಿ ಉಂಟಾಗಬಹುದಾದ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಪೂರ್ವ ಸಿದ್ದತೆ ಇರಬೇಕು. ಸುರಕ್ಷಿತ ಸ್ಥಳಗಳಿಗೆ ಜನರ ಸ್ಥಳಾಂತರ, ಕಾಳಜಿ ಕೇಂದ್ರಗಳ ಸ್ಥಾಪನೆ, ಜಾನುವಾರುಗಳಿಗೆ ಆಶ್ರಯ ಸೇರಿದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳಿಗೆ ಅಧಿಕಾರಿಗಳು ಗಮನಹರಿಸಬೇಕು ಎಂದರು.
ಕಾಲುವೆಗಳಲ್ಲಿ ಹೂಳು ತೆಗೆಯಬೇಕು. ಮಳೆ ಸಂದರ್ಭದಲ್ಲಿ ನಗರ, ಪಟ್ಟಣ ಪ್ರದೇಶಗಳಲ್ಲಿಯೂ ತೊಂದರೆಯಾಗದಂತೆ ವಹಿಸಬೇಕಿರುವ ಕ್ರಮಗಳಿಗೆ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ವಿದ್ಯುತ್ ಪ್ರಸರಣ ಇಲಾಖೆಗಳು ಸಹ ಮುಂಜಾಗ್ರತೆ ವಹಿಸಬೇಕು. ಮಳೆ ಪ್ರವಾಹ ಸಮಯದಲ್ಲಿ ಹರಡಬಹುದಾದ ಸಾಂಕ್ರಾಮಿಕ ರೋಗಗಳ ತಡೆಗೆ ಆರೋಗ್ಯ ಅಧಿಕಾರಿಗಳು ವಿಶೇಷ ಕಾಳಜಿ ವಹಿಸಬೇಕು ಎಂದು ಕಾವೇರಿಯವರು ತಿಳಿಸಿದರು.
ಕೃಷಿ ಚಟುವಟಿಕೆಗಳಿಗೆ ಪೂರಕವಾಗಿರುವ ರಸಗೊಬ್ಬರ, ಬಿತ್ತನೆ ಬೀಜ ಇನ್ನಿತರ ಪರಿಕರಗಳಿಗೆ ಯಾವುದೇ ತೊಂದರೆಯಾಗಬಾರದು. ಜಿಲ್ಲೆಗೆ ಅಗತ್ಯವಿರುವ ಪ್ರಮಾಣದಲ್ಲಿ ಎಲ್ಲವನ್ನೂ ಪೂರೈಸಬೇಕು. ಜಾನುವಾರುಗಳಿಗೆ ಮೇವು ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿ ಇರಬೇಕು. ಕುಡಿಯುವ ನೀರಿನ ಸಮಸ್ಯೆಗಳು ತಲೆದೋರದಂತೆ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕೆಂದು ಸೂಚಿಸಿದರು.
ಜನರ ಬಳಿ ತೆರಳಿ ಸಮಸ್ಯೆಗಳನ್ನು ಆಲಿಸಬೇಕು. ಅಧಿಕಾರಿಗಳು ವ್ಯಾಪಕ ಪ್ರವಾಸ ಕೈಗೊಂಡು ಕುಂದು ಕೊರತೆ ವಿಚಾರಿಸಬೇಕು. ಸಾರ್ವಜನಿಕರ ಅಹವಾಲುಗಳಿಗೆ ಸೂಕ್ತ ಸ್ಪಂದನೆ ಸಿಗಬೇಕು. ಅಗತ್ಯ ಪರಿಹಾರಗಳನ್ನು ಕಾಲಮಿತಿಯೊಳಗೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರಾದ ಬಿ.ಬಿ. ಕಾವೇರಿ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಕೆ.ಎಂ. ಗಾಯತ್ರಿ ಅವರು ಜಿಲ್ಲೆಯಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಸಭೆಯಲ್ಲಿ ವಿವರಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್ ರಾಜ್, ತಹಶೀಲ್ದಾರರಾದ ಮಂಜುಳಾ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮಹೇಶ್, ಕೃಷಿ ಇಲಾಖೆ ಉಪನಿರ್ದೇಶಕರಾದ ಸೋಮಶೇಖರ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಶಿವಪ್ರಸಾದ್, ಪಶುಪಾಲನೆ ಇಲಾಖೆಯ ಉಪನಿರ್ದೇಶಕರಾದ ಸುರೇಶ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ವಿನಯ್ ಕುಮಾರ್, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಇಬ್ರಾಹಿಂ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.