ಚಾಮರಾಜನಗರ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಸಂದರ್ಭದಲ್ಲಿ ನಿಯಮ ೪(೨) ಮತ್ತು ೪(೪) ಅನ್ನು ಪರಿಣಾಮಕಾರಿಯಾಗಿ ಅನುಷ್ಠಾನಮಾಡುವ ಸಂಬಂಧ ಇಂದು ನಡೆದ ದೌರ್ಜನ್ಯ ಪ್ರಕರಣಗಳ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ವಿವರವಾಗಿ ಚರ್ಚಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗದ ದೌರ್ಜನ್ಯ ಪ್ರಕರಣಗಳ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು.
ಸಭೆಯ ಆರಂಭದಲ್ಲಿ ಜಿಲ್ಲಾಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗದ ದೌರ್ಜನ್ಯ ಪ್ರಕರಣಗಳ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ನಾಮನಿರ್ದೇಶಿತ ಸದಸ್ಯರು ಮಾತನಾಡಿ ದೌರ್ಜನ್ಯ ಪ್ರಕರಣಗಳಲ್ಲಿ ಜಿಲ್ಲಾದ್ಯಂತ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಆಗುತ್ತಿರುವ ಸಮಸ್ಯೆ, ಕುಂದುಕೊರತೆಗಳನ್ನು ಸಭೆಯಲ್ಲಿ ವಿವರಿಸಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗದ ದೌರ್ಜನ್ಯ ಪ್ರಕರಣಗಳ ಇತ್ಯರ್ಥಗಳಿಗೆ ಸಂಬಂಧಿಸಿದಂತೆ ನಿಯಮ ೪(೨)ರಲ್ಲಿ ದೌರ್ಜನ್ಯ ಪ್ರಕರಣಗಳನ್ನು ನ್ಯಾಯಯುತವಾಗಿ ಇತ್ಯರ್ಥಪಡಿಸಲು ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳು ಮುಂದಾಗಬೇಕು. ನಿಯಮ ೪(೪)ರಲ್ಲಿ ಪ್ರತಿತಿಂಗಳ ೨೦ನೇ ದಿನಾಂಕದೊಳಗೆ ಸಮಿತಿ ಸಭೆ ಕರೆದು ಬಾಕಿ ಪ್ರಕರಣಗಳನ್ನು ಇತ್ಯರ್ಥಪಡಿಸಲು ಆದ್ಯತೆ ನೀಡಬೇಕು. ಪ್ರಕರಣದ ಇತ್ಯರ್ಥದಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಕಾರ್ಯವೈಖರಿಯನ್ನು ಖುದ್ದಾಗಿ ಪರಿಶೀಲಿಸಿ ಪರಾಮರ್ಶಿಸಬೇಕು ಎಂದರು.
ನಿಯಮ ೪(೨) ಮತ್ತು ೪(೪) ರ ಸಮರ್ಪಕ ಅನುಷ್ಠಾನದಿಂದ ಜಿಲ್ಲೆಯಲ್ಲಿ ಸಂಭವಿಸುವ ದೌರ್ಜನ್ಯ ಪ್ರಕರಣಗಳನ್ನು ತಡೆಯಬಹುದಾಗಿದೆ. ದೌರ್ಜನ್ಯ ಪ್ರಕರಣಗಳ ನಿವಾರಣೆಗಾಗಿ ಅರಿವು ಕಾರ್ಯಾಗಾರಗಳನ್ನು ಏರ್ಪಡಿಸಬೇಕು. ಎಲ್ಲಾ ಜನಪ್ರತಿನಿಧಿಗಳನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ದೌರ್ಜನ್ಯ ಪ್ರಕರಣಗಳ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಗೆ ಆಹ್ವಾನಿಸಬೇಕು. ದೌರ್ಜನ್ಯ ಪ್ರಕರಣಗಳನ್ನು ಪರಿಹರಿಸುವಲ್ಲಿ ಜನಪ್ರತಿನಿಧಿಗಳ ಪಾತ್ರದ ಅವಶ್ಯವಿದೆ ಎಂದು ಸದಸ್ಯರು ಸಭೆಯಲ್ಲಿ ಮನವಿ ಮಾಡಿದರು.
ಸುಳ್ವಾಡಿ ದುರಂತದಲ್ಲಿ ವಿಷಪ್ರಾಶನಕ್ಕೆ ಒಳಗಾದವರ ಆರೋಗ್ಯ ಇನ್ನೂ ಸುಧಾರಿಸಿಲ್ಲ. ಇದಕ್ಕಾಗಿ ಪ್ರತಿ ೩-೪ ತಿಂಗಳಿಗೊಮ್ಮೆ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ಅಗತ್ಯ ತಪಾಸಣೆ ಮಾಡಿಸಬೇಕು. ಸುಳ್ವಾಡಿ ದುರಂತದಲ್ಲಿ ೯ ಪ್ರಕರಣದಲ್ಲಿ ೬ ಜನಕ್ಕೆ ಉದ್ಯೋಗ ನೀಡಲಾಗಿದ್ದು, ಉಳಿದ ಮೂರು ಕುಟುಂಬಗಳಿಗೂ ಸೂಕ್ತ ಅವಕಾಶ ಕಲ್ಪಿಸಬೇಕು. ಪ್ರಕರಣದಲ್ಲಿ ಬದುಕುಳಿದವರಿಗೂ ಸೂಕ್ತ ಪರಿಹಾರ ಸೇರಿದಂತೆ ಸಂತ್ರಸ್ತ ಕುಟುಂಬದವರಿಗೆ ಪಿಂಚಣಿ ವ್ಯವಸ್ಥೆಗೆ ಶಿಫಾರಸು ಮಾಡಬೇಕು ಎಂದು ಸಲಹೆ ಮಾಡಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ದೌರ್ಜನ್ಯ ಪ್ರಕರಣಗಳಲ್ಲಿ ಸ್ಥಳ ಪರಿಶೀಲನೆ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷರು ಸದಸ್ಯರನ್ನು ಕರೆದೊಯ್ಯಬೇಕು. ಜಿಲ್ಲೆಯಲ್ಲಿ ಜೀತಪದ್ಧತಿ ಇನ್ನೂ ಕೆಲವೆಡೆ ಜೀವಂತವಾಗಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಗೆ ಜಮೀನು ದೊರೆಯುತ್ತಿಲ್ಲ. ಸಹಾಯಧನ ಒದಗಿಸುವಲ್ಲಿ ಬ್ಯಾಂಕ್‌ಗಳು ಫಲಾನುಭವಿಗಳೊಂದಿಗೆ ಸಹಕರಿಸುತ್ತಿಲ್ಲ. ಈ ನಿಟ್ಟಿನಲ್ಲಿ ತಾಲೂಕುಮಟ್ಟದ ನೋಡೆಲ್ ಅಧಿಕಾರಿಗಳು ಖುದ್ದು ಪರಿಶೀಲಿಸಿ ನ್ಯಾಯ ದೊರಕಿಸಬೇಕು ಎಂದು ಸದಸ್ಯರು ಸಭೆಯಲ್ಲಿ ತಿಳಿಸಿದರು.
ಸಮಿತಿ ಸದಸ್ಯರ ಸಮಸ್ಯೆಗಳನ್ನು ಆಲಿಸಿದ ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಜಿಲ್ಲೆಯ ಯಾವುದೇ ಭಾಗದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಮೇಲೆ ದೌರ್ಜನ್ಯ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ತಡೆಯುವ ನಿಟ್ಟಿನಲ್ಲಿ ಜಿಲ್ಲಾ ಹಾಗೂ ತಾಲೂಕುಮಟ್ಟದ ಎಲ್ಲಾ ಅಧಿಕಾರಿಗಳು ಮುಂದಾಗಬೇಕು. ಪ್ರಕರಣಗಳನ್ನು ಅದಷ್ಟು ಬೇಗನೆ ಇತ್ಯರ್ಥಪಡಿಸಿ ಸಂತ್ರಸ್ಥ ಕುಟುಂಬಗಳಿಗೆ ಪರಿಹಾರ ತಲುಪಿಸುವಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರರಾಜು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಲ್ಲಿಕಾರ್ಜುನ್, ಮಹಿಳೆಯರ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಗೀತಾಲಕ್ಷ್ಮೀ, ತಹಶೀಲ್ದಾರ್ ಬಸವರಾಜು, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರಾದ ಸಿದ್ದರಾಜು, ಸೋಮೆಶ್ವರ್, ರಾಜೇಂದ್ರ, ಆಸಿಫ್ ಉಲ್ಲಾ, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.