ಚಾಮರಾಜನಗರ: ಕ್ರೈಸ್ತ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯ, ಸವಲತ್ತುಗಳನ್ನು ಸಮರ್ಪಕವಾಗಿ ತಲುಪಿಸಲು ಸಮಿತಿ ರಚನೆಯಾಗಿದೆ ಎಂದು ಕರ್ನಾಟಕ ಕ್ರೈಸ್ತ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಜೆ. ಕೆನಡಿ ಶಾಂತಕುಮಾರ್ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು.
ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಸಾಮಾಜಿಕ ನ್ಯಾಯ ಪರಿಕಲ್ಪನೆಯಡಿ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಯೇ ಸಮಿತಿಯ ಮುಖ್ಯ ಉದ್ದೇಶವಾಗಿದೆ. ಸಮುದಾಯದ ಕೆಲವರಿಗೆ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಮಾಹಿತಿಯ ಅರಿವಿನ ಕೊರತೆಯಿದ್ದು, ಇದನ್ನು ನಿವಾರಿಸಿ ಸವಲತ್ತುಗಳನ್ನು ತಲುಪಿಸಲು ಸಮಿತಿ ಆದ್ಯತೆ ನೀಡುತ್ತಿದೆ ಎಂದರು.
ಸರ್ಕಾರವು ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮಗಳಡಿ ಕ್ರೈಸ್ತ ಸಮುದಾಯದವರಿಗೆ ಸಾಕಷ್ಟು ಸೌಲಭ್ಯಗಳನ್ನು ನೀಡುತ್ತಿದ್ದು, ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಯನ್ನು ಗಮನದಲ್ಲಿರಿಸಿ ಪ್ರತ್ಯೇಕ ಸಮಿತಿ ರಚಿಸಿದೆ. ೨೦೧೧ರಲ್ಲಿ ಕರ್ನಾಟಕ ಕ್ರೈಸ್ತ ಅಭಿವೃದ್ಧಿ ಸಮಿತಿಯನ್ನು ರಚಿಸಿ ೫೦ ಕೋಟಿ ರೂ. ಗಳ ಅನುದಾನ ನೀಡಲಾಗಿತ್ತು. ಪ್ರಸಕ್ತ ಸಾಲಿನಲ್ಲಿ ೨೦೦ ಕೋಟಿ ರೂ. ಅನುದಾನ ಇದೆ ಎಂದು ಅವರು ತಿಳಿಸಿದರು.
ರಾಜ್ಯಾದ್ಯಂತ ಸಮುದಾಯದವರಿಗೆ ಸೂಕ್ತ ಮಾಹಿತಿ ನೀಡಿ ಸೌಲಭ್ಯಗಳನ್ನು ವಿಸ್ತರಿಸಲಾಗುತ್ತಿದೆ. ಎಷ್ಟು ಫಲಾನುಭವಿಗಳು ಸವಲತ್ತು ಪಡೆದಿದ್ದಾರೆ. ಅನುದಾನದಡಿ ಯಾವ ಕಾಮಗಾರಿ ಕೈಗೊಳ್ಳಲಾಗಿದೆ ಎಂಬ ಬಗ್ಗೆ ವೀಕ್ಷಣೆ ಮಾಡಲಾಗಿದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಹಮ್ಮಿಕೊಳ್ಳಲಾಗಿದ್ದು, ಚಾಮರಾಜನಗರ ಪ್ರವಾಸ ಹಮ್ಮಿಕೊಳ್ಳುತ್ತಿರುವ ೧೭ನೇ ಜಿಲ್ಲೆಯಾಗಿದೆ ಎಂದು ಕೆನಡಿಯವರು ಹೇಳಿದರು.
ಜಿಲ್ಲೆಯಲ್ಲಿ ೨೨ ಸಾವಿರ ಕ್ರಿಶ್ಚಿಯನ್ನರನ್ನು ಗುರುತಿಸಲಾಗಿದೆ. ಸಮುದಾಯ ಭವನ ನಿರ್ಮಾಣ, ಚರ್ಚ್ಗಳ ದುರಸ್ತಿ, ಸ್ಮಶಾನಗಳ ಅಭಿವೃದ್ಧಿ ಹಾಗೂ ಹಳೇ ಚರ್ಚುಗಳ ಜೀರ್ಣೋದ್ಧಾರಗೊಳಿಸಲು ಸಮಿತಿ ವತಿಯಿಂದ ಅನುದಾನ ನೀಡಲಾಗುತ್ತಿದ್ದು, ಅವಶ್ಯವಿದ್ದರೆ ಹೆಚ್ಚುವರಿ ಅನುದಾನವನ್ನು ಸಹ ನೀಡಲಾಗುತ್ತಿದೆ. ವೃದ್ಧಾಶ್ರಮ, ಅನಾಥಾಶ್ರಮಗಳಿಗೆ ಆಡಳಿತ ವೆಚ್ಚವನ್ನು ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಈಗಾಗಲೇ ೨೫-೩೦ ಸಂಸ್ಥೆಗಳಿಗೆ ಅನುದಾನ ಒದಗಿಸಲಾಗಿದೆ ಎಂದು ತಿಳಿಸಿದರು.
ಅಭಿವೃದ್ಧಿ ವಿಚಾರದಲ್ಲಿ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿಲ್ಲ. ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ದೊರಕಿಸಲು ಸರ್ಕಾರ ಪಣತೊಟ್ಟಿದೆ. ಕ್ರಿಶ್ಚಿಯನ್ ಸಮುದಾಯ ಯಾವುದೇ ಅತಂಕಕ್ಕೆ ಒಳಗಾಗಬಾರದು. ಜಿಲ್ಲೆಯಲ್ಲಿ ಶೈಕ್ಷಣಿಕ ಸಾಲಕ್ಕಾಗಿ ಸಾಕಷ್ಟು ಬೇಡಿಕೆ ಇದೆ. ಜೊತೆಗೆ ವ್ಯಾಪಾರಕ್ಕಾಗಿ ಹೆಚ್ಚಿನ ಸಾಲ ಪಡೆಯುತ್ತಿರುವುದು ಕಂಡುಬಂದಿದೆ. ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಸಮಿತಿವತಿಯಿಂದ ಮುಂದಿನ ದಿನಗಳಲ್ಲಿ ಬೇಡಿಕೆಗನುಗುಣವಾಗಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಸಮಿತಿ ಅಧ್ಯಕ್ಷರಾದ ಕೆನಡಿ ಶಾಂತಕುಮಾರ್ ತಿಳಿಸಿದರು.
ಕರ್ನಾಟಕ ಕ್ರೈಸ್ತ ಅಭಿವೃದ್ಧಿ ಸಮಿತಿ ಕಾರ್ಯದರ್ಶಿ ಪಾಟೀಲ್, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಮಧುಕುಮಾರ್, ಇತರರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.
