ಚಾಮರಾಜನಗರ: ಕೃಷಿ ಯಂತ್ರಧಾರೆ ಯೋಜನೆಯಡಿ ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಡೆಯುತ್ತಿರುವ ಕೃಷಿ ಯಂತ್ರೋಪಕರಣಗಳ ಬಾಡಿಗೆ ಆಧಾರಿತ ಸೇವಾ ಕೇಂದ್ರಕ್ಕೆ ಇಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ಭೇಟಿ ನೀಡಿ ಸೇವಾ ಕೇಂದ್ರದಲ್ಲಿರುವ ಯಂತ್ರೋಪಕರಣಗಳನ್ನು ಪರಿಶೀಲಿಸಿ, ರೈತರಿಂದ ಬೇಡಿಕೆ ಮತ್ತು ದರ ನಿಗಧಿಯ ಬಗ್ಗೆ ಜಂಟಿ ಕೃಷಿ ನಿರ್ದೇಶಕರಿಂದ ಮಾಹಿತಿ ಪಡೆದರು.
ಬಳಿಕ ಯಳಂದೂರು ತಾಲೂಕಿನ ಮದ್ದೂರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ ಜಿ.ಪಂ. ಸಿ.ಇ.ಒ ಅವರು ಮದ್ದೂರು ಗ್ರಾಮ ಪಂಚಾಯಿತಿಯು ಅಮೃತ ಗ್ರಾಮ ಪಂಚಾಯಿತಿ ಹಂತ-೨ ಯೋಜನೆಯಡಿ ಆಯ್ಕೆಯಾಗಿದ್ದು, ಈ ಸಂಬಂಧ ಮದ್ದೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಟದ ಮೈದಾನ ಅಭಿವೃದ್ಧಿಪಡಿಸುವ ಕುರಿತು ಸ್ಥಳ ಪರಿಶೀಲಿಸಿದರು. ಶಾಲೆಗೆ ಭೇಟಿ ನೀಡಿ ಮಕ್ಕಳ ಹಾಜರಾತಿ, ಶಾಲಾ ಕೊಠಡಿ ಹಾಗೂ ಮೂಲ ಸೌಲಭ್ಯಗಳನ್ನು ವೀಕ್ಷಿಸಿದರು.
ಬಳಿಕ ಕಿರಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಮೂಲ ಸೌಲಭ್ಯಗಳನ್ನು ಪರಿಶೀಲಿಸಿದರು. ಅಂಗನವಾಡಿ-೨ನೇ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳ ಹಾಜರಾತಿ, ಮಕ್ಕಳು, ಗರ್ಭಿಣಿ ಮತ್ತು ಬಾಣಂತಿಯರಿಗೆ ನೀಡುತ್ತಿರುವ ಪೌಷ್ಠಿಕ ಆಹಾರ ಹಾಗೂ ದಾಸ್ತಾನುಗಳನ್ನು ಪರಿಶೀಲಿಸಿದರು. ನಂತರ ಮದ್ದೂರು ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಜಲಜೀವನ್ ಮಿಷನ್ ಯೋಜನೆಯ ನಳ ಸಂಪರ್ಕ ಕಾಮಗಾರಿಗಳನ್ನು ವೀಕ್ಷಿಸಿದರು.
ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಹರೀಶ್, ಯಳಂದೂರು ತಾಲೂಕು ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ನಿಂಗರಾಜು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಉಪ ವಿಭಾಗದ ಸಹಾಯಕ ನಿರ್ದೇಶಕರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಮದ್ದೂರು ಗ್ರಾಮ ಪಂಚಾಯಿತಿ ಅಧಿಕಾರಿಗಳು ಇದೇ ವೇಳೆ ಹಾಜರಿದ್ದರು.