ಚಾಮರಾಜನಗರ:ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಅನು?ನ ಇಲಾಖೆಗಳು ಈ ಮಾಹೆಯ ಅಂತ್ಯದೊಳಗೆ ಹೆಚ್ಚಿನ ಪ್ರಗತಿ ಸಾಧಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ಸೂಚನೆ ನೀಡಿದರು.

ಯಳಂದೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿಂದು ತಾಲೂಕು ವ್ಯಾಪ್ತಿಯ ಪ್ರಗತಿ ಪರಿಶೀಲಿಸಿ ಅವರು ಮಾತನಾಡಿದರು.

ಎರೆಹುಳು ಗೊಬ್ಬರ ಘಟಕ, ಬದು ನಿರ್ಮಾಣ ಹಾಗೂ ಇನ್ನಿತರೆ ಕಾಮಗಾರಿಗಳನ್ನು ತೆಗೆದುಕೊಂಡು ಮಾನವ ದಿನಗಳ ಸೃಜನೆಯಲ್ಲಿ ಹೆಚ್ಚು ಪ್ರಗತಿಯನ್ನು ಸಾಧಿಸಲು ಕ್ರಮವಹಿಸಬೇಕು. ಈಗಾಗಲೇ ಪೂರ್ಣಗೊಂಡಿರುವ ಕಾಮಗಾರಿಗಳನ್ನು ಜಿಯೋಟ್ಯಾಗ್ ಮಾಡಿ ಎಂ.ಐ.ಎಸ್ ನಲ್ಲಿ ಅಪ್ ಡೇಟ್ ಮಾಡಲು ಕ್ರಮವಹಿಸಬೇಕೆಂದು ನಿರ್ದೇಶನ ನೀಡಿದರು.

ಕೆರೆ, ಕಾಲುವೆ, ದನದ ಕೊಟ್ಟಿಗೆ, ಸೋಕ್ ಪಿಟ್ ಇತರೆ ಕಾಮಗಾರಿಗಳನ್ನು ನಿರ್ವಹಿಸಬೇಕು. ಈ ಮಾಹೆಯ ಅಂತ್ಯದೊಳಗೆ ನರೇಗಾ ಯೋಜನೆಯಡಿ ಹೆಚ್ಚಿನ ಪ್ರಗತಿಯನ್ನು ಸಾಧಿಸಬೇಕು. ನರೇಗಾ ಕೂಲಿ ಪಾವತಿಸಲು ವಿಳಂಬವಾಗಿರುವ ಗ್ರಾಮ ಪಂಚಾಯಿತಿಗಳು ವಿಳಂಬಕ್ಕೆ ಆಸ್ಪದ ನೀಡದೇ ಕೂಲಿ ಪಾವತಿಸಲು ಕ್ರಮವಹಿಸಬೇಕು. ಮಳೆಯಿಂದ ಹಾನಿಗೊಳಗಾದ ರಸ್ತೆಗಳ ದುರಸ್ತಿಗೆ ಕ್ರಿಯಾ ಯೋಜನೆಯನ್ನು ತಯಾರಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಎನ್.ಆರ್.ಎಲ್.ಎಂ ಶೆಡ್ ನಿರ್ಮಾಣ ಸಂಬಂಧ ಸ್ಥಳ ಗುರುತಿಸಿರುವ ಗ್ರಾಮ ಪಂಚಾಯಿತಿಗಳಲ್ಲಿ ಈ ವಾರದೊಳಗಾಗಿ ಕಾಮಗಾರಿಗಳನ್ನು ಕಡ್ಡಾಯವಾಗಿ ಪ್ರಾರಂಭಿಸಬೇಕು. ಸ್ಮಶಾನ ಅಭಿವೃದ್ದಿಗೆ ಸಂಬಂಧಿಸಿದಂತೆ ಜಮೀನು ಲಭ್ಯವಿಲ್ಲದ ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಸಂಬಂಧಪಟ್ಟ ತಹಶೀಲ್ದಾರರಿಗೆ ಜಮೀನು ಮಂಜೂರು ಮಾಡಿಕೊಡುವ ಕುರಿತ ಪ್ರಸ್ತಾವನೆಗಳನ್ನು ಸಲ್ಲಿಸಬೇಕು. ಈಗಾಗಲೇ ಜಮೀನು ಮಂಜೂರಾಗಿರುವ ಕಡೆ ಸ್ಮಶಾನ ಅಭಿವೃದ್ದಿಗೆ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು. 

ಗ್ರಾಮ ಪಂಚಾಯಿತಿಗಳಲ್ಲಿನ ಡಿಜಿಟಲ್ ಗ್ರಂಥಾಲಯಗಳಲ್ಲಿ ವಿದ್ಯಾರ್ಥಿಗಳು ಹಾಗೂ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಲು ಕ್ರಮವಹಿಸಬೇಕು. ಗ್ರಂಥಾಲಯ ಕಟ್ಟಡವು ಹಳೆಯದಾಗಿದ್ದಲ್ಲಿ ದುರಸ್ಥಿಗೊಳಿಸಬೇಕು. ಜಾಗ ಲಭ್ಯತೆ ಇದ್ದಲ್ಲಿ ಕೂಡಲೇ ಗ್ರಂಥಾಲಯಗಳ ಕಟ್ಟಡಗಳ ನಿರ್ಮಾಣ ಪ್ರಾರಂಭಿಸಬೇಕು ಎಂದು ತಿಳಿಸಿದರು.

ವಸತಿ ಯೋಜನೆಗೆ ಸಂಬಂಧಿಸಿದಂತೆ ಛಾವಣಿ ಹಂತದಲ್ಲಿರುವ ಮನೆಗಳನ್ನು ಪೂರ್ಣಗೊಳಿಸಿ ಜಿಪಿಎಸ್ ಗೆ ಅಳವಡಿಸಬೇಕು. ಗ್ರಾಮ ಪಂಚಾಯಿತಿ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಎಲ್ಲಾ ರೀತಿಯ ಸಾರ್ವಜನಿಕ ಸೇವೆಗಳನ್ನು ಸಮರ್ಪಕವಾಗಿ ನೀಡಬೇಕು ಎಂದರು.

 ಘನತ್ಯಾಜ್ಯ ನಿರ್ವಹಣಾ ಘಟಕ ಅನು?ನ ಸಂಬಂಧ ಈಗಾಗಲೇ ನಿವೇಶನ ಲಭ್ಯವಿರುವ ಗ್ರಾಮ ಪಂಚಾಯಿತಿಗಳು ಕಸ ಸಂಗ್ರಹಣೆ, ವಿಂಗಡಣೆ ಹಾಗೂ ವಿಲೇವಾರಿ ಕೆಲಸಗಳನ್ನು ಪ್ರಾರಂಭಿಸಬೇಕು. ವೈಯಕ್ತಿಕ ಗೃಹ ಶೌಚಾಲಯ ನಿರ್ಮಾಣ ಬಾಕಿಯಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಗ್ರಾಮ ಪಂಚಾಯಿತಿಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿರುವ ಮಹಿಳಾ ಸ್ವ-ಸಹಾಯ ಸಂಘಗಳಿಂದ ಕಸ ಸಂಗ್ರಹಣೆಗೆ ಅಗತ್ಯ ಕ್ರಮವಹಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ಸೂಚಿಸಿದರು. 

 ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ, ಸಹಾಯಕ ಯೋಜನಾಧಿಕಾರಿ ಪ್ರೇಮ್ ಕುಮಾರ್, ಯಳಂದೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್, ಇತರರು ಸಭೆಯಲ್ಲಿ ಹಾಜರಿದ್ದರು.