ಚಾಮರಾಜನಗರ: ವಿದ್ಯಾರ್ಥಿ ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡು ಪರಸ್ಪರ ಸ್ನೇಹ ಸೌಹಾರ್ದತೆಯಿಂದ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಬದುಕಬೇಕು ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಸಲಹೆ ಮಾಡಿದರು. 
ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿಂದು ಸರ್ಕಾರಿ ಪ್ರಥಮ ಕಾಲೇಜಿನ ಸಾಂಸ್ಕೃತಿಕ, ಕ್ರೀಡೆ, ಎನ್.ಎಸ್.ಎಸ್. ಮತ್ತು ಅಭಿವ್ಯಕ್ತಿ ವೇದಿಕೆಗಳ ವತಿಯಿಂದ ೭೫ನೇ ಸ್ವಾತಂತ್ರ್ಯ ಅಮೃತ ಸಂಭ್ರಮಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಸಾಂಸೃತಿಕ  ಸೌರಭ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಭಾರತವು ಸರ್ವಧರ್ಮಗಳ ರಾಷ್ಟ್ರವಾಗಿದ್ದು ಸಂಸ್ಕೃತಿ, ಕಲೆ, ಪರಂಪರೆ, ಜಾತಿ ಧರ್ಮಗಳನ್ನು ಒಗ್ಗೂಡಿಸುವ ಶಕ್ತಿ ಹೊಂದಿದೆ. ಭೇದವನ್ನು ಮರೆತು ಸಾಮರಸ್ಯದಿಂದ ಇರುವುದನ್ನು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಶಾಲೆ ಕಾಲೇಜುಗಳಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಸಮನ್ವಯ ಮನೋಭಾವನೆ ಬೆಳೆಯುತ್ತದೆ ಎಂದು ಶಾಸಕರು ಅಭಿಪ್ರಾಯಪಟ್ಟರು. 
ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ವ್ಯಕ್ತಿತ್ವವನ್ನು ವೃದ್ಧಿಸಿಕೊಳ್ಳಬೇಕು. ಚಾಮರಾಜನಗರ ಜಿಲ್ಲೆಯು ಜನಪದ ಕಲೆಗಳ ತವರೂರಾಗಿದ್ದು ಕಲೆ ಸಂಸ್ಕೃತಿಯಲ್ಲಿ ಶ್ರೀಮಂತವಾಗಿದ್ದು, ಇದು ಹೆಮ್ಮೆಯ ಸಂಗತಿಯಾಗಿದೆ ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಹೇಳಿದರು.
ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಸಿಲಿಕಾನ್ ಕಂಟ್ರೋಲ್ಸ್‌ನ ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ರಾಘವೇಂದ್ರ ಅವರು ಮಾತನಾಡಿ ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸಹ ಉತ್ತಮ ಅಂಕಗಳಿಸಿ ಶೈಕ್ಷಣಿಕವಾಗಿ ಹೆಚ್ಚು ಸಾಧನೆ ಮಾಡುತ್ತಿರುವುದು ಗಮನಾರ್ಹ ಹಾಗೂ ಶ್ಲಾಘನೀಯ. ಶಿಕ್ಷಕರು, ಬೋಧಕರು ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಹೆಚ್ಚಿಸುವಂತಹ ಚಟುವಟಿಕೆಗಳಲ್ಲಿ ತೊಡಗಿಸಬೇಕು ಎಂದರು.
ವಿದ್ಯಾರ್ಥಿ ನಂತರದ ಜೀವನದಲ್ಲಿ ಸರ್ಕಾರಿ ಕೆಲಸಗಳನ್ನಷ್ಟೇ ಅಪೇಕ್ಷಿಸಬಾರದು. ಸ್ವ ಉದ್ಯೋಗ ಪ್ರಾರಂಭಿಸುವಂತಹ ಕೌಶಲಗಳನ್ನು ಬೆಳೆಸಿಕೊಳ್ಳಬೇಕು. ಯಶಸ್ಸಿಗೆ ಯಾವುದೇ ಅಡ್ಡದಾರಿ ಇರುವುದಿಲ್ಲ ಕೇವಲ ನಿರಂತರ ಪರಿಶ್ರಮದಿಂದ ಮಾತ್ರ ಸಾಧ್ಯ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹಿಂಜರಿಕೆ ಮನೋಭಾವವನ್ನು ತೊಡೆದು ಹಾಕಬೇಕು ಎಂದು ಕಿವಿಮಾತು ಹೇಳಿದರು.
ಮೈಸೂರಿನ ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕರಾದ ಡಾ. ಎಂ.ಎಸ್. ಗಿರಿಧರ್ ರಾವ್ ಅವರು ಮಾತನಾಡಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಲು ಈ ವೇದಿಕೆ ಉತ್ತಮ ಅವಕಾಶ ಕಲ್ಪಿಸಿಕೊಟ್ಟಿದೆ. ಪಠ್ಯೇತರ ಚಟುವಟಿಕೆಗಳ ಜೊತೆಗೆ ಸಮಾಜದ ನೋವುಗಳಿಗೆ ಸ್ಪಂದಿಸುವ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದರು. 
ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ವಿಶೇಷಾಧಿಕಾರಿ ಡಾ. ಹೇಮಚಂದ್ರ ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ಕಾಲೇಜು ವಿದ್ಯಾಭ್ಯಾಸದ ವಯಸ್ಸಿನಲ್ಲಿ ಗ್ರಹಿಸುವ ಶಕ್ತಿ ಹೆಚ್ಚಾಗಿರುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಉತ್ತಮ ವಿಚಾರಗಳನ್ನು ತಾಳ್ಮೆಯಿಂದ ಕೇಳುವಿಕೆ ಹಾಗೂ ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು. ಆಸಕ್ತಿಯಿಂದ ಕೇಳಿದರೆ ನೆನಪಿನಲ್ಲಿರುತ್ತದೆ ಇನ್ನೊಬ್ಬರ ಒತ್ತಡದಿಂದ ಕೇಳಿದರೆ ಅದು ನೆನಪಿನಲ್ಲಿ ಉಳಿಯುವುದಿಲ್ಲ ಎಂದು ತಿಳಿಸಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪಿ. ದೇವರಾಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರೊ. ಶಂಕನಪುರ ಮಹದೇವ, ಸಿಂಡಿಕೇಟ್ ಸದಸ್ಯರಾದ ಪ್ರದೀಪ್‌ಕುಮಾರ್ ದೀಕ್ಷಿತ್, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಎಂ. ಆರ್. ಸುಮತಿ,  ಅಭಿವ್ಯಕ್ತಿ ವೇದಿಕೆ ಸಂಚಾಲಕರಾದ ಎಸ್. ಚಂದ್ರಮ್ಮ, ಸಾಂಸ್ಕೃತಿಕ ಸಮಿತಿ ಸಂಚಾಲಕರಾದ ಡಾ. ಎನ್.ಜೆ. ಶಶಿಕಲಾ, ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಂಚಾಲಕರಾದ ಡಾ. ಎಂ.ಎಸ್. ಮಂಜುನಾಥ, ಎಂ. ಚಂದ್ರಕಲಾ, ವೆಂಕಟೇಶ್, ಶಿವಕುಮಾರ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.