ಗುಂಡ್ಲುಪೇಟೆ: ಪಟ್ಟಣದ ಪುರಸಭೆಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಪಿ. ಗಿರೀಶ್ ಹಾಗೂ ಉಪಾಧ್ಯಕ್ಷರಾಗಿ ದೀಪಿಕಾ ಅಶ್ವೀನ್ ಅವಿರೋಧವಾಗಿ ಆಯ್ಕೆಯಾದರು.
ಬಿಜೆಪಿ ಪಕ್ಷದಲ್ಲಿ ಗೆದ್ದಿದ್ದ 13 ಮಂದಿ ಸದಸ್ಯರ ಪೈಕಿ ಯಾರು ಸಹ ನಾಮಪತ್ರ ಸಲ್ಲಿಸಿದ ಕಾರಣ ಇವರನ್ನು ಅವಿರೋಧವಾಗಿ ಚುನಾವಣಾಧಿಕಾರಿ ನಂಜುಂಡಯ್ಯ ಘೋಷಣೆ ಮಾಡಿದರು.
ಕಾಂಗ್ರೆಸ್ ಪಕ್ಷದ ಎಂಟು ಮಂದಿ ಸದಸ್ಯರು ಗೈರು ಹಾಜರಾಗಿದ್ದರು. ಪಕ್ಷೇತರ ಅಭ್ಯರ್ಥಿ ಶಶಿಧರ್ ದೀಪು ಬಿಜೆಪಿ ಪಕ್ಷ ಸೇರ್ಪಡೆಯಾಗುವ ಮೂಲಕ ಬಿಜೆಪಿ ಬೆಂಬಲಿಸಿದರು. ಶಾಸಕ ಸಿ.ಎಸ್. ನಿರಂಜನ ಕುಮಾರ್ ಮತ್ತು ಮತ್ತು ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಅವರು ಇದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ವಿ. ಶ್ರೀನಿವಾಸ್ ಪ್ರಸಾದ್, ನಮ್ಮ ಜಿಲ್ಲೆಯ ನಗರ ಸಭೆಗಳು ಬಿಜೆಪಿ ತೆಕ್ಕೆಗೆ ಬಂದಿದೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಮಹತ್ವ ನೀಡಿ ಕೆಲಸ ಮಾಡಲಾಗುವುದು ಎಂದರು.
ಶಾಸಕ ಸಿ.ಎಸ್. ನಿರಂಜನ ಕುಮಾರ್ ಮಾತನಾಡಿ, ಶಾಸಕನಾದ ನಂತರ ಕ್ಷೇತ್ರದಲ್ಲಿ ಮೊದಲ ಬಾರಿಗೆ ಅಧಿಕಾರ ಹಿಡಿಯಲು ಯಶಸ್ವಿಯಾಗಿದ್ದೇವೆ. ಮುಂದಿನ ದಿನಗಳಲ್ಲಿ ಗ್ರಾಮ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿಗಳಲ್ಲಿ ಸ್ಥಾನ ಪಡೆದ ಕ್ಷೇತ್ರವನ್ನು ಅಭಿವೃದ್ಧಿಯತ್ತ ನಡೆಸಲಾಗುವುದು ಎಂದರು.
ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜನಪರ ಯೋಜನೆಯನ್ನು ಜನರಿಗೆ ತಲುಪಿಸುವ ಕೆಲಸಗಳು ಆಗಬೇಕಿದೆ ಎಂದರು.
ಪಟ್ಟಣದ ಎಲ್ಲಾ ಬಿಜೆಪಿ ಸದಸ್ಯರು ಹಾಗೂ ಮುಖಂಡರು ಭಾಗವಹಿಸಿದ್ದರು.
ಖುಷಿಯಲ್ಲಿ ಸಾಮಾಜಿಕ ಅಂತರ ಮಾಯ:
ಗುರುವಾರ ನಡೆದ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಸದಸ್ಯರು ಅವಿರೋಧ ಆಯ್ಕೆ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಸಿ.ಎಸ್. ನಿರಂಜನಕುಮಾರ್ ಹಾಗೂ ಬೆಂಬಲಿಗರು ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಪಾಲನೆ ಮಾಡದೆ ಸಂಭ್ರಮಾಚರಣೆ ನಡೆಸಿದ್ದಾರೆ.
ಬುದ್ಧಿ ಹೇಳಬೇಕಾದ ಶಾಸಕರೇ ಹೀಗಾದರೆ ಜನರ ಪರಿಸ್ಥಿತಿ ಏನೆಂದು ಸಾರ್ವಜನಿಕರು ಕಿಡಿಕಾರಿದ್ದಾರೆ. ಈ ಹಿಂದೆ ನಿಗಮ ಮಂಡಲಿ ಅಧ್ಯಕ್ಷರಾದಗಲೂ ಮಾಸ್ಕ್, ಸಾಮಾಜಿಕ ಅಂತರ ಗಾಳಿಗೆ ತೂರಿ ರೋಡ್ ಶೋ ನಡೆಸಿ ಜನರ ಆಕ್ರೋಶಕ್ಕೆ ಕಾರಣರಾಗಿದ್ದರು.
ವರದಿ: ಬಸವರಾಜು ಎಸ್ ಹಂಗಳ