ಚಾಮರಾಜನಗರ: ಕ್ಯಾನ್ಸರ್ ಪತ್ತೆ ಹಚ್ಚುವಿಕೆ ಪರೀಕ್ಷೆಗೆ ಯಾವುದೇ ಮುಜುಗರವಿಲ್ಲದೇ ಒಳಪಡಬೇಕು. ಪ್ರಾರಂಭಿಕ ಹಂತದಲ್ಲೆ ರೋಗ ಪತ್ತೆ ಹಚ್ಚುವುದರಿಂದ ಚಿಕಿತ್ಸೆ ಪಡೆದು ಗುಣಮುಖರಾಗಲು ಸಾಧ್ಯವಾಗಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಕೆ.ಎಂ. ಗಾಯತ್ರಿ ಅವರು ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೆ ಕೆ.ಡಿ.ಪಿ. ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ವತಿಯಿಂದ ಆಯೋಜಿಸಲಾಗಿದ್ದ ವಿಶ್ವ ಕ್ಯಾನ್ಸರ್ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕ್ಯಾನ್ಸರ್ ರೋಗಕ್ಕೆ ಆಧುನಿಕ ವೈದ್ಯಕೀಯ ಚಿಕಿತ್ಸೆಗಳನ್ನು ಬಳಸಿಕೊಂಡು ರೋಗ ಪತ್ತೆಯಾದ ತಕ್ಷಣವೇ ಆರೈಕೆಗೆ ಒಳಪಡಬೇಕು. ವಿಶೇಷವಾಗಿ ಮಹಿಳೆಯರಲ್ಲಿ ಸ್ತನ ಹಾಗೂ ಗರ್ಭಕೋಶ ಕ್ಯಾನ್ಸರ್ ಗಳು ಕಂಡುಬರುತ್ತಿವೆ. ಆರಂಭದಲ್ಲಿಯೇ ಆರೋಗ್ಯ ತಪಾಸಣೆಗೆ ಒಳಗಾಗುವುದರಿಂದ ಗಂಭೀರ ಸಮಸ್ಯೆ ಕಾಡುವುದು ತಪ್ಪಲಿದೆ. ಹೀಗಾಗಿ ಯಾವುದೇ ಹಿಂಜರಿಕೆ ಆತಂಕ ಬಿಟ್ಟು ಆರೋಗ್ಯದತ್ತ ಕಾಳಜಿ ವಹಿಸಬೇಕು ಎಂದರು.

ಕ್ಯಾನ್ಸರ್‌ಗೆ ತುತ್ತಾದವರಿಗೆ ಮಾನಸಿಕವಾಗಿ ಕುಗ್ಗದಂತೆ ಆತ್ಮಸ್ಥೈರ್ಯ ತುಂಬಬೇಕು. ಕ್ಯಾನ್ಸರ್ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತೆಯಾಗಿ ಶಿಸ್ತುಬದ್ದ ಜೀವನ ಶೈಲಿ, ದೈಹಿಕ ಚಟುವಟಿಕೆ ಮತ್ತು ಕ್ರಮಬದ್ದ ಆಹಾರ ಸೇವನೆಯನ್ನು ರೂಢಿಸಿಕೊಳ್ಳಬೇಕು. ಕ್ಯಾನ್ಸರ್ ರೋಗದ ಕುರಿತು ಯುವಕ ಯುವತಿಯರಿಗೆ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜು ಮಟ್ಟದಲ್ಲಿ ಮನವರಿಕೆ ಮಾಡಲು ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಕೆ.ಎಂ. ಗಾಯತ್ರಿ ಅವರು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ಮಾತನಾಡಿ ಕ್ಯಾನ್ಸರ್ ಕುರಿತು ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಹೆಚ್ಚು ಅರಿವು ಮೂಡಿಸುವ ಕಾರ್ಯ ನಡೆಸಬೇಕಿದೆ. ಕ್ಯಾನ್ಸರ್‌ನ ರೋಗ ಲಕ್ಷಣಗಳು, ನೀಡಬಹುದಾದ ಚಿಕಿತ್ಸಾ ವಿಧಾನಗಳು, ಇನ್ನಿತರ ವಿಷಯಗಳನ್ನು ಪರಿಪೂರ್ಣವಾಗಿ ತಿಳಿಸುವಂತಾಗಬೇಕು. ಸಾರ್ವಜನಿಕರಿಗೆ ಮಾಹಿತಿ ನೀಡುವ ಕಾರ್ಯಗಾರಗಳನ್ನು ಹೆಚ್ಚು ಆಯೋಜನೆ ಮಾಡಬೇಕೆಂದು ಸಲಹೆ ಮಾಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ ಮಾತನಾಡಿ ಕ್ಯಾನ್ಸರ್ ತಡೆಗಟ್ಟುವ ನಿಟ್ಟಿನಲ್ಲಿ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಆಶಾ, ಆರೋಗ್ಯ ಕಾರ್ಯಕರ್ತೆಯರಿಗೆ ಇನ್ನಷ್ಟು ಪರಿಣಾಮಕಾರಿ ತರಬೇತಿ ನೀಡಲಾಗುವುದು. ಕ್ಯಾನ್ಸರ್ ನಿರ್ಮೂಲನೆ ಮಾಡುವ ಉದ್ದೇಶದಿಂದ ಬಾಯಿ, ಗಂಟಲು ಆರೋಗ್ಯವನ್ನು ಕಾಪಾಡಿಕೊಳ್ಳುವ ಕುರಿತು ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಸರ್ವಲೆನ್ಸ್ ಅಧಿಕಾರಿ ಡಾ. ನಾಗರಾಜು ಅವರು ಮಾತನಾಡಿ ಕ್ಯಾನ್ಸರ್ ಕಾಯಿಲೆಗೆ ತುತ್ತಾದವರು ಭಯಪಡದೇ ಪ್ರಾರಂಭಿಕ ಚಿಕಿತ್ಸೆ ಪಡೆಯುವುದರಿಂದ ಇನ್ನೂ ಹೆಚ್ಚಿನ ಅಪಾಯದ ಹಂತವನ್ನು ತಪ್ಪಿಸಬಹುದು. ಹೆಚ್ಚಿನ ಕ್ಯಾನ್ಸರ್ ಪೈಕಿ ಬಾಯಿ ಕ್ಯಾನ್ಸರ್ ಹೆಚ್ಚು ತೊಂದರೆ ಉಂಟು ಮಾಡಲಿದೆ. ತಂಬಾಕು ಸೇವನೆಯಿಂದ ಕ್ಯಾನ್ಸರ್ ಅಷ್ಟೇ ಅಲ್ಲ ಪಾರ್ಶ್ವವಾಯು, ಹೃದಯ ಸಂಬಂಧಿ ಸಮಸ್ಯೆಗಳು ಹೆಚ್ಚಾಗುತ್ತಿವೆ. ಮದ್ಯಪಾನ, ತಂಬಾಕು ಸೇವನೆ ತ್ಯಜಿಸಿದರೆ ರೋಗದಿಂದ ದೂರವಿರಬಹುದು ಎಂದರು.

ಸಂಪನ್ಮೂಲ ವ್ಯಕ್ತಿಗಳಾದ ಡಾ. ರವಿಶಂಕರ್, ಡಾ. ಪ್ರಿಯದರ್ಶಿನಿ, ಡಾ. ಪ್ರಶಾಂತ್, ಡಾ. ನಿಶ್ಚಲ್, ಡಾ. ಮಂಜುನಾಥ್, ಡಾ. ಎನ್. ಕಾಂತರಾಜು ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.