ಚಾಮರಾಜನಗರ: ನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (ಡಿ.ಎ.ಆರ್) ಮೈದಾನದಲ್ಲಿಂದು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಪೊಲೀಸ್ ಹುತಾತ್ಮರ ದಿನ ಅಂಗವಾಗಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ಗೌರವ ವಂದನೆ ಸ್ವೀಕರಿಸಿ, ಬಳಿಕ ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಅರ್ಪಿಸಿದರು.
ಇದೇ ವೇಳೆ ಮಾತನಾಡಿದ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ಕರ್ತವ್ಯದ ಸಂದರ್ಭದಲ್ಲಿ ಸಾಕಷ್ಟು ಪೊಲೀಸರು ಮೃತಪಟ್ಟಿದ್ದಾರೆ. ಅವರೆಲ್ಲರಿಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಮಾತನಾಡಿ ಕರ್ತವ್ಯವ ವೇಳೆ ಮರಣ ಹೊಂದಿದ ಪೊಲೀಸರಿಗೆ ಗೌರವ ಸಲ್ಲಿಸುವ ಸಲುವಾಗಿ ದೇಶಾದ್ಯಂತ ಇಂದು ಪೊಲೀಸ್ ಹುತಾತ್ಮರ ದಿನ ಆಚರಿಸಲಾಗುತ್ತಿದೆ. ಕೆಲಸದ ಅವಧಿಯಲ್ಲಿ ತಮ್ಮ ಜೀವವನ್ನು ಪಣಕ್ಕಿಟ್ಟು ಹೋರಾಡಿ ಮಡಿದ ಪೊಲೀಸರನ್ನು ಸ್ಮರಿಸಬೇಕು. ಕುಟುಂಬವನ್ನು ಲೆಕ್ಕಿಸದೇ ಸಮಾಜದ ರಕ್ಷಣೆಯಲ್ಲಿ ತೊಡಗಿರುವ ಪೊಲೀಸ್ ವೃತ್ತಿ ಪವಿತ್ರವಾದದ್ದು ಎಂದರು.
ಬಂಡೀಪುರ ಹುಲಿ ಯೋಜನೆಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕ್ಷೇತ್ರ ನಿರ್ದೇಶಕರಾದ ಡಾ. ಪಿ. ರಮೇಶ್‌ಕುಮಾರ್ ಅವರು ಮಾತನಾಡಿ ಜಿಲ್ಲೆಯಲ್ಲಿ ಕಳೆದ ೧೮ ವರ್ಷಗಳ ಹಿಂದೆ ವೀರಪ್ಪನ್‌ನಿಂದ ಕರ್ತವ್ಯದ ವೇಳೆ ಹಲವಾರು ಪೊಲೀಸರು ಹುತಾತ್ಮರಾಗಿದ್ದಾರೆ. ಈಗ ವೀರಪ್ಪನ್ ಇಲ್ಲ. ಆದರೂ ಸಹ ಪೊಲೀಸರಿಗೆ ಹೊಸ ಹೊಸ ಸವಾಲುಗಳು ಎದುರಾಗುತ್ತಲೇ ಇವೆ. ಅಂತಹ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಇಲಾಖೆಗೆ ಆಧುನಿಕ ತಂತ್ರಜ್ಞಾನ ಆಧಾರಿತ ವ್ಯವಸ್ಥೆ ಅಗತ್ಯವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಆರಂಭದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್ ಅವರು ೧೯೫೯ರ ಅಕ್ಟೋಬರ್ ೨೧ರಂದು ಭಾರತದ ಗಡಿಭಾಗದ ಲಡಾಕ್‌ನ ಅಕ್ಸಾಯ್ ಸ್ಥಳದಲ್ಲಿ ಸಿ.ಆರ್.ಪಿ.ಎಫ್ ಪಡೆಯ ಪೊಲೀಸರು ಗಡಿ ಪಹರೆಯಲ್ಲಿದ್ದಾಗ ಚೀನಾ ಸೈನಿಕರು ಹೊಂಚುಹಾಕಿ ನಡೆಸಿದ ದಾಳಿಯಲ್ಲಿ ಭಾರತದ ೧೦ ಮಂದಿ ಸಾವನ್ನಪ್ಪಿ, ೯ ಮಂದಿ ಗಾಯಗೊಂಡು ಸೆರೆಯಾದರು. ಮರಣ ಹೊಂದಿದವರ ಗೌರವಾರ್ಥವಾಗಿ ಈ ದಿನವನ್ನು ಪೊಲೀಸ್ ಹುತಾತ್ಮರ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು
ದೇಶದಲ್ಲಿ ೨೬೪ ಮಂದಿ ಪೊಲೀಸರು, ಕರ್ನಾಟಕದ ೧೧ ಮಂದಿ ಹಾಗೂ ಜಿಲ್ಲೆಯ ಒರ್ವ ಪೊಲೀಸ್ ಆಧಿಕಾರಿ ಮತ್ತು ಸಿಬ್ಬಂದಿ ಕರ್ತವ್ಯದ ಸಂದರ್ಭದಲ್ಲಿ ವೀರಮರಣವನ್ನಪ್ಪಿದ್ದಾರೆ. ಅವರೆಲ್ಲರಿಗೂ ಗೌರವ ವಂದನೆಯನ್ನು ಸಲ್ಲಿಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಶಿವಕುಮಾರ್ ಅವರು ತಿಳಿಸಿ ಹುತಾತ್ಮರಾದವರ ನಾಮವಾಚನ ಮಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ, ಮಲೈ ಮಹದೆಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಜಿ. ಸಂತೋಷ್‌ಕುಮಾರ್, ಬಿ.ಆರ್.ಟಿ. ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ದೀಪ್ ಜೆ. ಕಂಟ್ರಾಕ್ಟರ್, ಕಾವೇರಿ ವನ್ಯಜೀವಿ ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಲ್. ನಂದೀಶ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರರಾಜು, ಡಿ.ವೈ.ಎಸ್.ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ಕೊಳ್ಳೇಗಾಲ ಡಿ.ವೈ.ಎಸ್.ಪಿ ನಾಗರಾಜು, ಡಿ.ಆರ್. ವಿಭಾಗದ ಡಿ.ವೈ.ಎಸ್.ಪಿ ಸೋಮಣ್ಣ, ಗೃಹರಕ್ಷಕ ದಳದ ಕಮಾಂಡೆಂಟ್ ಬಸವರಾಜು, ರೈತ ಮುಖಂಡರಾದ ಹೊನ್ನೂರು ಪ್ರಕಾಶ್, ಹೆಬ್ಬಸೂರು ಬಸವಣ್ಣ ಇತರರು ಪೊಲೀಸ್ ಹುತಾತ್ಮರ ಸ್ವಾರಕಕ್ಕೆ ಪುಷ್ಪನಮನ ಸಲ್ಲಿಸಿದರು.
ಬಳಿಕ ಪೊಲೀಸ್ ಧ್ವಜವನ್ನು ಅರ್ಧಕ್ಕೆ ಇಳಿಸಿ ೨ ನಿಮಿಷಗಳ ಮೌನಾಚರಣೆ ಸಲ್ಲಿಸಿ ಬಳಿಕ ಪೊಲೀಸ್ ಧ್ವಜವನ್ನು ಮೇಲೇರಿಸಲಾಯಿತು.