ಚಾಮರಾಜನಗರ:ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದ ಸಹಯೋಗದೊಂದಿಗೆ ವಿಶೇಷಚೇತನರ ಆರೋಗ್ಯ ತಪಾಸಣೆ ಹಾಗೂ ಸಾಧನ ಸಲಕರಣೆ ವಿತರಿಸುವ ಕಾರ್ಯಕ್ರಮ ಆಯೋಜನೆಗೆ ಪೂರ್ವ ಸಿದ್ದತೆ ಕೈಗೊಳ್ಳುವಂತೆ ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರು ಅಧಿಕಾರಿಗಳಿಗೆ ಸೂಚಿಸಿದರು. 
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ವಿಶೇಷಚೇತನರ ಆರೋಗ್ಯ ತಪಾಸಣೆ ಹಾಗೂ ಸಾಧನ ಸಲಕರಣೆ ವಿತರಣೆ ಕುರಿತ ಪೂರ್ವ ಸಿದ್ದತೆ ಸಭೆಯಲ್ಲಿ ಅವರು ಮಾತನಾಡಿದರು. 
ಜಿಲ್ಲೆಯಲ್ಲಿರುವ ವಿಶೇಷಚೇತನರಿಗೆ ಆರೋಗ್ಯ ತಪಾಸಣೆ ಕೈಗೊಂಡು ಅವರಿಗೆ ಅಗತ್ಯವಿರುವ ಸಾಧನಾ ಸಲಕರಣೆಗಳನ್ನು ನೀಡುವ ಉದ್ದೇಶದಿಂದ ಶಿಬಿರಗಳನ್ನು ಆಯೋಜನೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಅಲಿಂಕೊ ಸಂಸ್ಥೆಯು ವಿಶೇಷಚೇತನರನ್ನು ಪರೀಕ್ಷಿಸಿ ಅವರಿಗೆ ಅಗತ್ಯವಿರುವ ಸಾಧನ ಸಲಕರಣೆಗಳನ್ನು ಗುರುತಿಸಲಿದೆ. ಇದಕ್ಕಾಗಿಯೇ ತಜ್ಞರು ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಲೋಕಸಭಾ ಸದಸ್ಯರು ತಿಳಿಸಿದರು. 
ಜಿಲ್ಲೆಯಲ್ಲಿ ತಾಲೂಕುವಾರು ವಿಶೇಷಚೇತನರ ಪಟ್ಟಿ ಮಾಡಬೇಕು. ಯಾರಿಗೆ ಯಾವ ಬಗೆಯ ಸಾಧನ ಸಲಕರಣೆಗಳು ನೀಡಬೇಕಾಗುತ್ತದೆ ಎಂಬ ಬಗ್ಗೆ ಪೂರ್ವಭಾವಿಯಾಗಿ ಮಾಹಿತಿ ಸಂಗ್ರಹಣೆ ಮಾಡಿಕೊಳ್ಳಬೇಕು. ಶಿಬಿರ ಆಯೋಜನೆಗೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕೆಂದು ಅವರು ನಿರ್ದೇಶನ ನೀಡಿದರು.
ಆರೋಗ್ಯ ಇಲಾಖೆ, ಅಂಗವಿಕಲರ ಕಲ್ಯಾಣ ಇಲಾಖೆಗಳು ವಿಶೇಷ ಗಮನ ನೀಡಿ ಅರ್ಹರಿಗೆ ನೆರವಾಗಿ ಸೌಲಭ್ಯಗಳನ್ನು ಕಲ್ಪಿಸುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಇದಕ್ಕಾಗಿ ಅಗತ್ಯ ಸಿದ್ದತೆ ನಡೆಸಬೇಕು. ಕಾರ್ಯಕ್ರಮದ ರೂಪುರೇಷೆ ತಯಾರಿಸಿ ಸೂಕ್ತ ಯೋಜನೆ ಹಾಕಿಕೊಂಡು ಶಿಬಿರ ಏರ್ಪಾಡು ಮಾಡಬೇಕು ಎಂದು ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸ ಪ್ರಸಾದ್ ಅವರು ತಿಳಿಸಿದರು. 
ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಮಾತನಾಡಿ ಜಿಲ್ಲೆಗೆ ಭೇಟಿ ನೀಡಲಿರುವ ತಜ್ಞರ ತಂಡಕ್ಕೆ ಅಗತ್ಯ ಮಾಹಿತಿ ನೀಡಲಾಗುವುದು. ವಿಶೇಷಚೇತನರ ಆರೋಗ್ಯ ಹಾಗೂ ಸಾಧನ ಸಲಕರಣೆಗಳ ಸೌಲಭ್ಯ ಶಿಬಿರ ಆಯೋಜನೆಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದರು. 
ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷರಾದ ಎಂ. ರಾಮಚಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್ ರಾಜ್, ಜಿಲ್ಲಾ ಸರ್ಜನ್ ಡಾ. ಶ್ರೀನಿವಾಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರಾದ ಗೀತಾಲಕ್ಷ್ಮಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸೋಮಶೇಖರ್, ಕಾರ್ಯಕ್ರಮ ಸಹಾಯಕರಾದ ಪೃಥ್ವಿದಾಸ್, ಇತರರು ಸಭೆಯಲ್ಲಿ ಹಾಜರಿದ್ದರು.