ಚಾಮರಾಜನಗರ:ಕರ್ನಾಟಕ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯನ್ನು ನ್ಯಾಯಸಮ್ಮತ, ಮುಕ್ತ ಹಾಗೂ ಪಾರದರ್ಶಕವಾಗಿ ನಡೆಸುವ ಸಂಬಂಧ ಎಲ್ಲಾ ರಾಜಕೀಯ ಪಕ್ಷಗಳು ಸಂಪೂರ್ಣ ಸಹಕಾರ ನೀಡಬೇಕೆಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕರ್ನಾಟಕ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ ಸಂಬಂಧ ಕರೆಯಲಾಗಿದ್ದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚುನಾವಣಾ ಮಾದರಿ ನೀತಿ ಸಂಹಿತೆಯು ಮೇ ೧೨ರಿಂದ ಜೂನ್ ೧೭ ರವರೆಗೆ ಜಿಲ್ಲೆಯಾದ್ಯಂತ ಜಾರಿಯಲ್ಲಿರುತ್ತದೆ. ಎಲ್ಲಾ ರಾಜಕೀಯ ಪಕ್ಷಗಳು ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಯಾವುದೇ ಉಲ್ಲಂಘನೆಯಾಗದಂತೆ ಕ್ರಮ ತೆಗೆದುಕೊಳ್ಳಬೇಕೆಂದು ಹೆಚ್ಚುವರಿ ಜಿಲ್ಲಾಧಿಕಾರಿಯವರು ತಿಳಿಸಿದರು.
ಕರ್ನಾಟಕ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ ಸಂಬಂಧ ಮೇ ೧೯ ರಂದು ಚುನಾವಣಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದು, ಅದೇ ದಿನದಂದು ನಾಮಪತ್ರ ಸ್ವೀಕೃತಿ ಪ್ರಕ್ರಿಯೆಯು ಪ್ರಾರಂಭವಾಗುತ್ತದೆ. ನಾಮಪತ್ರ ಸಲ್ಲಿಸಲು ಮೇ ೨೬ ಕೊನೆಯ ದಿನವಾಗಿದ್ದು, ನಾಮಪತ್ರಗಳ ಪರಿಶೀಲನೆಯನ್ನು ಮೇ ೨೭ರಂದು ನಡೆಸಲಾಗುತ್ತದೆ. ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಮೇ ೩೦ ಕಡೆಯ ದಿನವಾಗಿದ್ದು, ಮತದಾನ ದಿನಾಂಕವು ಜೂನ್ ೧೩ ರಂದು ನಿಗದಿಯಾಗಿದ್ದು ಬೆಳಿಗ್ಗೆ ೮ ರಿಂದ ಸಂಜೆ ೪ ಗಂಟೆಯವರೆಗೆ ಮತದಾನ ಅವಧಿ ಇರಲಿದೆ. ಜೂನ್ ೧೫ರಂದು ಮತಗಳ ಎಣಿಕೆ ಕಾರ್ಯವು ನಡೆಯಲಿದೆ ಎಂದರು.
ಕರ್ನಾಟಕ ದಕ್ಷಿಣ ಪದವೀಧರರ ಕ್ಷೇತ್ರಕ್ಕೆ ಚಾಮರಾಜನಗರ, ಮೈಸೂರು, ಮಂಡ್ಯ ಮತ್ತು ಹಾಸನ ಜಿಲ್ಲೆಗಳು ಒಳಪಡುತ್ತವೆ. ಮೈಸೂರಿನ ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿಗಳಾಗಿದ್ದು, ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಸಹಾಯಕ ಚುನಾವಣಾಧಿಕಾರಿಗಳಾಗಿರುತ್ತಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿಯವರು ತಿಳಿಸಿದರು.
ಜಿಲ್ಲೆಯಲ್ಲಿ ಹಾಲಿ ೭ ಮೂಲ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಹೆಚ್ಚಿನ ಮತದಾರರು ಇರುವ ಕಡೆ, ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸುವ ಸಂಬಂಧ ೫ ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ. ಒಟ್ಟಾರೆ ಜಿಲ್ಲೆಯಲ್ಲಿ ೧೨ ಮತಗಟ್ಟೆಗಳನ್ನು ಸ್ಥಾಪಿಸಿದಂತಾಗುತ್ತದೆ ಎಂದರು.
ಚಾಮರಾಜನಗರ ತಾಲ್ಲೂಕಿಗೆ ಸಂಬಂಧಿಸಿದಂತೆ ತಾಲ್ಲೂಕು ಕಚೇರಿಯಲ್ಲಿ ಸ್ಥಾಪಿಸಲಾಗಿದ್ದ ಮತಗಟ್ಟೆಗಳಿಗೆ ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲು ಕೊಠಡಿಗಳು ಲಭ್ಯವಿಲ್ಲದೇ ಇರುವುದರಿಂದ, ಸದರಿ ಮತಗಟ್ಟೆಗಳನ್ನು (ಮತಗಟ್ಟೆ ಸಂಖ್ಯೆ ೫೯ ಮತ್ತು ೬೦) ಕರಿನಂಜನಪುರ ರಸ್ತೆಯ ಡಾ. ಬಿ.ಆರ್. ಅಂಬೇಡ್ಕರ್ ಭವನದ ಹತ್ತಿರವಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು (ಒಂದೇ ಕಟ್ಟಡದಲ್ಲಿ) ಇಲ್ಲಿಗೆ ಹಾಗೂ ಹನೂರು ತಾಲ್ಲೂಕಿಗೆ ಸಂಬಂಧಿಸಿದಂತೆ ಹನೂರು ತಾಲ್ಲೂಕು ಕಚೇರಿಯಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆಗೆ ಹೆಚ್ಚುವರಿ ಮತಗಟ್ಟೆಯನ್ನು ಸ್ಥಾಪಿಸಲು ಕೊಠಡಿಗಳು ಲಭ್ಯವಿಲ್ಲದೇ ಇರುವುದರಿಂದ, ಸದರಿ ಮತಗಟ್ಟೆಯನ್ನು (ಮತಗಟ್ಟೆ ಸಂಖ್ಯೆ ೬೪) ಹನೂರು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆ (ಬಿಆರ್ಸಿ ಕೇಂದ್ರ)ಕ್ಕೆ ಸ್ಥಳಾಂತರಿಸಲಾಗಿರುತ್ತದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ತಿಳಿಸಿದರು.
ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಚಿಕ್ಕಮಹದೇವು, ಎಸ್. ಬಾಲಸುಬ್ರಹ್ಮಣ್ಯ, ಮಹೇಶ್ಗೌಡ, ಬ್ಯಾಡಮೂಡ್ಲು ಬಸವಣ್ಣ, ಸಯ್ಯದ್ ಅಕ್ರಂ, ಬಿ.ಕೆ. ಕೃಷ್ಣ, ಚುನಾವಣಾ ಶಾಖೆಯ ಶಿರಸ್ತೇದಾರ್ ಬಸವರಾಜು ಸಭೆಯಲ್ಲಿ ಹಾಜರಿದ್ದರು.
