ಚಾಮರಾಜನಗರ:ಮಾದಕ ವ್ಯಸನದಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳು ದೂರವಿರುವುದು ಆರೋಗ್ಯ ಮತ್ತು ಸಮಾಜಕ್ಕೆ ಉತ್ತಮ ಎಂದು ಸಿವಿಲ್ ನ್ಯಾಯಾಧೀಶರಾದ ಬಿ.ಎಸ್. ಹೊನ್ನಸ್ವಾಮಿ ಅವರು ತಿಳಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯುಕ್ತಾಶ್ರಯದಲ್ಲಿ ನಡೆದ ಅಂತರಾಷ್ಟ್ರೀಯ ಮಾದಕ ವಸ್ತು ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಹಾಗೂ ಯುವ ಪೀಳಿಗೆ ಮಾದಕ ವ್ಯಸನದಂತಹ ದುಶ್ಚಟಕ್ಕೆ ಬಲಿಯಾಗಿ ಅಡ್ಡದಾರಿ ಹಿಡಿಯುವುದರಿಂದ ತಮ್ಮ ಅಮೂಲ್ಯವಾದ ಜೀವ ಜೀವನ ನಾಶಮಾಡಿಕೊಳ್ಳುತ್ತಿದ್ದಾರೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕಿದೆ. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಮತ್ತು ಪೊಲೀಸ್ ಇಲಾಖೆಯ ಪಾತ್ರವೂ ಈ ನಿಟ್ಟಿನಲ್ಲಿ ಪ್ರಮುಖವಾಗಿದೆ ಎಂದರು.
ಮುಖ್ಯ ಅತಿಥಿಗಳಾಗಿದ್ದ ನಗರದ ಪೊಲೀಸ್ ಇನ್ಸ್‌ಪೆಕ್ಟರ್ ಮಹದೇವಶೆಟ್ಟಿ ಅವರು ಮಾತನಾಡಿ ಮಕ್ಕಳನ್ನು ಒಬ್ಬಂಟಿಯಾಗಲೂ ಬಿಡಬೇಡಿ, ಏಕಾಂಗಿತನವೂ ಮಾದಕ ವ್ಯಸನಕ್ಕೆ ಕರೆದೊಯುತ್ತದೆ. ಮಾದಕ ಪದಾರ್ಥಗಳನ್ನು ಸೇವಿಸಿ ದಾಸರಾಗುವುದರಿಂದ ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳಲ್ಲಿಯೂ ತೊಡಗಲು ಕಾರಣವಾಗಬಹುದು. ಕೊನೆಯಲ್ಲಿ ಕಷ್ಟ ಅನುಭವಿಸಬೇಕಾಗುತ್ತದೆ ಎಂದು ಹೇಳಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನಗರದ ಮನೋರೋಗ ತಜ್ಞರಾದ ಡಾ. ರಾಜೇಶ್ ಅವರು ಮಾತನಾಡಿ ಯುವ ಜನತೆಯು ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯ ಹಾಗೂ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರುವುದಲ್ಲದೇ ಪ್ರಾಣ ಕಳೆದುಕೊಳ್ಳುವ ಹಂತಕ್ಕೆ ಬರುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮ ವಹಿಸುವುದು ಒಳಿತು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಎಂ. ವಿಶ್ವೇಶ್ವರಯ್ಯ ಅವರು ಮಾತನಾಡಿ ಯುವಜನರಿಗೆ ಮಾದಕ ವಸ್ತುಗಳ ಸೇವನೆ ಆಧುನಿಕತೆಯ ಆಕರ್ಷಣೀಯವೆನಿಸಿದೆ. ಆದರೆ ಇದರ ಗಂಭೀರ ಪರಿಣಾಮಗಳ ಬಗ್ಗೆ ಆರಂಬದಲ್ಲಿಯೇ ಎಚ್ಚರಿಸುವುದರಿಂದ ವಿದ್ಯಾರ್ಥಿಗಳನ್ನು ವ್ಯಸನ ಮುಕ್ತರಾಗಿಸಬಹುದು ಎಂದು ತಿಳಿಸಿದರು.
ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾಯಾದ ಡಾ. ಚಂದ್ರಶೇಖರ್, ಕುಟುಂಬ ಕಲ್ಯಾಣಾಧಿಕಾರಿ ಡಾ. ಅಂಕಪ್ಪ, ತಾಲೂಕು ಆರೋಗ್ಯಾಧಿಕಾರಿ ಡಾ. ಶ್ರೀನಿವಾಸ್, ಆರೋಗ್ಯ ಶಿಕ್ಷಣ ಅಧಿಕಾರಿ ದೊರೆಸ್ವಾಮಿ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.